ಸೋಮವಾರ ರೈತ ಸಂಘಟನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆ
ಬೆಂಗಳೂರು, ಜೂನ್ 09 : ಸೋಮವಾರ ಕರ್ನಾಟಕದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ರೈತರ ಪ್ರತಿಭಟನೆಯಿಂದಾಗಿ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ.
ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಜೂನ್ 10ರ ಸೋಮವಾರ ಪ್ರತಿಭಟನೆ ನಡೆಸಲಿವೆ. ರಾಜ್ಯದಲ್ಲಿರುವ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಯಲಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಲಿದೆ.
ರಾಜ್ಯದಲ್ಲಿ ಒಟ್ಟು 8 ಕಡೆ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಿದ್ದಾರೆ. ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

ಎಂಟು ಸ್ಥಳಗಳು : ಬೊಮ್ಮಸಂದ್ರ ಹೆದ್ದಾರಿ, ದೇವನಹಳ್ಳಿ ಟೋಲ್ ಪ್ರವೇಶ ದ್ವಾರ, ಚಿಕ್ಕಬಳ್ಳಾಪುರ ಟೋಲ್ ಪ್ರವೇಶ ದ್ವಾರ, ತುಮಕೂರು, ಕೋಲಾರ, ಚಿತ್ರದುರ್ಗ, ಆನೇಕಲ್ ಮತ್ತು ಹಾವೇರಿಯಲ್ಲಿ ರೈತರು ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.
2013ರಲ್ಲಿ ಕೇಂದ್ರ ಸರ್ಕಾರ ಭೂ ಸ್ವಾಧೀನ ಕಾಯ್ದೆ ಜಾರಿಗೆ ತಂದಿತ್ತು. ಕಾಯ್ದೆ ಪ್ರಕಾರ ಜಮೀನು ಪಡೆಯುವಾಗ ರೈತರ ಅನುಮತಿ ಪಡೆದು ಭೂ ಸ್ವಾಧೀನ ಮಾಡಬೇಕಿತ್ತು. ಆದರೆ, ಈಗ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಆದ್ದರಿಂದ, ರೈತರು ಹೋರಾಟಕ್ಕೆ ಇಳಿದಿದ್ದಾರೆ.












Click it and Unblock the Notifications