'ನನ್ನ ಬೆಳೆ ನನ್ನ ಹಕ್ಕು'; ರೈತರಿಂದ ಮುಂಗಾರು ಹಂಗಾಮು ಬೆಳೆ ಸಮೀಕ್ಷೆ
ಬೆಂಗಳೂರು, ಸೆಪ್ಟೆಂಬರ್ 13; ಪ್ರಸ್ತಕ ಸಾಲಿನ 'ನನ್ನ ಬೆಳೆ ನನ್ನ ಹಕ್ಕು' ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರಗಳನ್ನು ದಾಖಲಿಸಲು 'ಮುಂಗಾರು ರೈತರ ಬೆಳೆ ಸಮೀಕ್ಷೆ 2023' ಅಪ್ಲಿಕೇಶನ್ ಬಳಸಿಕೊಳ್ಳಬಹುದು ಎಂದು ಬಳ್ಳಾರಿಯ ಸಹಾಯಕ ಕೃಷಿ ನಿರ್ದೇಶಕ ದಯಾನಂದ ಹೇಳಿದರು.
ಪ್ರಕಟಣೆ ಮೂಲಕ ಬೆಳೆ ಸಮೀಕ್ಷೆ, ಸಮೀಕ್ಷೆ ನಡೆಸುವ ವಿಧಾನ, ಸಮೀಕ್ಷೆಯ ಉಪಯೋಗಗಳ ಕುರಿತು ಅವರು ರೈತರಿಗೆ ಮಾಹಿತಿ ನೀಡಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು 'ಮುಂಗಾರು ರೈತರ ಬೆಳೆ ಸಮೀಕ್ಷೆ 2023' ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಂದಾಯ/ ಕೃಷಿ/ ತೋಟಗಾರಿಕೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಸಮೀಕ್ಷೆಗೆ ಅನುಸರಿಸಬೇಕಾದ ಕ್ರಮಗಳು; ರೈತರು ಗೂಗಲ್ ಪ್ಲೇ-ಸ್ಟೋರ್ನಲ್ಲಿ 'ಮುಂಗಾರು ರೈತರ ಬೆಳೆ ಸಮೀಕ್ಷೆ 2023' ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು.
ಮೊಬೈಲ್ ಅಪ್ಲಿಕೇಶನ್ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು.
ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರಗಳನ್ನು ಸಹ ದಾಖಲಿಸಬೇಕು.
ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ 2 ಫೋಟೋಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಚಿತ್ರಕ್ಕೂ ತಾಳೆಹೊಂದಿದಲ್ಲಿ ಸದರಿ ವಿವರವನ್ನು ಅನುಮೋದಿಸುತ್ತಾರೆ.
ಒಂದು ವೇಳೆ, ರೈತರು ತಮ್ಮ ಸ್ನೇಹಿತರು ಅಥವಾ ಸಂಬಂಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್ಗಳನ್ನು ಸಹ ತಮ್ಮ ಮೊಬೈಲ್ ಅಪ್ಲಿಕೇಶನ್ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಅವಕಾಶ ಕಲ್ಪಿಸಲಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಎನ್ಡಿಆರ್ಎಫ್/ ಎಸ್ಡಿಆರ್ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ ಬಳಕೆ ಮಾಡಲಾಗುತ್ತದೆ.
ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸಹಾಯಕವಾಗಲಿದೆ.












Click it and Unblock the Notifications