ಸಕ್ಕರೆ ಕಾಯಿಲೆ ಶಮನಗೊಳಿಸಿದ ಸಿದ್ದರಾಮಯ್ಯ!
ಬೆಳಗಾವಿ, ಡಿ. 3 : ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಬಂದಿದ್ದ ಸಕ್ಕರೆ ಕಾಯಿಲೆ ತಾತ್ಕಾಲಿಕವಾಗಿ ಶಮನವಾಗಿದೆ. ರೈತ ಮುಖಂಡರೊಂದಿಗೆ ಸಭೆ ನಡೆಸಿದ ಸಿಎಂ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ರೈತರು ಸುವರ್ಣ ಸೌಧದ ಎದುರು ನಡೆಸುತ್ತಿರುವ ಧರಣಿ ಹಾಗೂ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶವನ್ನು ಹಿಂಪಡೆದಿದ್ದಾರೆ.
ಸೋಮವಾರ ಸಿಎಂ ಸಿದ್ದರಾಮಯ್ಯ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯ ಕಬ್ಬು ಬೆಳೆಗಾರರ ನಿಯೋಗದೊಂದಿಗೆ ಮಾತುಕತೆ ನಡೆಸಿದರು. ಡಿ.6ರಂದು ಪ್ರಧಾನಿ ಡಾ.ಮನಮೋಹನ್ಸಿಂಗ್ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕಬ್ಬು ಬೆಳೆಯುವ ಎಲ್ಲ ರಾಜ್ಯಗಳ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡು, ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕೋರಲಾಗುವುದು ಎಂದು ಅವರು ರೈತರಿಗೆ ಭರವಸೆ ನೀಡಿದರು.(ಸಕ್ಕರೆ ಪ್ರಾಬ್ಲಂ ಬಗೆಹರಿಸಿದ ಸಿದ್ದು ಸರ್ಕಾರ)

ಮುಖ್ಯಮಂತ್ರಿ ಅವರ ಭರವಸೆಯಿಂದ ರೈತ ಮುಖಂಡರು ಸುವರ್ಣ ಸೌಧದ ಎದುರು ನಡೆಸುತ್ತಿರುವ ಧರಣಿ ಹಾಗೂ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶವನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಜೊತೆಗಿನ ಸಭೆಯ ಬಳಿಕ, ಡಿ. 9ರಂದು ರೈತ ಮುಖಂಡರ ಸಭೆ ಕರೆದು ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ಸಿಎಂ ಹೇಳಿದ್ದಾರೆ. (ಸೋಮವಾರ ಸದನದಲ್ಲಿ ಏನಾಯ್ತು?)
ಹೆಚ್ಚುವರಿ ಬೆಲೆ ಅಸಾಧ್ಯ : ರೈತ ಮುಖಂಡರೊಂದಿಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿ ಟನ್ ಕಬ್ಬಿಗೆ ಸರ್ಕಾರ ಸದ್ಯ ಘೋಷಣೆ ಮಾಡಿರುವ 2650 ರೂ. ಬೆಲೆಗೆ ಹೊರತಾಗಿ ಹೆಚ್ಚುವರಿ ಬೆಂಬಲ ಬೆಲೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಕಬ್ಬಿಗೆ ಈಗ ನಿಗದಿಪಡಿಸಿರುವ ದರ ನ್ಯಾಯಸಮ್ಮತವಾಗಿದೆ. ಆದ್ದರಿಂದೆ ಹೆಚ್ಚಿನ ಬೆಂಬಲ ಬೆಲೆ ನೀಡಲು ಸಾಧ್ಯವಿಲ್ಲ ಎಂದು ರೈತ ಮುಖಂಡರ ಮನವೊಲಿಸಿದರು.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 2650 ರೂ.ಗಳಿಗಿಂತ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ. ಸರ್ಕಾರ ಘೋಷಣೆ ಮಾಡಿರುವ ದರವನ್ನು ಸಕ್ಕರೆ ಕಾರ್ಖಾನೆಗಳು ನೀಡುವುದಿಲ್ಲ ಎನ್ನುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೂ ಶೀಘ್ರದಲ್ಲಿ ಸಭೆ ನಡೆಸಲಾಗುವುದು ಎಂದರು.











Click it and Unblock the Notifications