ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡದ ಸರ್ಕಾರ: ಮಂಡ್ಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದ ರೈತರು
ಮಂಡ್ಯದಲ್ಲಿ ಅನ್ನದಾತರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದ್ದು ಏಕೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಮಂಡ್ಯ, ಫೆಬ್ರವರಿ, 23: ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ಹಾಗೂ ಹಾಲಿಗೆ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಡ್ಯದಲ್ಲಿ ರೈತ ಸಂಘ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಇದೀಗ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವಲ್ಲಿ ರೈತರು ಯಶಸ್ವಿಯಾಗಿದ್ದಾರೆ. ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್ನೊಂದಿಗೆ ಜಮಾಯಿಸಿದ ಸಾವಿರಾರು ರೈತರು, ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರು ಪೊಲೀಸರು ಅಳವಡಿಸಿದ್ದ ಬ್ಯಾರಿಕ್ಯಾಡ್ ಬೇಧಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನದ ಹಿನ್ನೆಲೆಯಲ್ಲಿ ಪೊಲೀಸರು ಅಳವಡಿಸಿದ್ದ ಬ್ಯಾರಿಕ್ಯಾಟ್ಗಳನ್ನು ದಾಟಿಕೊಂಡು ಟ್ರ್ಯಾಕ್ಟರ್ ಹಾಗೂ ಎತ್ತಿನಗಾಡಿಯನ್ನು ಜಿಲ್ಲಾಧಿಕಾರಿ ಆವರಣದಲ್ಲಿ ನಿಲ್ಲಿಸಿ ಆಕ್ರೋಶ ಹೊರಹಾಕಿದರು. ಹಾಗೆಯೇ ಜಿಲ್ಲಾಧಿಕಾರಿ ಕಚೇರಿಯ ಮುಖ್ಯದ್ವಾರದ ಸುತ್ತ ಚೌಕಕಾರದಲ್ಲಿ ಅಳವಡಿಸಿದ ಬ್ಯಾರಿಕ್ಯಾಡ್ಗಳನ್ನು ಕಿತ್ತು ರಸ್ತೆ ಅವುಗಳನ್ನು ಬದಿಗೆ ಎಳೆದು ತಂದರು.
ರಾಜ್ಯದ ಬಿಜೆಪಿ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಳೆದ 105 ದಿನದಿಂದ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ, ಹಾಲಿಗೆ ಪ್ರೋತ್ಸಾಹ ಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಲೇ ಇದ್ದರು. ಆದರೂ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಸಮಸ್ಯೆಗೆ ಸ್ಪಂದಿಸದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಬ್ಬಿಗೆ 4,500 ರೂ. ಹಾಗೂ ಹಾಲಿಗೆ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ರೈತರ ಯಾವುದೇ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ. ಇದೊಂದು ವಚನಭ್ರಷ್ಟ ಸರ್ಕಾರವಾಗಿದೆ. ರೈತರನ್ನು ಶೋಷಣೆ ಮಾಡುತ್ತಿದೆ. ಕೊಟ್ಟ ಮಾತಿಗೆ ತಪ್ಪಿದ ಸಿ.ಎಂ. ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ
ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿವೆ. ಆದರೂ ಯಾವೊಬ್ಬ ಶಾಸಕರೂ ಸದನದ ಒಳಗಾಗಲಿ ಅಥವಾ ಹೊರಗಾಗಲಿ ಮಾತನಾಡುತ್ತಿಲ್ಲ ಅಸಮಾಧಾನ ವ್ಯಕ್ತಪಡಿಸಿದರು. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿಕೊಂಡು ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ರೈತರು
ಇನ್ನು ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮೈಸೂರಿನ ನೇತ್ರಾವತಿ ಎಂಬಾಕೆ ನಗರದ ಸರ್. ಎಂ. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದರು. ರೈತರು ಬ್ಯಾರಿಕೇಡ್ ಬೇಧಿಸಿ ಒಳನುಗ್ಗುತ್ತಿದ್ದಂತೆಯೇ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಆಗ ಜಿಲ್ಲಾಧಿಕಾರಿಗಳ ಕಚೇರಿಗೆ ದಿಗ್ಬಂಧನ ಹಾಕುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ
ರೈತ ಸಂಘ ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನಕ್ಕೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿತ್ತು. ಬ್ಯಾರಿಕೇಡ್ ಬೇಧಿಸಿ ಒಳನುಗ್ಗುವ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿವಾಸದ ಬಳಿ ಸಮಾವೇಶ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರೈತ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ, ದರ್ಶನ್ ಪುಟ್ಟಣ್ಣಯ್ಯ, ಮಧುಚಂದನ್, ಪ್ರಸನ್ನ ಕುಮಾರ್, ರಾಜ್ಯ ರೈತ ಸಂಘದ ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಶ್ರೀನಿವಾಸ್, ಬೊಮ್ಮೇಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.












Click it and Unblock the Notifications