ಮುಂಗಾರು ಬೆಳೆ ಸಮೀಕ್ಷೆ ರೈತರಿಗೆ ಸಹಕಾರಿ ಹೇಗೆ?
ಬಳ್ಳಾರಿ, ಸೆಪ್ಟೆಂಬರ್ 08; ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆ ಸಮೀಕ್ಷೆ ನಡೆಯುತ್ತಿದೆ. ರೈತರು ತಾವೇ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಈ ಸಮೀಕ್ಷೆಯಿಂದ ರೈತರಿಗೆ ಆಗುವ ಉಪಯೋಗ ಏನು? ಎಂದು ವಿವರಣೆ ನೀಡಲಾಗಿದೆ.
ಬಳ್ಳಾರಿಯ ಉಪ ಕೃಷಿ ನಿರ್ದೇಶಕ ಡಾ. ಎನ್. ಕೆಂಗೇಗೌಡ ಕುರುಗೋಡು ಹೋಬಳಿಯ ಮುಸ್ಟಘಟ್ಟ ಗ್ರಾಮದ ರೈತರೊಂದಿಗೆ ಬೆಳೆ ಸಮೀಕ್ಷೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ಕೊಟ್ಟರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಡಾ. ಎನ್. ಕೆಂಗೇಗೌಡ ಮಾತನಾಡಿ, "ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಅಪ್ಲಿಕೇಶನ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿದೆ" ಎಂದು ವಿವರಣೆ ನೀಡಿದರು.
ಬೆಳೆ ಸಮೀಕ್ಷೆಯೇ ಮೂಲ; "ರೈತರಿಗೆ ಸರ್ಕಾರಗಳ ಸೌಲಭ್ಯ ಸಿಗಲು ಬೆಳೆ ಸಮೀಕ್ಷೆಯೇ ಮೂಲವಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ರಕ್ಷಣೆಯಷ್ಟೇ ಮುಖ್ಯವಾಗಿ ಬೆಳೆ ಸಮೀಕ್ಷೆಯನ್ನು ಮಾಡಲು ಮುತುವರ್ಜಿ ವಹಿಸಬೇಕು" ಎಂದು ಡಾ. ಎನ್. ಕೆಂಗೇಗೌಡ ಕರೆ ನೀಡಿದರು.
"ರೈತರೇ ನೇರವಾಗಿ ಬೆಳೆ ಸಮೀಕ್ಷೆಯನ್ನು ಅಪ್ಲಿಕೇಶನ್ ಅನ್ನು ಮೊಬೈಲ್ನಲ್ಲಿ ಡೌನ್ಲೋಡ್ ಮಾಡಬಹುದು. ಹಿಂದೆಲ್ಲಾ ಅಧಿಕಾರಿಗಳು ಅಥವಾ ಗುತ್ತಿಗೆ ಸಿಬ್ಬಂದಿ ಬೆಳೆ ಸಮೀಕ್ಷೆ ಮಾಡುತ್ತಿದ್ದರು. ಆದರೆ ಈಗ ತಂತ್ರಜ್ಞಾನ ಬೆಳೆದಂತೆ ಎಲ್ಲವೂ ಬದಲಾಗಿದೆ. ಮೊಬೈಲ್ನಲ್ಲೇ ಬೆಳೆ ಸಮೀಕ್ಷೆ ಮಾಡಿ, ಬೆಳೆ ಹಾನಿಯಾದಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯಬಹುದಾಗಿದೆ" ಎಂದು ರೈತರಿಗೆ ವಿವರಣೆ ನೀಡಿದರು.
ಬೆಳೆ ಸಮೀಕ್ಷೆ ವಿಷಯದಲ್ಲಿ ಮೊದಲ ಹಂತದಲ್ಲಿ ರೈತರಿಗೆ ಬೆಳೆ ಸಮೀಕ್ಷೆ ಮಾಡಲು ಅವಕಾಶ ನೀಡಲಾಗುತ್ತದೆ. ಆನಂತರ ಬೆಳೆ ಸಮೀಕ್ಷೆ ಮಾಡಲು ಗುತ್ತಿಗೆ ಆಧಾರದ ಮೇಲೆ ಖಾಸಗಿ ವ್ಯಕ್ತಿಗಳನ್ನು ಕಳುಹಿಸಲಾಗುತ್ತದೆ. ಮೂರನೇ ಹಂತದಲ್ಲಿ ಖಾಸಗಿ ವ್ಯಕ್ತಿಗಳು ಕೊಟ್ಟ ಮಾಹಿತಿಯನ್ನು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸಿದರಷ್ಟೇ ಬೆಳೆ ಸಮೀಕ್ಷೆ ಅಂತಿಮವಾಗಲಿದೆ.
ರೈತರು ಪರಿಹಾರ ಸಿಗಲಿಲ್ಲ, ಬೆಳೆದ ಬೆಳೆಗೆ ಬದಲಾಗಿ ಬೇರೆ ಬೆಳೆ ನಮೂದಿಸಲಾಗಿದೆ ಎಂದು ಇಲಾಖೆಗಳಿಗೆ ದೂರು ಕೊಡುವುದನ್ನು ಬಿಟ್ಟು ಕಾಲಕಾಲಕ್ಕೆ ಬೆಳೆ ಸಮೀಕ್ಷೆಗೆ ಒತ್ತು ಕೊಡಬೇಕಿದೆ. ತಮ್ಮ ಜಮೀನಿನ ಬೆಳೆಯನ್ನು ತಾವೇ ಫೋಟೋ ಸಮೇತ ಸಮೀಕ್ಷೆ ನಡೆಸುವ ಅಪ್ಲಿಕೇಶನ್ನಲ್ಲಿ ಅಪ್ಲೋಡ್ ಮಾಡಬಹುದಾಗಿದೆ.
ಸರ್ಕಾರದ ಯೋಜನೆ ರೈತರಿಗೆ: ಪ್ರಕೃತಿ ವಿಕೋಪಗಳಾದಾಗ ನಷ್ಟದ ಸಮೀಕ್ಷೆ, ಬೆಳೆ ವಿಮೆ, ಬೆಂಬಲ ಬೆಲೆಯಡಿ ಖರೀದಿ, ಸಹಾಯಧನ, ಬೆಳೆ ಪರಿಹಾರ ಹೀಗೆ ಎಲ್ಲಕ್ಕೂ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ. ನಿಮ್ಮ ಜಮೀನಿನಲ್ಲಿ ಯಾವ ಬೆಳೆ ಬೆಳೆಯಾಗುತ್ತಿದೆ? ಎನ್ನುವುದರ ಆಧಾರದ ಮೇಲೆ ಸರ್ಕಾರದ ಯೋಜನೆಗಳು ರೈತರಿಗೆ ಸಿಗಲಿವೆ. ಹೀಗಾಗಿ ಎಲ್ಲ ರೈತರು ತಮ್ಮ ಜಮೀನಿನ ದಾಖಲೆಗಳ ಕಡೆ ಹೇಗೆ ಗಮನಹರಿಸುತ್ತೀರೋ ಹಾಗೇ ಬೆಳೆ ಸಮೀಕ್ಷೆಯನ್ನು ಮಾಡಬೇಕಾದ ಅನಿವಾರ್ಯತೆ ಇದೆ.
ಖಾರೀಫ್ ಫಾರ್ಮರ್ ಕ್ರಾಪ್ 2023-24 ಇದು ಬೆಳೆ ಸಮೀಕ್ಷೆ ಮಾಡಲು ಇರುವ ಅಪ್ಲಿಕೇಶನ್. ಸ್ಮಾರ್ಟ್ ಫೋನ್ಗಳಲ್ಲಿ ಪ್ಲೇ ಸ್ಟೋರ್ಗೆ ಹೋಗಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡರೆ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿಯೂ ಲಭ್ಯವಾಗಲಿದೆ.
ಬೆಳೆಯ ಫೋಟೋಗಳ ಜೊತೆಗೆ ಸರ್ವೆ ನಂಬರ್, ಬೆಳೆಯ ಸ್ಥಿತಿ ಎಲ್ಲವನ್ನೂ ಈ ಅಪ್ಲಿಕೇಶನ್ನಲ್ಲಿ ಡೌನ್ಲೋಡ್ ಮಾಡಬಹುದು. ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಈ ಅಪ್ಲಿಕೇಶನ್ ಅಭಿವೃದ್ದಿಪಡಿಸಿದ್ದು, ರೈತರಿಗೆ ತಿಳಿಯದಿದ್ದರೆ ಮನೆಯಲ್ಲಿನ ವಿದ್ಯಾವಂತರಿಂದ ಬೆಳೆ ಸಮೀಕ್ಷೆ ಮಾಡಿಸಬಹುದು.
ಬೆಳೆ ಸಮೀಕ್ಷೆ ಅಪ್ಲಿಕೇಶನ್ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನಾಗಲಿ ಅಥವಾ ತೋಟಗಾರಿಕಾ ಅಧಿಕಾರಿಗಳನ್ನಾಗಲಿ ಅಥವಾ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬಹುದು.












Click it and Unblock the Notifications