ರೈತರ ಬೃಹತ್ ಪ್ರತಿಭಟನೆ; ಬಾರುಕೋಲು ಬೀಸಿ ಆಕ್ರೋಶ
ಬೆಂಗಳೂರು, ಸೆಪ್ಟೆಂಬರ್ 25: ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕದಲ್ಲಿಯೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರೈತರು ಬಾರುಕೋಲು ಬೀಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಂಗಳೂರಿನಲ್ಲಿ ನೂರಾರು ರೈತರು ಜವಾವಣೆಗೊಂಡಿದ್ದಾರೆ. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವಾರು ರೈತ ಮುಖಂಡರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ಸಂಚಾರ ವ್ಯವಸ್ಥೆ ಸುಗಮಗೊಳಿಸಲು 700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದಾರೆ.

'ಹೊಡೀರಪ್ಪ ಹೊಡೀರಿ...ಕಳ್ಳೆತ್ತುಗಳಿಗೆ ಹೊಡೀರಿ' ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಗುಂಪು ಗುಂಪಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.
ನೈಸ್ ರಸ್ತೆ ಬಂದ್ ಮಾಡಲು ಪ್ರಯತ್ನ : ಎಲೆಕ್ಟ್ರಾನಿಕ್ ಸಿಟಿ ಸಮೀಪ ನೈಸ್ ರಸ್ತೆಯನ್ನು ಬಂದ್ ಮಾಡಲು ಪ್ರಯತ್ನ ನಡೆಸಲಾಯಿತು. ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಎಲ್ಲಾ ರೈತ ಸಂಘಟನೆಗಳು ಸೇರಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.












Click it and Unblock the Notifications