Heavy rain: ಮುಂದಿನ 3 ದಿನಗಳ ಕಾಲ ಚಾಮರಾಜನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
ಚಾಮರಾಜನಗರ, ನವೆಂಬರ್, 21: ಗಡಿಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಘಟಕ ಮಾಹಿತಿ ನೀಡಿದೆ.
ಚಾಮರಾಜನಗರ ಜಿಲ್ಲೆಯ ಹಲವು ಭಾಗಗಳಲ್ಲಿ ನವೆಂಬರ್ 22ರಿಂದ 25 ರವರೆಗೆ ಗುಡುಗು ಮಿಂಚು ಸಹಿತ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮಳೆ ಬೀಳುವ ಹಿನ್ನೆಲೆಯಲ್ಲಿ ನವೆಂಬರ್ 22ರಿಂದ 25 ರವರೆಗಿನ ಅವಧಿಯಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಣೆ, ಕೊಯ್ಲು, ಗೊಬ್ಬರ ಹಾಕುವುದನ್ನು ರೈತರು ಮುಂದೂಡುವುದು ಸೂಕ್ತ ಎಂದು ಹವಾಮಾನ ತಜ್ಞರು ರೈತರಿಗೆ ಸಲಹೆ ಕೊಟ್ಟಿದ್ದಾರೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಇನ್ನು ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸುಳಿಗಾಳಿಯ ಪರಿಣಾಮದಿಂದಾಗಿ ಇಂದಿನಿಂದ (ನವೆಂಬರ್ 21) 3 ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಪರಿಣಾಮ ರಾಜ್ಯದ ಮೇಲೆ ಅಷ್ಟೇನು ಆಗುವುದಿಲ್ಲ. ಆದರೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇಕಡಾ 39ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇಕಡಾ 31ರಷ್ಟು, ಉತ್ತರ ಒಳನಾಡು ಶೇಕಡಾ 74 ಹಾಗೂ ಮಲೆನಾಡಿನಲ್ಲಿ ಶೇಕಡಾ 17ರಷ್ಟು ಮಳೆ ಕೊರತೆ ಆಗಿದೆ. ಸದ್ಯ ಮಳೆ ಬಿಡುವು ಕೊಟ್ಟಿರುವುದರಿಂದ ಮುಂಗಾರು ಹಂಗಾಮಿನ ಕೊಯ್ಲು ಮಾಡುವಂತಹ ಭತ್ತ, ರಾಗಿ, ಶೇಂಗಾ ಮೊದಲಾದ ಬೆಳೆಗಳಿಗೆ ಅನುಕೂಲ ಆಗಿದೆ.
ಹಾಗೆಯೇ ಇಂದಿನಿಂದ (ನವೆಂಬರ್ 21) ನಾಳೆಯ (ನವೆಂಬರ್ 22)ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಹೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿನಿಲಿನ ವಾತಾವರಣವೇ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಒಂದು ದಿನ ಧಾರಾಕಾರ ಮಳೆ ಆಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದೇಶದ ಹಲವೆಡೆ ಭಾರೀ ಮಳೆ ಮುನ್ಸೂಚನೆ
ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಬುಧವಾರ (ನವೆಂಬರ್ 22) ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎಂದು ಇಲ್ಲಿ ತಿಳಿಯಿರಿ.
ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ ಸೇರಿದಂತೆ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಅಂಡಮಾನ್-ನಿಕೋಬಾರ್ ದ್ವೀಪಗಳು, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಂಭವ ಇದೆ ಎಂದು ಎಚ್ಚರಿಕೆ ಸಂದೇಶವನ್ನು ಭಾರತೀಯ ಹವಾಮಾನ ಇಲಾಖೆ ರವಾನಿಸಿದೆ.












Click it and Unblock the Notifications