ಮುಂಗಾರು ಮಳೆ ವೈಫಲ್ಯ; ಆ. 28ರಿಂದ ಬೆಳೆನಷ್ಟ ಸಮೀಕ್ಷೆ
ಕೊಪ್ಪಳ, ಆಗಸ್ಟ್ 27: "ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು" ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಈಗಾಗಲೇ 2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ ನಿಗದಿತ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಮತ್ತು ದೃಢೀಕರಣ ಸಂಬಂಧ ಬೆಳೆ ಸಮೀಕ್ಷೆ ಕೈಗೊಳ್ಳುವ ಬಗ್ಗೆ ಹಾಗೂ ಇ-ಆಡಳಿತ ಇಲಾಖೆಯಿಂದ ತಯಾರಿಸಿರುವ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ ಅಪ್ಲಿಕೇಶನ್ ನಿರ್ವಹಣೆ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.

ಈ ಸಭೆಯ ಬಳಿಕ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಉಕ್ಕುಂದ, ಕೊಪ್ಪಳ ತಹಸೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆ ಸಭೆಯನ್ನು ನಡೆಸಿದರು.
ಅಂದಾಜು ಬೆಳೆ ಹಾನಿ ಸಮೀಕ್ಷೆ; ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ನೀಡಿದ ಸೂಚನೆಯಂತೆ ಜಿಲ್ಲೆಯಾದ್ಯಂತ ಎಲ್ಲಾ ಕಡೆಗಳಲ್ಲಿ ಅಂದಾಜು ಬೆಳೆಹಾನಿ ಸಮೀಕ್ಷೆಯನ್ನು ನಿಖರವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದರು.
ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿ ತಿಳಿಸಿದ ಹಾಗೆ ಬರ ಪರಿಸ್ಥಿತಿ ಉದ್ಭವಿಸುವ ತಾಲೂಕುಗಳಲ್ಲಿ ಶೇ.10ರಷ್ಟು ಗ್ರಾಮಗಳನ್ನು ನಿಯಮಾನುಸಾರ ಗುರುತಿಸಬೇಕು. ಈ ಗ್ರಾಮಗಳಲ್ಲಿ ಬೆಳೆಯುವ ಪ್ರಮುಖ ಬೆಳೆಗಳನ್ನು ಹಾಗೂ ಪ್ರತಿ ಬೆಳೆಯ 5 ಸೈಟ್ಗಳನ್ನು ಗುರುತಿಸಬೇಕು. ಈ ಕ್ಷೇತ್ರ ಪರಿಶೀಲನೆಗೂ ದೃಢೀಕರಣವನ್ನು ಸ್ಮಾರ್ಟ್ಫೋನ್ ಆಧಾರಿತ ಅಪ್ಲಿಕೇಶನ್ ಬಳಸಿ ನಡೆಸಬೇಕು ಎಂದು ತಿಳಿಸಿದರು.
ಕೊಪ್ಪಳ ಜಿಲ್ಲೆಯಾದ್ಯಂತ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಯು ಅಚ್ಚುಕಟ್ಟಾಗಿ ನಡೆಸಲು ಆಯಾ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಮೇಲ್ವಿಚಾರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಇ-ಆಡಳಿತ ಇಲಾಖೆಯಿಂದ ತರಬೇತಿ ಪಡೆದ ಮಾಸ್ಟರ್ ಟ್ರೇನರ್ಗಳು ಹಾಗೂ ಟ್ರೇನರ್ಗಳಿಂದ ತರಬೇತಿ ಪಡೆದ ಸಮೀಕ್ಷಾ ತಂಡದವರು ಆಗಸ್ಟ್ 28ರಿಂದ ಆಗಸ್ಟ್ 31ರವರೆಗೆ ಕಾರ್ಯಕ್ಷೇತ್ರಕ್ಕೆ ತೆರಳಿ ಸಮೀಕ್ಷೆ ನಡೆಸಿದ ಬಗ್ಗೆ ವರದಿ ಮಾಡಬೇಕು. ಸಂಬಂಧಿಸಿದ ಇಲಾಖೆಗಳಿಂದ ದೃಢೀಕರಿಸಲ್ಪಟ್ಟ ಮಾಹಿತಿಯನ್ನು ಪಡೆದು ಕ್ರೋಡಿಕರಿಸಿ ದೃಢೀಕೃತ ದಾಖಲಾತಿಗಳನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗುತ್ತದೆ.
ಸಭೆಯಲ್ಲಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪ, "ಜೂನ್ 1ರಿಂದ ಆಗಸ್ಟ್ 24ರವರೆಗೆ ಗಂಗಾವತಿ ತಾಲೂಕಿನಲ್ಲಿ ಶೇ. 20ರಷ್ಟು, ಕೊಪ್ಪಳ ತಾಲೂಕಿನಲ್ಲಿ ಶೇ.6 ರಷ್ಟು, ಕುಷ್ಟಗಿ ತಾಲೂಕಿನಲ್ಲಿ ಶೇ. 46 ರಷ್ಟು, ಯಲಬುರ್ಗಾ ತಾಲೂಕಿನಲ್ಲಿ ಶೇ.20ರಷ್ಟು, ಕಾರಟಗಿ ತಾಲೂಕಿನಲ್ಲಿ ಶೇ.30ರಷ್ಟು, ಕುಕನೂರ ತಾಲೂಕಿನಲ್ಲಿ ಶೇ.14ರಷ್ಟು, ಕನಕಗಿರಿ ತಾಲೂಕಿನಲ್ಲಿ ಶೇ.23ರಷ್ಟು ಸೇರಿ ಜಿಲ್ಲೆಯಲ್ಲಿ ಶೇ. 22ರಷ್ಟು ಮಳೆ ಕೊರತೆಯಾಗಿದೆ" ಎಂದು ಮಾಹಿತಿ ನೀಡಿದರು.
2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕುಕನೂರ, ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕುಗಳಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ 3,08,000 ಹೆಕ್ಟೇರ್ ಕ್ಷೇತ್ರದ ಪೈಕಿ 2,83,287 ಹೆಕ್ಟೇರ್ ಕ್ಷೇತ್ರದ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಆಗಸ್ಟ್ 18ರವರೆಗೆ 50,364 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, 1,15,315 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, 56,148 ಹೆಕ್ಟೇರ್ ಪ್ರದೇಶದಲ್ಲಿ ಸಜ್ಜೆ, 19,905 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 8635 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, 13,120 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗಿದೆ ಎಂದರು.












Click it and Unblock the Notifications