ಕರ್ನಾಟಕ ಬಂದ್ ಸಂಪೂರ್ಣ ವಿಫಲ: ಐವನ್ ಡಿಸೋಜಾ
ಮಂಗಳೂರು ಮೇ 28: ರಾಜ್ಯದಲ್ಲಿ ಬಿಜೆಪಿ ಕರೆ ನೀಡಿದ್ದ ಬಂದ್ ಸಂಪೂರ್ಣ ವಿಫಲವಾಗಿದೆ. ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ರಾಜಕೀಯ ಗಿಮಿಕ್ ಎಂದು ರೈತರಿಗೆ ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಕರೆ ನೀಡಿದ್ದ ಬಂದ್ ಗೆ ಯಾರೂ ಕೈಜೋಡಿಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಟೀಕಿಸಿದರು.
ಮಂಗಳೂರಿನಲ್ಲಿ ಇಂದು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಯಾವುದೇ ರೈತರೂ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಇದರರ್ಥ ರೈತರಿಗೆ ನಮ್ಮ ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದರು.
ಈ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, 5 ವರ್ಷಗಳ ಕಾಲ ಜನಪರ ಆಡಳಿತ ನೀಡಲಿದೆ ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಬಂದ್ ಕರೆ ನೀಡಿ, ಯಾವುದೇ ಆಸ್ತಿಪಾಸ್ತಿಗೆ ಹಾನಿಯಾದರೆ ಬಿಜೆಪಿಯೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ನಂತರ ರಾಜ್ಯದ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆ ವಿಚಾರವಾಗಿ ಮಾತನಾಡಿ, ನನಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಪಕ್ಷದ ಹೈಕಮಾಂಡ್ ಗೆ ನನ್ನ ಕೆಲಸದ ಬಗ್ಗೆ ಗೊತ್ತಿದೆ. ಸಚಿವ ಸ್ಥಾನ ನೀಡಿದರೆ ನಿಭಾಯಿಸಲು ಸಮರ್ಥನಿದ್ದೇನೆ ಎಂದು ಅವರು ತಿಳಿಸಿದರು.












Click it and Unblock the Notifications