ಭೀಕರ ಬರ ಎದುರಿಸಲು ಸರ್ಕಾರ ಸನ್ನದ್ದ : ಸಿದ್ದರಾಮಯ್ಯ
ಬೆಂಗಳೂರು, ಫೆ. 14 : ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರ ಸಿದ್ದವಾಗಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದರು.
ಕಳೆದ 2015 ಮತ್ತು 2016ರಲ್ಲಿ ತೀವ್ರ ಮಳೆ ಅಭಾವದಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ರಾಸುಗಳಿಗೆ ಮೇವಿನ ಕೊರತೆ ಎದುರಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓಗಳು ಟ್ಯಾಂಕರ್ ಮೂಲಕ ನೀರು ಸರಬರಾಜು, ಗೋಶಾಲೆ ತೆರೆಯುವ ಮೂಲಕ ಎಲ್ಲಿಯೂ ಸಹ ಕುಡಿಯುವ ನೀರು ಮತ್ತು ಮೇವಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಸರ್ಕಾರದ ಅನ್ನಭಾಗ್ಯ ಯೋಜನೆಯ ಅನುಷ್ಠಾನದಿಂದಾಗಿ ಇಂತಹ ಭೀಕರ ಬರಗಾಲದಲ್ಲೂ ಸಹ ಪರ ರಾಜ್ಯಗಳಿಗೆ ಗುಳೆ ಹೋಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಅವರು ತಿಳಿಸಿದರು.
ಕಳೆದ ಏಪ್ರಿಲ್ 1ರಿಂದ ಇಲ್ಲಿಯವರೆಗೆ ಬರ ಪರಿಸ್ಥಿತಿ ಎದುರಿಸಲು 1,144 ಕೋಟಿ ವಿನಿಯೋಗಿಸಲಾಗಿದ್ದು ಈ ಪೈಕಿ ಕುಡಿಯುವ ನೀರಿಗೆ 800 ಕೋಟಿ ರೂಗಳನ್ನು ಖರ್ಚು ಮಾಡಲಾಗಿದೆ ಎಂದು ವಿವರಣೆ ನೀಡಿದರು.
ಮೊದಲನೇ ಹಂತದಲ್ಲಿ 189 ತಾಲ್ಲೂಕುಗಳಿಗೆ ತಲಾ 50 ಲಕ್ಷ, ಎರಡನೇ ಹಂತದಲ್ಲಿ 150 ಕ್ಷೇತ್ರಗಳಿಗೆ 60 ಲಕ್ಷ ರೂ ಮತ್ತು ಮೂರನೇ ಹಂತದಲ್ಲಿ 35 ಕ್ಷೇತ್ರಗಳಿಗೆ 50 ಲಕ್ಷ ರೂಗಳನ್ನು ಕುಡಿಯುವ ನೀರು, ಉದ್ಯೋಗ, ಮೇವು ಒದಗಿಸಲು ಹಣ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
ಸರ್ಕಾರಿ ಮತ್ತು ಖಾಸಗಿ ಜಾಗಗಳಲ್ಲಿ ಮೇವು ಬೆಳೆಯಲು ಮೇವಿನ ಕಿಟ್ ಒದಗಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಅಂತರ್ಜಲ ಅಭಿವೃದ್ದಿಪಡಿಸಲು ಕೆರೆ ಸಂಜೀವಿನಿ ಯೋಜನೆಯಡಿ 50 ಕೋಟಿ ರೂ ವೆಚ್ಚದಲ್ಲಿ ಕೆರೆಗಳ ಹೂಳೆತ್ತುವ, 116 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾಗಿದೆ ಎಂದರು.
ಪರಿಶಿಷ್ಟ/ಜಾತಿ ಮತ್ತು ಪಂಗಡದ ಜನರ ಜನಸಂಖ್ಯೆಗನುಗುಣವಾಗಿ ಅನುದಾನ ಬಿಡುಗಡೆಯಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲೇ ಎರಡನೇ ಸ್ಥಾನ ಪಡೆದಿದ್ದು, 2014-15ರಲ್ಲಿ ಪರಿಶಿಷ್ಟ ಜಾತಿ/ಪಂಗಡ ಸಂರಕ್ಷಣಾ ಕ್ರಾಂತಿಕಾರಕ ಕಾಯ್ದೆಯನ್ನು ಜಾರಿಗೆ ತಂದ ರಾಜ್ಯ ನಮ್ಮದಾಗಿದೆ ಎಂದು ಹೆಮ್ಮೆಯಿಂದ ಹೇಳಿದರು.












Click it and Unblock the Notifications