ಭಾರೀ ಮಳೆ; ಹಾವೇರಿಯಲ್ಲಿ ಅಪಾರ ಪ್ರಮಾಣದ ಹಾನಿ
ಹಾವೇರಿ, ಆಗಸ್ಟ್, 12: "ಮುಂಗಾರಿನ ಅತಿವೃಷ್ಟಿಯಿಂದ ಈವರೆಗೆ ಜಿಲ್ಲೆಯಲ್ಲಿ 324 ಕೋಟಿ ರೂಪಾಯಿ ಮೊತ್ತದಷ್ಟು ಹಾನಿಯಾಗಿದೆ. ಎಸ್ಡಿಆರ್ಎಫ್ ಮಾರ್ಗಸೂಚಿ ಅನ್ವಯ 3,430 ಕೋಟಿ ರೂಪಾಯಿ ಪರಿಹಾರದ ಮೊತ್ತವಾಗುತ್ತದೆ" ಎಂದು ಹಾವೇರಿ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, "ಈಗಾಗಲೇ ಕಳೆದ ಎರಡು ದಿನದಿಂದ ಮಳೆ ಕಡಿಮೆಯಾಗಿದೆ. ಬೆಳೆಹಾನಿ ಸರ್ವೇಗೆ ಕೃಷಿ, ಕಂದಾಯ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತಂಡಗಳನ್ನು ರಚಿಸಲಾಗಿದೆ" ಎಂದರು.
ಹಾವೇರಿ; ಅಗ್ನಿವೀರರ ನೇಮಕಾತಿಗಾಗಿ ರ್ಯಾಲಿ
"ಈಗಾಗಲೇ ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 4,440 ಮನೆಗಳು ಹಾನಿಯಾಗಿರುವ ಕುರಿತಂತೆ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 2,540 ಪ್ರಕರಣಗಳನ್ನು ಕಂದಾಯ ಇಲಾಖೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರ್ ತಂಡ ಪರಿಶೀಲನೆ ನಡೆಸಿದೆ. 1,870 ಅರ್ಜಿಗಳು ಪರಿಶೀಲನೆಗೆ ಬಾಕಿ ಉಳಿದಿವೆ" ಎಂದು ವಿವರಣೆ ನೀಡಿದರು.
"ಮಳೆ ನಿಂತರೂ ಕೂಡ ಮನೆಹಾನಿ ಕುರಿತಂತೆ ಅರ್ಜಿಗಳು ಬಂದರೆ ಸ್ವೀಕರಿಸಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಅರ್ಜಿಗಳು ಬರದಿದ್ದರೂ ಸ್ಥಳೀಯ ಅಧಿಕಾರಿಗಳಿಗೆ ಹಾನಿ ಕುರಿತಂತೆ ಪರಿಶೀಲಿಸಿ ಮಾಹಿತಿಯನ್ನು ದಾಖಲಿಸುವಂತೆ ಸೂಚಿಸಲಾಗಿದೆ" ಎಂದು ಹೇಳಿದರು.
"1407 ಪ್ರಕರಣಗಳಲ್ಲಿ ಈಗಾಗಲೇ ಪರಿಹಾರ ನೀಡಲಾಗಿದೆ. 23 ಪ್ರಕರಣಗಳು ಸಂಪೂರ್ಣ ಹಾನಿಯಾದ ಪ್ರಕರಣಗಳಾಗಿವೆ ಹಾಗೂ 1,009 ಪ್ರಕರಣಗಳು ಬಿ2 ಪ್ರಕರಣಗಳಾಗಿವೆ. ಇವರು ತಲಾ 5 ಲಕ್ಷ ರೂಪಾಯಿ ಪರಿಹಾರ ಪಡೆಯಲು ಅರ್ಹರಾಗಿದ್ದಾರೆ. ಇನ್ನು 122 ಪ್ರಕರಣಗಳು ಬಿ1 ವರ್ಗಕ್ಕೆ ಸೇರುತ್ತವೆ. ಇಂತವರು 3 ಲಕ್ಷ ರೂಪಾಯಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಇನ್ನು 248 ಪ್ರಕರಣಗಳು ಸಿ ವರ್ಗಕ್ಕೆ ಸೇರಿದ್ದು, ಇವರು ತಲಾ 50 ಸಾವಿರ ರೂಪಾಯಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಈ ಬಾರಿ ಹೆಚ್ಚಿನ ಪ್ರಕರಣಗಳು ಬಿ1 ವರ್ಗಕ್ಕೆ ಸೇರಿವೆ" ಎಂದು ಮಾಹಿತಿ ನೀಡಿದರು
ಹಾವೇರಿ ಜಿಲ್ಲೆಯಲ್ಲಿ ಸತತ ಮಳೆಯಿಂದ ಬೆಳೆಗಳನ್ನು ಕಳೆದುಕೊಂಡಿದ್ದ ರೈತರಿಗೆ ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರವನ್ನು ನೀಡಲು ಮುಂದಾಗಿದ್ದೇವೆ. ಹಾನಿಯನ್ನು ವೀಕ್ಷಿಸಿದ ನಂತರ ಪರಿಹಾರದ ಮೊತ್ತವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.