ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ರೈತರಿಗೆ ಸಾಲ ಸೌಲಭ್ಯ
ಕೊಡಗು, ನವೆಂಬರ್ 23; ಪಶುಸಂಗೋಪನೆ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯಾಪ್ತಿಗೆ ಒಳಪಡುವ ಎಲ್ಲಾ ಬ್ಯಾಂಕುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಹಮ್ಮಿಕೊಂಡಿವೆ.
ಹಣಕಾಸು ಸೇವೆಗಳ ಇಲಾಖೆಯು ಹೈನುಗಾರಿಕೆ, ಕುರಿ ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸುಬುಗಳನ್ನು ಕೈಗೊಳ್ಳಲು ಅವಶ್ಯ ಇರುವ ದುಡಿಮೆ ಬಂಡವಾಳವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹ ರೈತರಿಗೆ ಅರ್ಥಿಕ ನೆರವು ನೀಡಲಿವೆ.
ಸಾಲ ಅಭಿಯಾನವನ್ನು ಈಗಾಗಲೇ ಆರಂಭಿಸಲಾಗಿದ್ದು, ಮುಂದಿನ ಮೂರು ತಿಂಗಳವರೆಗೆ ಅಯೋಜಿಸಲು ಎಲ್ಲ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ರೈತರು ಅಗತ್ಯ ದಾಖಾಲಾತಿಗಳನ್ನು ಸಲ್ಲಿಸಿ, ದುಡಿಮೆ ಬಂಡವಾಳಕ್ಕೆ ಅರ್ಥಿಕ ನೆರವು ಪಡೆಯ ಬಹುದಾಗಿದೆ.

ಹೈನುಗಾರಿಕೆ, ಕುರಿ/ ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯಲ್ಲಿನ ರೈತರು ಆಯಾ ತಾಲೂಕಿನ ಸಹಾಯ ನಿರ್ದೇಶಕರು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಭೇಟಿ ಮಾಡಿ ಮಾಹಿತಿ ಪಡೆಯಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ರೂ. 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ.2 ರಷ್ಟು ಬಡ್ಡಿ ಸಹಾಯಧನ ಲಭ್ಯವಿದೆ. ಅಲ್ಲದೆ ಸಕಾಲದಲ್ಲಿ ಈ ಸಾಲವನ್ನು ಮರುಪಾವತಿ ಮಾಡಿದಲ್ಲಿ, ವಾರ್ಷಿಕ ಶೇ. 3ರಷ್ಟು ಹೆಚ್ಚುವರಿ ಬಡ್ಡಿ ಸಹಾಯಧನ ಸೌಲಭ್ಯ ಈ ಪಡೆಯಬಹುದು.
ಆಸಕ್ತ ರೈತರು ತಮ್ಮ ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಕೊಡಗು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಹೇಳಿದ್ದಾರೆ.
ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಿ; ಕೊಡಗು ಜಿಲ್ಲೆಯಲ್ಲಿ ಈಗಾಗಲೇ 2021ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗಿರುತ್ತದೆ. ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ, ಪಹಣಿಯಲ್ಲಿ ಬೆಳೆ ನಮೂದಿಸಲು ಉಪಯೋಗಿಸಲಾಗುತ್ತದೆ.
ಆದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ಸರಿಯಾಗಿ ನಮೂದಿಸಲಾಗಿದೆಯೇ? ಎಂಬುದನ್ನು ಬೆಳೆದರ್ಶಕ್ 2021-22 ಎಂಬ ಆಪ್ಲಿಕೇಶನ್ನಲ್ಲಿ ನೋಡಬಹುದು. ಬೆಳೆಗಳ ಫೋಟೋ ಅಪ್ಲೋಡ್ ಮಾಡಿರುವುದರಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಬೆಳೆದರ್ಶಕ್-2021 ಆ್ಯಪ್ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ತಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು.
ನೀವು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮಕೈಗೊಂಡಿದ್ದಾರೆ ಎಂದು ತಿಳಿಯಬಹುದು.
ಈ ರೀತಿಯಾಗಿ ದಾಖಲಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮೇಲ್ವಿಚಾರಕರಿಗೆ ತಂತ್ರಾಂಶದಲ್ಲಿ ಗುರುತಿಸಲಾಗುತ್ತದೆ. ಮೇಲ್ವಿಚಾರಕರು ಆಕ್ಷೇಪಣೆಗಳನ್ನು ಪರಿಶೀಲಿಸಿ ಅವುಗಳನ್ನು ತುರ್ತಾಗಿ ಇತ್ಯರ್ಥಪಡಿಸಲಾಗುತ್ತದೆ. ಮೇಲ್ವಿಚಾರಕರು ಸ್ವೀಕೃತವಾಗಿರುವ ಪ್ರತಿಯೊಂದು ಆಕ್ಷೇಪಣೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈಗಾಗಲೇ ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯೊಂದಿಗೆ ಹೋಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಬೇಕು.
ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯ ಆಧಾರದ ಮೇರೆಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರೇ ಖುದ್ದಾಗಿ ಮಹಜರು ದಾಖಲಿಸುವ ಮೂಲಕ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವರು.
ಬೆಳೆ ಸಮೀಕ್ಷೆ ಕೈಗೊಳ್ಳದೇ ಬಾಕಿ ಇರುವ ತಾಕುಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಬೆಳೆ ಸಮೀಕ್ಷೆ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಕೂಡಲೇ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications