ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕೇರಳ ಸಿಎಂ
ತಿರುವನಂತಪುರಂ, ಡಿಸೆಂಬರ್ 31: ಕೇಂದ್ರ ಸರ್ಕಾರ ಪರಿಚಯಿಸಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ಶೀಘ್ರವೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಮಂಡಿಸಿದರು.
ಪ್ರತಿಭಟನಾನಿರತ ರೈತರಿಗೆ ಸಹಕಾರ ನೀಡುವುದು ರಾಜ್ಯದ ಕರ್ತವ್ಯ. ಈ ಕಾಯ್ದೆಗಳ ಮೂಲಕ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ರೈತರ ಪ್ರತಿಭಟನೆ ಹೀಗೇ ಮುಂದುವರೆದರೆ ದೇಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆ ಮುಂದುವರೆದರೆ ಕೇರಳದ ಮೇಲೂ ಪರಿಣಾಮ ಬೀರುತ್ತದೆ. ಬೇರೆ ರಾಜ್ಯಗಳಿಂದ ಇಲ್ಲಿಗೆ ಕೃಷಿ ಉತ್ಪನ್ನಗಳು ಬರದೇ ಇದ್ದರೆ, ಮುಂದಿನ ಸ್ಥಿತಿ ಹೇಗಿರಬಹುದು ಎಂದು ಪ್ರಶ್ನಿಸಿದರು.
ಕೇಂದ್ರ ಪರಿಚಯಿಸಿರುವ ಕೃಷಿ ಮಾರುಕಟ್ಟೆ ಕಾಯ್ದೆ, ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕು (ತಿದ್ದುಪಡಿ) ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಗುರುವಾರ ವಿಶೇಷ ಅಧಿವೇಶನ ಕರೆಯಲಾಗಿತ್ತು. ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಮಂಡಿಸಿ, ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಯಿತು.

ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ತಿಂಗಳಿನಿಂದಲೂ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಐತಿಹಾಸಿಕ ಪ್ರತಿಭಟನೆ. ಈ ಕಾಯ್ದೆಗಳು ರೈತವಿರೋಧಿ ಮಾತ್ರವಲ್ಲದೇ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ ಎಂದು ಪಿಣರಾಯಿ ವಿಜಯನ್ ದೂರಿದರು. ಈ ಪ್ರತಿಭಟನೆ ಸಲುವಾಗಿ ಇದುವರೆಗೂ 32 ರೈತರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ವಿಧಾನಸಭೆಯಲ್ಲಿ ಮನವಿ ಮಾಡಲಾಯಿತು. ಕೇರಳದ ಬಿಜೆಪಿ ಶಾಸಕ ರಾಜಗೋಪಾಲ್ ಕೂಡ ಈ ನಿರ್ಣಯಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.












Click it and Unblock the Notifications