ಕೇಂದ್ರ ಮಾಜಿ ಸಚಿವ, ರೈತ ಮುಖಂಡ ಬಾಬಾಗೌಡ ಪಾಟೀಲ ನಿಧನ
ಬೆಳಗಾವಿ, ಮೇ 21: ಕರ್ನಾಟಕ ರಾಜ್ಯದಲ್ಲಿ ರೈತ ಹೋರಾಟಗಳ ಮೂಲಕ ಕ್ರಾಂತಿ ಮಾಡಿದ್ದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ (78) ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಬಾಗೌಡ ಪಾಟೀಲ, ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಿಧನರಾದರು. ಬಾಬಾಗೌಡ ಪಾಟೀಲರು ರೈತಪರ ಹೋರಾಟದಲ್ಲಿ ಸಕ್ರಿಯವಾಗಿದ್ದಲ್ಲದೆ, ರೈತಪರ ಹೋರಾಟದಿಂದ ಜನಮನ ಗಳಿಸಿದ್ದರು.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಚಿಕ್ಕ ಬಾಗೇವಾಡಿ ಗ್ರಾಮದಲ್ಲಿ 1945 ಜನವರಿ 6 ರಂದು ಕೃಷಿಕರಾದ ರುದ್ರಗೌಡ ಮತ್ತು ಗಂಗಮ್ಮನವರ ಮಗನಾಗಿ ಜನಿಸಿದರು. ನಂತರ ಬೆಳಗಾವಿ ಲೋಕಸಭಾ ಕ್ಷೇತದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಅದಕ್ಕೂ ಮೊದಲು 1989ರಲ್ಲಿ ಬೆಳಗಾವಿ ಗ್ರಾಮೀಣ ಮತ್ತು ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ರೈತ ಸಂಘದ ಅಭ್ಯರ್ಥಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ಬಾಬಾಗೌಡ ಪಾಟೀಲ, 1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು.
ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾಗಿ ದೇಶದ ಗ್ರಾಮಸಡಕ್ ಯೋಜನೆ ಜಾರಿಗೊಳಿಸಿದ ಕೀರ್ತಿ ಗಳಿಸಿದರು. ನಂತರ ರಾಜಕೀಯ ಏಳು, ಬೀಳು ಅನುಭವಿಸಿದ ಅವರು, ರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಿರುದ್ಧದ ರೈತ ಹೋರಾಟಗಳಲ್ಲಿ ಸಕ್ರಿಯವಾಗಿದ್ದರು.
ಗಣ್ಯರ ಸಂತಾಪ
ಬಾಬಾಗೌಡ ಪಾಟೀಲ ಅವರ ನಿಧನಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದು, ಒಂದು ಕಾಲದಲ್ಲಿ ಕರ್ನಾಟಕದ ದೊಡ್ಡ ರೈತ ನಾಯಕರಾಗಿ ಗುರುತಿಸಿಕೊಂಡಿದ್ದ ಬಾಬಾಗೌಡ ಪಾಟೀಲ್ ಅವರ ಹಠಾತ್ ನಿಧನ ರೈತ ಸಮುದಾಯದಕ್ಕೆ ದೊಡ್ಡ ಹಿನ್ನಡೆ ಎಂದು ಹೇಳಿದ್ದಾರೆ.
ರೈತ ಹೋರಾಟದಿಂದ ಪ್ರಬಲ ನಾಯಕರಾಗಿದ್ದರು. ಬಾಬಾಗೌಡ ಪಾಟೀಲರ ನಿಧನ ರಾಜ್ಯಕ್ಕೆ ಹಾಗೂ ರೈತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ನಿಧನದ ದುಃಖ ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಕೃಇ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ರೈತರ ಪರ ಧ್ವನಿಯಾಗಿ ನಾಡಿನ ಅನ್ನದಾತರ ಕಷ್ಟ- ನಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಅವರ ನಿಧನ, ವಿಶೇಷವಾಗಿ ರೈತ ಸಮುದಾಯಕ್ಕೆ ತುಂಬಾಲಾರದ ನಷ್ಟ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.












Click it and Unblock the Notifications