Karnataka budget 2023: ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂಪಾಯಿ ವೆಚ್ಚದ ಅತೀದೊಡ್ಡ ಹೈಟೆಕ್ ಮಾರುಕಟ್ಟೆ ನಿರ್ಮಾಣ
ಕರ್ನಾಟಕ, ಜುಲೈ, 07: ಇಂದು (ಶುಕ್ರವಾರ) ಸಿಎಂ ಹಾಗೂ ಹಣಕಾಸು ಮಂತ್ರಿಯಾದ ಸಿದ್ದರಾಮಯ್ಯ ಅವರು 2023ನೇ ಸಾಲಿನ ಅಯವ್ಯಯವನ್ನು ಮಂಡನೆ ಮಾಡಿದ್ದಾರೆ. ಈ ವೇಳೆ ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.
ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತೀ ಹೆಚ್ಚಿನ ವಹಿವಾಟು ನಡೆಯುತ್ತದೆ. ಆದ್ದರಿಂದ ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.

ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲ ಆಗಲಿದೆ.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು 5 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.
10,000 ರೂಪಾಯಿ ಪರಿಹಾರ
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್ ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂಪಾಯಿ ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂಪಾಯಿ ಪರಿಹಾರ ಒದಗಿಸಲಾಗುವುದು.
ಅಲ್ಲದೆ "ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ" ಎಂಬ ಧ್ಯೇಯವಾಕ್ಯ ಹೊಂದಿರುವ "ನಂದಿನಿ"ಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ.
ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಚರ್ಮಗಂಟು ರೋಗ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇಕಡಾ 5-7ರಷ್ಟು ಇಳಿಕೆಯಾಗಿರುತ್ತದೆ. ಆದ್ದರಿಂದ ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.
12 ಕೋಟಿ ರೂ. ಪರಿಹಾರಧನ ವಿತರಿಸಲು ಕ್ರಮ
ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಸಾವನ್ನಪ್ಪಿವೆ. ಈ ಪೈಕಿ ಒಟ್ಟು 25,859 ಸಾವನ್ನಪ್ಪಿರುವ ಜಾನುವಾರುಗಳಿಗೆ 53 ಕೋಟಿ ರೂಪಾಯಿ ಪರಿಹಾರ ಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಸಾವನ್ನಪ್ಪಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು.
ಹಮಾಲರ ಮರಣ, ಪರಿಹಾರ ಹಣ ಹೆಚ್ಚಳ
ಮತ್ತೊಂದೆಡೆ ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎ.ಪಿ.ಎಂ.ಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570-600 ಕೋಟಿ ರೂ.ಗಳಷ್ಟಿದ್ದು, 2022-23ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ.
ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ.
"ಕಾಯಕ ನಿಧಿ" ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂಪಾಯಿಗಳಿಂದ 25,000 ರೂಪಾಯಿಗಳಿಗೆ ಹೆಚ್ಚಿಸಲಾಗುವುದು.












Click it and Unblock the Notifications