ಬೆಂಬಲ ಬೆಲೆ ಯೋಜನೆ; 14 ಜಿಲ್ಲೆಯಲ್ಲಿ ಕಡಲೆ ಖರೀದಿ ಕೇಂದ್ರ ಸ್ಥಾಪನೆ
ಧಾರವಾಡ, ಫೆಬ್ರವರಿ 15; ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲು ಆದೇಶ ನೀಡಲಾಗಿದೆ. ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಪ್ರತಿ ಕ್ವಿಂಟಾಲ್ಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ 5230 ರೂ. ದರದಲ್ಲಿ ಖರೀದಿ ಮಾಡಲಾಗುತ್ತದೆ.
ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. "2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳನ್ನು ಪ್ರತಿ ಕ್ವಿಂಟಾಲ್ಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ದರದಂತೆ ಖರೀದಿ ಮಾಡಲು ಕೇಂದ್ರ ಸ್ಥಾಪನೆ ಮಾಡಲು ಆದೇಶ ಹೊರಡಿಸಲಾಗಿದೆ" ಎಂದರು.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಧಾರವಾಡ , ಕೊಪ್ಪಳ , ಬಳ್ಳಾರಿ , ಚಿತ್ರದುರ್ಗ , ಗದಗ , ಬೆಳಗಾವಿ , ವಿಜಯಪುರ , ಕಲಬುರಗಿ, ಯಾದಗಿರಿ , ಬೀದರ್ , ಬಾಗಲಕೋಟೆ , ದಾವಣಗೆರೆ , ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವಲಗುಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಬಾರಿಯಂತೆ ಈ ಸಾಲಿನಲ್ಲಿಯೂ ಕಡಲೆ ಖರೀದಿ ಕೇಂದ್ರ ತೆರೆಯಲಾಗುತ್ತದೆ.

ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ( ಮಾರ್ಕ್ಫೆಡ್ ) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಿದೆ. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ.
ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಖರೀದಿಸಲು ಅವಕಾಶವಿದೆ.
ಖರೀದಿ ಕೇಂದ್ರಗಳಲ್ಲಿ ಕಡಲೆಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು ಎನ್ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು.
ಎನ್ಐಸಿ ಅಭಿವೃದ್ಧಿಪಡಿಸಿರುವ ನೋಂದಣಿ ತಂತ್ರಾಂಶವನ್ನು ಈಗಾಗಲೇ ಪ್ರೂಟ್ಸ್ ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ . ಈ ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ, ಯುಐಎಡಿಐ ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಸಂಗ್ರಹ ಮಾಡಲಾಗಿದೆ.
ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ ಎನ್ಐಸಿ ತಂತ್ರಾಂಶದಿಂದ ನಾಫೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು. ನಾಫೆಡ್ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಕಡಲೆಕಾಳು ಖರೀದಿ ಕೇಂದ್ರಗಳಿಂದ ಖರೀದಿಸಬೇಕು.
ರೈತರ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಇಲಾಖೆಗಳಲ್ಲಿ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು ಮತ್ತು ಅಂತಹ ಸಿಬ್ಬಂದಿಗಳಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯು ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳ ಸಂಖ್ಯೆಯನ್ನು ತೆರೆಯಲು ನಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ನಿರ್ಧರಿಸಬೇಕು. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ನೇರ ನಗದು ವರ್ಗಾವಣೆ ಮೂಲಕ ಜಮಾ ಆಗುವಂತೆ ಪಾವತಿಸಬೇಕು. ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸಬಾರದು ಎಂದು ತಿಳಿಸಲಾಗಿದೆ.
ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇಮೇಲ್ ಮೂಲಕ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಬಗ್ಗೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.












Click it and Unblock the Notifications