ಕೊಪ್ಪಳ ಮಾವು ಮೇಳ ಯಶಸ್ವಿ; 1.75 ಕೋಟಿಗೂ ಹೆಚ್ಚು ವಹಿವಾಟು
ಕೊಪ್ಪಳ, ಜೂನ್ 01; ತೋಟಗಾರಿಕೆ ಇಲಾಖೆಯಿಂದ ಮೇ 23ರಿಂದ 31ರವರೆಗೆ ಕೊಪ್ಪಳ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ 'ಕೊಪ್ಪಳ ಮಾವು ಮೇಳ-2023' ಯಶಸ್ವಿಯಾಗಿದೆ. ಮಾವು ಮೇಳದಲ್ಲಿ ಅಂದಾಜು 25 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದು, 1.75 ಕೋಟಿ ರೂ. ಗೂ ಹೆಚ್ಚಿನ ವಹಿವಾಟು ನಡೆದಿದೆ. ಹಿಂದಿನ ವರ್ಷದ ಮೇಳಕ್ಕಿಂತಲೂ ಅತ್ಯಂತ ಯಶಸ್ವಿಯಾಗಿ ಈ ಬಾರಿ ಮೇಳ ನಡೆದಿದ್ದು, ಗ್ರಾಹಕರು ಹೆಚ್ಚು ಮಾವು ಖರೀದಿಸಿ ದಾಖಲೆ ನಿರ್ಮಿಸಿದ್ದಾರೆ.
ಮಾವು ಬೆಳೆಯುವ ರೈತರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯು 9 ದಿನಗಳ ಕಾಲ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಿತ್ತು. 55ಕ್ಕೂ ಹೆಚ್ಚು ರೈತರು ಮೇಳದಲ್ಲಿ ಭಾಗವಹಿಸಿದ್ದರು. ಮೇಳದಲ್ಲಿ ಮಾವು ಮಾರಾಟ ಮಾಡಲು ರೈತರು ಹಾಗೂ ರೈತ ಉತ್ಪಾದಕ ಸಂಘಗಳು, ಹಾಪ್ಕಾಮ್ಸ್, ಇಲಾಖಾ ತೋಟಗಾರಿಕೆ ಕ್ಷೇತ್ರಗಳಿಗೆ ತಮ್ಮ ಉತ್ಪನವನ್ನು ಮಾರಾಟ ಮಾಡಲು 22 ಮಾರಾಟ ಮಳಿಗೆಗಳನ್ನು ಉಚಿತವಾಗಿ ತೆರೆಯಲಾಗಿತ್ತು.

170 ಟನ್ಗೂ ಹೆಚ್ಚು ತಳಿಗಳು; ಕೊಪ್ಪಳ ಮಾವು ಮಾರಾಟ ಮೇಳದಲ್ಲಿ ಜಿಲ್ಲೆಯ 7 ತಾಲೂಕುಗಳ ಮಾವು ಬೆಳೆಗಾರರು ಭಾಗವಹಿಸಿದ್ದು, ರೈತರು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿದ 15ಕ್ಕೂ ಹೆಚ್ಚಿನ ವಿವಿಧ ಮಾವಿನ ತಳಿಯ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಿದರು. ಈ ಬಾರಿ ಸುಮಾರು 170 ಟನ್ಗೂ ಹೆಚ್ಚಿನ ವಿವಿಧ ತಳಿ ಮಾವಿನ ಹಣ್ಣುಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅಂದರೆ ಬೇರೆ ಬೇರೆ ಜಿಲ್ಲೆಗಳಿಗೆ ಸರಕು ವಾಹನಗಳ ಮೂಲಕ, ಬಸ್ಗಳ ಮೂಲಕ ದೂರದೂರಿನ ಜಿಲ್ಲೆಗಳಿಗೂ ತಲುಪಿಸಿ ಮಾರಾಟ ಮಾಡಲಾಗಿದೆ.
ಕೊಪ್ಪಳ ಕೇಸರ ತಳಿಗೆ ಕಲ್ಯಾಣ ಕರ್ನಾಟಕ ಅಷ್ಟೇ ಅಲ್ಲದೇ ರಾಜ್ಯದ ಉದ್ದಗಲಕ್ಕೂ ಬೇಡಿಕೆ ಬಂದಿದ್ದು ನೂರಾರು ಕೆಜಿ ಹಣ್ಣುಗಳನ್ನು ದೆಹಲಿಯಲ್ಲಿರುವ ಗ್ರಾಹಕರಿಗೂ ತಲುಪಿಸಲಾಗಿದೆ. ಮೇಳದಲ್ಲಿ ಬಳ್ಳಾರಿ ಮತ್ತು ವಿಜಯನಗರ ಹಾಗೂ ವಿವಿಧ ಹೊರ ಜಿಲ್ಲೆಯ ಮಾವು ಬೆಳೆಯುವ ರೈತರು ಸಹ ಭಾಗವಹಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಕೇಸರ್, ದಶಹರಿ ಮಾವಿಗೆ ಬೇಡಿಕೆ: ಮೇಳದಲ್ಲಿ ಕೇಸರ್ ಮತ್ತು ದಶಹರಿ ತಳಿಯ ಮಾವು ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು 110 ಟನ್ಗೂ ಹೆಚ್ಚು ಮಾರಾಟವಾಗಿದೆ. ಅದೇ ರೀತಿ ಬೆನೆಶಾನ್, ಕೇಸರ್, ದಶಹರಿ, ರಸಪುರಿ, ಸ್ವರ್ಣರೇಖಾ, ಇಮಾಮ ಪಸಂಧ, ಆಪೋಸು, ಮಲ್ಲಿಕಾ, ತೋತಾಪೂರಿ, ಸಕ್ಕರೆ ಗುಟ್ಟಿ, ಖಾದರ್, ಪುನಾಸ್ ಮತ್ತು ಉಪ್ಪಿನಕಾಯಿ ತಳಿ ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳು 50 ರಿಂದ 60 ಟನ್ಗೂ ಹೆಚ್ಚು ಮಾರಾಟವಾಗಿದೆ.
ಮಾವಿನ ಹಣ್ಣುಗಳನ್ನು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿ ಗ್ರಾಹಕರಿಗೆ ಕೈಗೆಟುವ ದರದಲ್ಲಿ ರೈತರು ನೇರವಾಗಿ ಮಾರಾಟ ಮಾಡಿದ್ದು, ಇದರಿಂದಾಗಿ ಗ್ರಾಹಕರಿಗೂ ಯೋಗ್ಯ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಹಣ್ಣುಗಳು ಲಭಿಸಿವೆ. ಗ್ರಾಹಕರು ಈ ಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇಳದಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಸರಕಾರಿ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದರು.
ಗಮನ ಸೆಳೆದ ದುಬಾರಿ ಮಾವಿನ ಹಣ್ಣು; ಮೇಳದಲ್ಲಿ ಜಗತ್ತಿನ ದುಬಾರಿ ಮಾವು 'ಮಿಯಾಜಾಕಿ' ತಳಿಯು ಗಮನ ಸೆಳೆಯಿತು. ಮಿಯಾಜಾಕಿ ಎಂಬ ಜಪಾನಿನ ಮಾವಿನ ತಳಿಯ ಹಣ್ಣನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಈ ಮಿಯಾಜಾಕಿ ಮಾವು ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿ ಮಾಧ್ಯಮಗಳ ಮುಖಾಂತರ ಸಾಕಷ್ಟು ಪ್ರಚಾರವನ್ನು ಪಡೆದಿದ್ದು ವಿಶೇಷವಾಗಿತ್ತು. ಮಿಯಾಜಾಕಿ ಮಾವನ್ನು ನೋಡಲು ಸಾರ್ವಜನಿಕರು, ರೈತರು ಹಾಗೂ ಹೊರ ಜಿಲ್ಲೆಗಳಿಂದ ಸಾಕಷ್ಟು ಜನರು ಆಗಮಿಸಿದ್ದರು. ಸಾಕಷ್ಟು ರೈತರು ತಮ್ಮ ತೋಟದಲ್ಲಿ ಮಿಯಾಜಾಕಿ ಮಾವಿನ ಹಣ್ಣಿನ ತಳಿ ಗಿಡಗಳ ಬೆಳೆಯುವ ಬಗ್ಗೆ ಇಲಾಖೆಯೊಂದಿಗೆ ಚರ್ಚಿಸಿ ಸಸಿಗಳ ಪೂರೈಸುವ ಕುರಿತು ಬೇಡಿಕೆ ಇಟ್ಟರು.
ಈ ಮೇಳದಲ್ಲಿ ಮಾವು ಬೆಳೆಗಾರರಿಗೆ ನೇರವಾಗಿ ಲಾಭ ದೊರೆತಿದೆ. ಮೇಳದಲ್ಲಿ ಕೊಪ್ಪಳ ಕೇಸರ್ ತಳಿಯ ಮಾವಿಗೆ ಹೆಚ್ಚಿನ ಬೇಡಿಕೆ ಬಂದು 2.50 ಕೆ.ಜಿ. ತೂಕದ ಕೊಪ್ಪಳ ಕೇಸರ್ ಎಂಬ ಬ್ರಾಂಡ್ ಬಾಕ್ಸ್ಗೆ ಹೆಚ್ಚಿನ ಬೇಡಿಕೆ ಬಂದು 10000 ಕ್ಕೂ ಹೆಚ್ಚಿನ ಬಾಕ್ಸ್ಗಳನ್ನು ಬೆಂಗಳೂರು ಮತ್ತು ದೆಹಲಿ, ಹುಬ್ಬಳ್ಳಿ, ಹೈದರಾಬಾದ್, ಮಂಗಳೂರು ಹಾಗೂ ವಿವಿಧ ನಗರಗಳಿಗೆ ರೈತರು ಪ್ಯಾಕ್ ಮಾಡಿ 25 ಟನ್ಗೂ ಹೆಚ್ಚಿನ ಕೇಸರ್ ಮಾವಿನ ಹಣ್ಣುಗಳನ್ನು ಬಾಕ್ಸ್ ಮುಖಾಂತರ ಮಾರಾಟ ಮಾಡಿರುತ್ತಾರೆ. ಮೇಳವನ್ನು ಪ್ಲಾಸ್ಟಿಕ್ ಮುಕ್ತವಾಗಿಡುವ ಉದ್ದೇಶದಿಂದ ಸಾರ್ವಜನಿಕರಿಗೆ ಹಣ್ಣುಗಳನ್ನು ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ ಇಲಾಖೆಯಿಂದ ಕೊಪ್ಪಳ ಕೇಸರ್ ಬ್ರಾಂಡ್ನ ಪೇಪರ್ ಬ್ಯಾಗ್ಗಳನ್ನು ನೀಡಲಾಯಿತು.












Click it and Unblock the Notifications