ನ.30ರಂದು ಬೆಳಗಾವಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ, ನವೆಂಬರ್, 26 : ರೈತರ ಸಮಸ್ಯೆ ಪರಿಹಾರಕ್ಕಾಗಿ ಆಗ್ರಹಿಸಿ ನವೆಂಬರ್ 30 ರಂದು ಬೆಳಗಾವಿಯ ಸುವರ್ಣಸೌಧ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮಾಜಿ ಸಚಿವ. ರೈತ ಸಂಘದ ಅಧ್ಯಕ್ಷ ಬಾಬಾ ಗೌಡ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ,30 ರಂದು ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಬಟನೆ ಮಾಡಲಾಗುವುದು. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಳೆ ಕೊರತೆ ಹಾಗೂ ಮಾರುಕಟ್ಟೆಯಲ್ಲಿನ ಕಿರಿಕಿರಿ ಹಾಗೂ ಕೂಲಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ. ಸಾಲದ ಹೊರೆಯಿಂದ ಕೃಷಿ ಚಟುವಟಿಕೆಗಳನ್ನು ನಿಲ್ಲಿಸುತ್ತಿದ್ದಾರೆ.
ಹಲವಾರು ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಆದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ಧ ಬಾಬಾಗೌಡ ಆಕ್ರೋಶ ವ್ಯಕ್ತಪಡಿಸಿದರು.
ರೈತರು ಬೇಡಿಕೆ ಈಡೇರಿಸುವಂತೆ ಹೋರಾಟ ಮಾಡಿದರೆ ಸರಕಾರಗಳು ಹೋರಾಟವನ್ನು ಪೋಲೀಸ್ ಬಲದಿಂದ ಹತ್ತಿಕ್ಕುತ್ತಿವೆ. ಸುಳ್ಳು ಆಶ್ವಾಸನೆ ನೀಡಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ದೂರಿದರು.
ರೈತರ ಬೇಡಿಕೆಗಳು:
60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳು 5 ಸಾವಿರ ರೂ.ಗೌರವ ಧನ ಕೊಡಬೇಕು. ಎಲ್ಲ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು, ಕುಡಿಯುವ ನೀರಿಗಾಗಿ ಜಲಾಶಯಗಳಿಂದ ಕೆರೆಗಳಿಗೆ ನೀರು ತುಂಬಿಸಬೇಕು.
ವಿದ್ಯುತ್ ಸಮಸ್ಯೆ ಸರಿಪಡಿಸಬೇಕು, ಮಹಾರಾಷ್ಟ್ರದಂತೆ ರಾಜ್ಯದಲ್ಲಿ ಕಬ್ಬಿನ ದರ ಕಾರ್ಖಾನೆಗಳಿಂದ ಕೊಡಿಸಬೇಕು, ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು ಎಂಬ ನಾನಾ ಬೇಡಿಕೆಗಳು ಇಟ್ಟುಕೊಂಡು ಪ್ರತಿಭಟನೆ ನಡೆಸಲಿದ್ದಾರೆ.












Click it and Unblock the Notifications