ಐಪಿ ಸೆಟ್ ಆರ್ಆರ್ ನಂಬರ್ಗೆ ಆಧಾರ್ ಜೋಡಣೆ. ರೈತರಿಗೆ ಆತಂಕ ನಿವಾರಿಸಿದ ಸಚಿವರು
ಬಳ್ಳಾರಿ, ಜುಲೈ 13: ವಿದ್ಯುತ್ ಸರಬರಾಜು ಕಂಪನಿಗಳ ನಿರ್ದೇಶನದಂತೆ ಐಪಿ ಸೆಟ್ ಆರ್ಆರ್ ನಂಬರ್ಗೆ ಆಧಾರ್ ನಂಬರ್ ಜೋಡಣೆ ಮಾಡುವ ಕಾರ್ಯವನ್ನು ಆರಂಭಿಸಲಾಗಿದೆ. ಈ ಪ್ರಕ್ರಿಯೆ ರೈತರಿಗೆ ಆತಂಕವನ್ನು ಮೂಡಿಸಿದೆ. ನಂಬರ್ ಲಿಂಕ್ ಮಾಡದಿದ್ದರೆ ಸಬ್ಸಿಡಿ ಬಂದ್ ಮಾಡಲಾಗುತ್ತದೆ ಎಂಬ ಸುದ್ದಿಯೂ ಹಬ್ಬಿದೆ.
ಇಂಧನ ಸಚಿವ ಕೆ. ಜೆ. ಜಾರ್ಜ್ ಈ ಕುರಿತು ರೈತರ ಆತಂಕ ನಿವಾರಣೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದ ಸಚಿವರು ಈ ಕುರಿತು ಸ್ಪಷ್ಟನೆ ನೀಡಿದರು.

"ರಾಜ್ಯದಲ್ಲಿ ಐಪಿ ಸೆಟ್ ಆರ್ಆರ್ ನಂಬರ್ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ. ಐಪಿ ಸೆಟ್ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ಗಳ ಆರ್ಆರ್ ನಂಬರ್ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ" ಎಂದು ಸಚಿವ ಕೆ. ಜೆ. ಜಾರ್ಜ್ ಸ್ಪಷ್ಟಪಡಿಸಿದರು.
ಸಚಿವರ ಸ್ಪಷ್ಟನೆಗಳು: ಇಂಧನ ಸಚಿವ ಕೆ. ಜೆ. ಜಾರ್ಜ್ ಮಾತನಾಡಿ, "ರಾಜ್ಯದಲ್ಲಿ 10 ಹೆಚ್ಪಿವರೆಗಿನ ಕೃಷಿ ಪಂಪ್ ಸೆಟ್ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು? ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ" ಎಂದರು.
"ಅಕ್ರಮ ಪಂಪ್ ಸೆಟ್ಗಳಿಂದಾಗಿ ಸಕ್ರಮ ಪಂಪ್ಸೆಟ್ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್ಗಳ ಆರ್ಆರ್ ನಂಬರ್ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್ಗಳಿವೆ? ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು? ಎಂಬ ಸ್ಪಷ್ಟತೆ ಸಿಗುತ್ತದೆ. ಅದಕ್ಕೆ ತಕ್ಕಂತೆ ಸಮರ್ಪಕ ವಿದ್ಯುತ್ ಪೂರೈಸಲು ಅನುಕೂಲವಾಗುತ್ತದೆ" ಎಂದು ಹೇಳಿದರು.
"ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ 10 ಹೆಚ್ಪಿಗಿಂತ ಹೆಚ್ಚು ಸಾಮರ್ಥ್ಯದ ಅಕ್ರಮ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿದೆ" ಎಂದು ಸಚಿವರು ತಿಳಿಸಿದರು.
"ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ಗಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು" ಎಂದರು.
ಸಚಿವರ ಮಾತನಾಡಿದ ಇತರ ಅಂಶಗಳು
* ಬರಗಾಲದ ಸಂದರ್ಭದಲ್ಲೂ ರಾಜ್ಯದ ರೈತರಿಗೆ ದಿನದ 7 ಗಂಟೆ ವಿದ್ಯುತ್ ಪೂರೈಸಲಾಗಿದೆ. ಲೋಡ್ ಶೆಡ್ಡಿಂಗ್ ಮಾಡಿಲ್ಲ. ಭವಿಷ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಲಭ್ಯವಿರುತ್ತದೆ. ಆದರೂ ಬೇರೆ ಬೇರೆ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇವೆ.
* ವಿದ್ಯುತ್ ಟ್ರಾನ್ಸ್ಫಾರ್ಮರ್ಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಅಕ್ರಮ ಐಪಿ ಸೆಟ್ಗಳನ್ನು ಸಕ್ರಮಗೊಳಿಸಲಾಗುವುದು. ಅದಕ್ಕಿಂತ ಹೆಚ್ಚು ಅಂತರವಿರುವ ಕಡೆಗಳಲ್ಲಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ 30 ಮತ್ತು ರಾಜ್ಯ ಸರ್ಕಾರದಿಂದ ಶೇ 50 ಸಬ್ಸಿಡಿ ನೀಡಲಾಗುತ್ತದೆ. ರೈತರು ಶೇ 20ರಷ್ಟು ಮೊತ್ತ ಭರಿಸಿ ಪಂಪ್ ಸೆಟ್ ಹಾಕಿಸಿಕೊಳ್ಳಬಹುದು.
* ರಾಜ್ಯದಲ್ಲಿ 2000 ಲೈನ್ಮೆನ್ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ಮೆನ್ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ಮೆನ್ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ಮೆನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುತ್ತದೆ.












Click it and Unblock the Notifications