ಮಂಡ್ಯ : ರೈತ ನಂದೀಶ್ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಿಎಂ
ಮಂಡ್ಯ, ಸೆಪ್ಟೆಂಬರ್ 27 : ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ರೈತ ನಂದೀಶ್ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದರು. ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ನಂದೀಶ್ ಕುಟುಂಬದವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕುಟುಂಬಕ್ಕೆ 2 ಲಕ್ಷದ ಪರಿಹಾರದ ಚೆಕ್ ನೀಡಿ, ಸಾಂತ್ವನ ಹೇಳಿದರು.
ಸಾಲಬಾಧೆಯಿಂದಾಗಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರೈತ ನಂದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್. ಪುಟ್ಟರಾಜು ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಕೃಷಿ ಇಲಾಖೆ ವತಿಯಿಂದ ಸಹ 5 ಲಕ್ಷ ಪರಿಹಾರವನ್ನು ಕುಟುಂಬಕ್ಕೆ ನೀಡಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, 'ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಸ್ವಲ್ಪ ತಾಳ್ಮೆಯಿಂದ ಇರುವಂತೆ ಧೈರ್ಯ ಹೇಳಿದ್ದೆ. ಆದರೆ, ಕೆಲವರ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ' ಎಂದರು.
ಸಾಲಗಾರರ ಕಾಟ ತಾಳಲಾರದೆ ರೈತ ನಂದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದರು. ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ನಂದೀಶ್ ತಾಯಿ ಕಮಲಮ್ಮ ಅವರು ಆತ್ಮಹತ್ಯೆ ಬಗ್ಗೆ ಮಾತನಾಡಿದ್ದರು. 'ಸಾಲಗಾರನ ಹಿಂಸೆ ತಾಳಲಾರದೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ಶರಣಾಗುವ ಹಿಂದಿನ ರಾತ್ರಿ ಸಾಲಗಾರರು ನನ್ನ ಮಗನ ಬಳಿ ಇದ್ದ ಸ್ಕೂಟರ್ ಕಿತ್ತುಕೊಂಡರು. ರಸ್ತೆಯಲ್ಲಿ ಗಲಾಟೆ ಮಾಡಿದ್ದರು' ಎಂದು ಹೇಳಿದ್ದರು.












Click it and Unblock the Notifications