ಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡಲು ಕೇಂದ್ರಕ್ಕೆ ಕರ್ನಾಟಕದ ಪತ್ರ
Recommended Video

ಬೆಂಗಳೂರು, ಡಿಸೆಂಬರ್ 19 : ಕರ್ನಾಟಕ ಸರ್ಕಾರ ರಾಜ್ಯದ ರೈತರ ಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಸಾಲಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಮಂಗಳವಾರ ಹಣಕಾಸು ಖಾತೆ ರಾಜ್ಯ ಸಚಿವ ಶಿವಪ್ರತಾಪ್ ಶುಕ್ಲಾ ಅವರು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕೃಷಿ ಸಾಲಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳು ಸಲ್ಲಿಸಿದ್ದ ಬೇಡಿಕೆಗಳ ಬಗ್ಗೆ ಅವರು ವಿವರಣೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ರೈತರು ವಾಣಿಜ್ಯ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಸಹಕಾರಿ ಬ್ಯಾಂಕ್ಗಳಿಂದ ಪಡೆದಿರುವ ಕೃಷಿ ಸಾಲದಲ್ಲಿ ಶೇ 50ರಷ್ಟನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ ಎಂದು ರಾಜ್ಯಸಭೆಗೆ ವಿವರಣೆ ಕೊಟ್ಟರು.

'ಕೇಂದ್ರ ಸರ್ಕಾರದ ಮುಂದೆ ಯಾವುದೇ ಸಾಲಗಳನ್ನು ಮನ್ನಾ ಮಾಡುವ ಪ್ರಸ್ತಾವೆನೆ ಇಲ್ಲ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು.
ಜೆಡಿಎಸ್ ಪಕ್ಷದ 2018ರ ಚುನಾವಣಾ ಪ್ರಣಾಳಿಕೆಯಲ್ಲಿಯೇ ರೈತ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕರ್ನಾಟಕ ಸರ್ಕಾರ 37,159 ಕೋಟಿ ಸಾಲವನ್ನು ಮನ್ನಾ ಮಾಡುವ ಪ್ರಕ್ರಿಯೆ ಆರಂಭಿಸಿದೆ. ರೈತರ ಸಾಲಮನ್ನಾ ಮಾಡಿ ಅವರಿಗೆ ಋಣುಕ್ತ ಪತ್ರವನ್ನು ವಿತರಣೆ ಮಾಡಲಾಗುತ್ತದೆ. ರಾಜ್ಯದ 44.89 ಲಕ್ಷ ರೈತರು ಈ ಯೋಜನೆ ಫಲಾನುಭವಿಗಳಾಗಲಿದ್ದಾರೆ.












Click it and Unblock the Notifications