ಗಂಗಾವತಿ ಕೃಷಿ ವಿವಿ ಮಾ.6ಕ್ಕೆ ಲೋಕಾರ್ಪಣೆ; 30 ಸೀಟು ಲಭ್ಯ
ಕೊಪ್ಪಳ, ಮಾರ್ಚ್ 04: ಕೊಪ್ಪಳ ಜಿಲ್ಲೆಯ ಗಂಗಾವತಿಯ ನೂತನ ಕೃಷಿ ಮಹಾವಿದ್ಯಾಲಯದ ಪ್ರಾರಂಭೋತ್ಸವ ಸಮಾರಂಭ ಮಾರ್ಚ್ 6ರಂದು ನಡೆಯಲಿದೆ. ಕೃಷಿ ಸಚಿವ ಬಿ. ಸಿ. ಪಾಟೀಲ್ ಮಹಾವಿದ್ಯಾಲಯ ಲೋಕಾರ್ಪಣೆ ಮಾಡಲಿದ್ದಾರೆ.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಯಲಯ ರಾಯಚೂರು ವತಿಯಿಂದ ಗಂಗಾವತಿಯಲ್ಲಿ ನೂತನ ಕೃಷಿ ಮಹಾವಿದ್ಯಾಲಯದ ಪ್ರಾರಂಭಿಸಲಾಗುತ್ತಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಗಂಗಾವತಿ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಉದ್ಘಾಟನೆ ಮಾಡಲಿದ್ದಾರೆ. ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜಕುಮಾರ ಖತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಕೆ. ಎನ್. ಕಟ್ಟಿಮನಿ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಭಾಗವಹಿಸಲಿದ್ದಾರೆ.
ದಶಕಗಳ ಕನಸು; ಕೊಪ್ಫಳದಲ್ಲಿ ಕೃಷಿ ಮಹಾವಿದ್ಯಾಲಯದ ಪ್ರಾರಂಭವಾಗಬೇಕು ಎಂಬುದು ದಶಕಗಳ ಕನಸಾಗಿತ್ತು. ಹಿಂದಿನ ಸರ್ಕಾರ ವಿಶ್ವವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ಕೊಟ್ಟಿತ್ತು. ಆದರೆ, ಹಣ ಮಂಜೂರು ಮಾಡದ ಕಾರಣ ತರಗತಿಗಳು ಆರಂಭವಾಗಿರಲಿಲ್ಲ.
ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಆರಂಭಿಸಲು ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚನೆ ನೀಡಿದ್ದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಸಹ ಒಪ್ಪಿಗೆ ನೀಡಿತ್ತು. ಒಟ್ಟು 30 ಸೀಟುಗಳು ಲಭ್ಯವಿದೆ.
ಬಿಎಸ್ಸಿ ಅಗ್ರಿಕಲ್ಚರ್ ವಿಭಾಗಕ್ಕೆ ಸೀಟುಗಳನ್ನು ನಿಗದಿ ಮಾಡಲಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ. ಸಾಮಾನ್ಯ ಕೋಟಾದಡಿ 5, ಕೃಷಿ ವಲಯದಡಿ 3, ಕಲ್ಯಾಣ ಕರ್ನಾಟಕ ಸಾಮಾನ್ಯ ಅಭ್ಯರ್ಥಿಗಳಿಗೆ 11, ಕೃಷಿ ವಲಯಕ್ಕೆ 7, ವಿಶೇಷ ಕೋಟಾದಡಿ 4 ಸೀಟುಗಳು ಇವೆ.












Click it and Unblock the Notifications