ಮುಂಗಾರು ಮಳೆ ಅಬ್ಬರ, ರೈತರು ಮುಂಜಾಗ್ರತೆಯಾಗಿ ಬೆಳೆ ವಿಮೆ ಮಾಡಿಸಿ
ಬಳ್ಳಾರಿ, ಜುಲೈ 25: ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ಜಲಾವೃತವಾಗುತ್ತಿದೆ. ಆದ್ದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಲು ಕರೆ ನೀಡಲಾಗಿದೆ.
ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಕೃಷಿ ಸಂಬಂಧಿತ ಬೆಳೆ ವಿಮೆ, ಮಳೆ ಹಾಗೂ ಪ್ರವಾಹ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಮುಂಜಾಗ್ರತಾ ಕ್ರಮವಾಗಿ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ ಎಂದು ಹೇಳಿದರು.

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದು, ಪ್ರವಾಹ ಹಾಗೂ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರು ಪರಿಹಾರ ಪಡೆಯಲು ನೋಂದಾಯಿಸಿಕೊಳ್ಳಬೇಕಿದ್ದು, ವಿಮೆ ನೋಂದಣಿಗೆ ಇದು ಸಕಾಲವಾಗಿದೆ ಎಂದು ತಿಳಿಸಿದರು.
ಬೆಳೆ ವಿಮೆಗಳ ವಿವರಗಳು: ಬಳ್ಳಾರಿ ಜಿಲ್ಲೆಯಲ್ಲಿ 1.6 ಲಕ್ಷ ರೈತರಿದ್ದು, ಇದರಲ್ಲಿ ಕೇವಲ 1,263 ರೈತರು ಮಾತ್ರ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಂಡಿದ್ದಾರೆ. ಇನ್ನು ಹೆಚ್ಚು ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳುವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ನೀಡಲಾಗುತ್ತಿದೆ. ಆಯಾ ತಾಲ್ಲೂಕು ತಹಶೀಲ್ದಾರ್ರಿಗೂ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನ ಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ವಿಮೆಗಾಗಿ ನೋಂದಾಯಿಸಲು ಜುಲೈ 31 ಮತ್ತು ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ ಹಾಗೂ ನೀರಾವರಿ ಬೆಳೆಗಳಾದ ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 31ರ ವರೆಗೆ ವಿಮೆಗೆ ನೋಂದಾಯಿಸಿಕೊಳ್ಳಲು ಅವಕಾಶ ಇರುತ್ತದೆ.
ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿ ಅಥವಾ ಬ್ಯಾಂಕ್ಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು, ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಕಂದಾಯ ಸಚಿವರ ಸೂಚನೆಯಂತೆ, ಸಣ್ಣ, ಅತಿಸಣ್ಣ ರೈತರನ್ನು ಗುರುತಿಸಲು ಮತ್ತು ಬೆಳೆ ಪರಿಹಾರ ವಿತರಣೆ ಅನುಕೂಲವಾಗುವಂತೆ, ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.78 ರಷ್ಟು ಪೂರ್ಣಗೊಂಡಿದೆ.
ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು 'ಲ್ಯಾಂಡ್ ಬೀಟ್' ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಕಂದಾಯ ಇಲಾಖೆಯಡಿ ಬರುವ ಸರ್ಕಾರ, ಗೋಮಾಳ ಸೇರಿದಂತೆ ಸರ್ಕಾರಿ ಆಸ್ತಿಗಳ ಭೌಗೋಳಿಕ ಗಡಿ ಮತ್ತು ಸರ್ವೇ ನಂಬರ್ ಒಳಗೊಂಡ ಮಾಹಿತಿಯ ಡಿಜಿಟಲ್ ದಾಖಲೆಗಳನ್ನು ಈ ತಂತ್ರಾಂಶ ಹೊಂದಲಿದೆ. ಜಿಲ್ಲೆಯಲ್ಲಿ ಇದಕ್ಕಾಗಿ 55 ಸಾವಿರ ಆಸ್ತಿ ಗುರುತಿಸಲಾಗಿದ್ದು, ಶೇ. 76 ರಷ್ಟು ಆಸ್ತಿಗಳಿಗೆ ಜಿಪಿಎಸ್ ದತ್ತಾಂಶ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಆಸ್ತಿ ಒತ್ತುವರಿ ತೆರವು ಪ್ರಕರಣಗಳಲ್ಲಿ ಇದರಿಂದ ಅನುಕೂಲವಾಗಲಿದೆ.
ಆರ್.ಟಿ.ಸಿ. ಮಾಲೀಕರ ಮರಣ ಪ್ರಕರಣಗಳಲ್ಲಿ ಆಸ್ತಿಯನ್ನು ಅವರ ಕುಟುಂಬಸ್ಥರ ಅಥವಾ ವಾರಸುದಾರರ ಹೆಸರಿನಲ್ಲಿ ವರ್ಗಾಯಿಸಲು ಜಿಲ್ಲೆಯಲ್ಲಿ ವಿಶೇಷವಾಗಿ ಪೌತಿ ಖಾತೆ ಅಭಿಯಾನ ನಡೆಸಲಾಗುವುದು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ. ಯಾವುದೇ ಕ್ಷಣದಲ್ಲಾದರೂ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ಗ್ರಾಮಗಳಿಗೆ ಡಂಗೂರ ಮೂಲಕ ಜಾಗ್ರತೆ ವಹಿಸುವಂತೆ ಪ್ರಚಾರ ನೀಡಲಾಗುತ್ತಿದ್ದು, ಸಂಭವನೀಯ ಪ್ರವಾಹ, ಬೆಳೆ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.












Click it and Unblock the Notifications