ಮನೆ ಬಾಡಿಗೆ, ಶಾಲಾ, ವಿದ್ಯುತ್ ಶುಲ್ಕ ಕಡಿತಕ್ಕೆ ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಏಪ್ರಿಲ್ 27: ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ಗಳನ್ನು ಮಾಡುತ್ತಾ ಸರ್ಕಾರದ ಮುಂದೆ ಕೆಲವು ಪ್ರಶ್ನೆಗಳನ್ನಿಟ್ಟಿದ್ದಾರೆ.
ರಾಮನಗರ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿ ಬಿಜೆಪಿ ಸರ್ಕಾರ ಸಾಧಿಸಿದ್ದಾದರೂ ಏನನ್ನು? ರೋಗ ನಿಯಂತ್ರಿಸಬೇಕಾದ ಸರ್ಕಾರವೇ ರೋಗ ಹಂಚಿದ್ದು ಸರ್ಕಾರದ ವೈಫಲ್ಯ ಅಲ್ಲದೆ ಮತ್ತೇನು? ನಿಮ್ಮದು ಸಣ್ಣ ರಾಜಕಾರಣ. ನನ್ನದಲ್ಲ ಎಂದು ಹೇಳಿದ್ದ ಅವರು ಮತ್ತೆ ಸೋಮವಾರ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
ಶಾಲಾ ಶುಲ್ಕ, ವಿದ್ಯುತ್ ಶುಲ್ಕ, ಮನೆ ಬಾಡಿಗೆಯಲ್ಲಿ ರಿಯಾಯಿತಿ ನೀಡಬೇಕಾಗಿದೆ. ದೇಶದ ಆರ್ಥಿಕತೆ ಇಷ್ಟು ಬೇಗ ಸುಧಾರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ತಕ್ಷಣವೇ ಆರ್ಥಿಕ ಸ್ಥಿತಿ ಯಥಾ ಸ್ಥಿತಿಗೆ ಮರಳುವುದಿಲ್ಲ
ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು ಎಂದು ಟ್ವೀಟ್ ಮಾಡಿದ್ದಾರೆ.

ಕಾಲೇಜು , ಶಾಲಾ ಶುಲ್ಕ ಕಡಿತಕ್ಕೆ ಆಗ್ರಹ
ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ.

ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹ
ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.

ರೈತರು, ಅಸಂಘಟಿತ ವಲಯಕ್ಕೆ ಆದ್ಯತೆ ನೀಡಿ
ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.












Click it and Unblock the Notifications