ಮುಂಗಾರು ಹಂಗಾಮು; ಮೆಕ್ಕೆಜೋಳ ಸಂರಕ್ಷಣೆಗೆ ಸಲಹೆಗಳು
ಬೆಂಗಳೂರು, ಜೂನ್ 22; ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದೆ. ರೈತರು ಬಿತ್ತನೆ ಮಾಡಿದ್ದು, ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದೆ. ಈಗಾಗಲೇ ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ಬಾಧೆ ಕಂಡುಬಂದಿದೆ.
ಕೃಷಿ ಇಲಾಖೆ ರೈತರು ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿ ಹುಳುವಿನ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ಸಲಹೆಯನ್ನು ನೀಡಿದೆ.
ಸಕಾಲದಲ್ಲಿ ಬಿತ್ತನೆ ಮಾಡುವುದು (ಜುಲೈ 15 ರವರೆಗೆ), ಮುಸುಕಿನ ಜೋಳದ ಜೊತೆ ಮಿಶ್ರ ಬೆಳೆ (ಮುಸುಕಿನ ಜೋಳ ಮತ್ತು ತೊಗರಿ) ಬಿತ್ತುವುದು, ಮೊಟ್ಟೆಗಳ ಗುಂಪು ಹಾಗೂ ಮೊದಲ ಹಂತದ ಮರಿಗಳಿರುವ ಎಲೆಗಳನ್ನು ಕಿತ್ತು ನಾಶಮಾಡಬೇಕು.
ಪ್ರತಿ ಎಕರೆಗೆ 30 ಪಕ್ಷಿ ಸೂಚಿಗಳನ್ನು ನೆಡಬೇಕು. 30 ದಿನಗಳ ಬೆಳೆಯಲ್ಲಿ ಪ್ರತಿ ಎಕರೆಗೆ 15ರಂತೆ ಮೋಹಕ ಬಲೆಗಳನ್ನು ಅಳವಡಿಸಬೇಕು. ತತ್ತಿಗಳ ಪರತಂತ್ರ ಜೀವಿಯಾದ ಟ್ರೈ ಕೊಗ್ರಾಮ ಪ್ರೀಟಿಯೋಸಮ್ ಅನ್ನು ಪ್ರತಿ ಎಕರೆಗೆ 50 ಸಾವಿರದಂತೆ (3 ಟ್ರೈ ಕೋಕಾರ್ಡ್ಗಳನ್ನು) ನಿರ್ಧರಿತ ಅಂತರದಲ್ಲಿ ಬೆಳೆಗಳಲ್ಲಿ ಬಿಡಬೇಕು.

ಮೆಟರೈಜೀಂ ಅನಿಸೋಪ್ಲಿಯೆ (1*10/8 ಸಿಎಫ್ಯು/ಗ್ರಾಂ) 5 ಗ್ರಾಂ. ಪ್ರತಿ ಲೀಟರ್ ನೀರಿಗೆ ಅಥವಾ ನ್ಯೂಮೋರಿಯಾ ರಿಲೈ (1*10/8 ಸಿಎಫ್ಯು/ಗ್ರಾಂ) ಅನ್ನು 3 ಗ್ರಾಂ ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಗೆ ಸಿಂಪಡಣೆ ಮಾಡಬೇಕು.
ಲದ್ದಿ ಹುಳುವಿನಿಂದ ಬೆಳೆಗೆ ಶೇ.10 ರಷ್ಟು (ಪ್ರತಿ 100 ಗಿಡಗಳಿಗೆ 10 ಗಿಡಗಳು) ಹಾನಿಯಾಗಿದ್ದಲ್ಲಿ ಶೇ. 5 ರ ಬೇವಿನ ಕಷಾಯ ( ಅಜಾಡಿರಕ್ಟಿನ್ 1500 ಪಿಪಿಎಂ) 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕು. ಶೇ.20 ರಷ್ಟು ಹಾನಿಯಾಗಿದ್ದಲ್ಲಿ ಎಮಾಮೆಕ್ಟಿನ್ ಬೆಂಜೋಯೇಟ್ ಶೇ 5 ಎಸ್.ಜಿ ಅನ್ನು 0.3 ಮಿ.ಲೀ. ಅಥವಾ ಥೈಯೋಡಿಕಾರ್ಬ್ನ್ನು 2 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸಬೇಕು. ಪ್ರತಿ ಸಿಂಪಡಣೆಯನ್ನು ಮುಂಜಾನೆ ಮತ್ತು ಸಾಯಂಕಾಲದಲ್ಲಿ ಮಾತ್ರ ಮಾಡಬೇಕು.
ವಿಶೇಷ ಸೂಚನೆ; ಕೀಟನಾಶಕ ಸುಳಿಯಲ್ಲಿ ಬೀಳುವಂತೆ ಮುಂಜಾನೆ ಅಥವಾ ಸಾಯಂಕಾಲದ ಸಮಯದಲ್ಲಿ ಸಿಂಪರಣೆ ಮಾಡಬೇಕು. ಸಿಂಪಡಣೆ ಮಾಡುವಾಗ ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಬಳಸಬೇಕು. ದ್ರಾವಣ ದೇಹದ ಮೇಲೆ ಬೀಳದಂತೆ ಹಾಗೂ ಉಸಿರಾಟದ ಮೂಲಕ ದೇಹ ಸೇರದಂತೆ ಎಚ್ಚರ ವಹಿಸಬೇಕು.
ರೈತರು ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.












Click it and Unblock the Notifications