ಮಳೆಗಾಲ ಅಧಿವೇಶನ: ಕೃಷಿ ಕಾಯ್ದೆ ವಿರುದ್ಧ ಸಂಸತ್ ಎದುರು ಎಸ್ಎಡಿ ಪ್ರತಿಭಟನೆ
ನವದೆಹಲಿ, ಜುಲೈ 19: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಶಿರೋಮಣಿ ಅಕಾಲಿ ದಳದ ಸದಸ್ಯರು ಸಂಸತ್ ಎದುರು ಪ್ರತಿಭಟನೆ ನಡೆಸಿದ್ದಾರೆ.
"ದೇಶದ ಕಪ್ಪು ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ರೈತರು ಬಯಸುತ್ತಾರೆ. ರೈತರ ಪರವಾಗಿ ಹಾಗೂ ಪ್ರಧಾನಿ ಮೋದಿ ಸರ್ಕಾರದ ವಿರುದ್ಧವಾಗಿ ವಿರೋಧ ಪಕ್ಷಗಳು ನಿಲ್ಲಬೇಕೆಂದು ನಾವು ಬಯಸುತ್ತೇವೆ", ಎಂದು ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.
"ಸರ್ಕಾರ ರೈತರ ಮಾತನ್ನು ಏಕೆ ಕೇಳುತ್ತಿಲ್ಲ? ಎಂದು ಮಾಜಿ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಪ್ರಶ್ನೆ ಮಾಡಿದ್ದಾರೆ. ಈ ಕೃಷಿ ಕಾಯ್ದೆಗಳನ್ನು ಕಾನೂನನ್ನು ರದ್ದುಪಡಿಸುವಂತೆ ನಾವು ಕೇಳುತ್ತೇವೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು, ರೈತರನ್ನು ಬೆಂಬಲಿಸುವವರು ರೈತರ ಹಕ್ಕುಗಳಿಗಾಗಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಬೇಕಿದೆ ಎಂದು ಬಾದಲ್ ಒತ್ತಾಯಿಸಿದ್ದಾರೆ.

ನವದೆಹಲಿ ಗಡಿಯಲ್ಲಿ ನಿರಂತರ ಹೋರಾಟ:
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮೈಕೊರೆಯುವ ಚಳಿ, ಕೊರೊನಾವೈರಸ್ ಭೀತಿಯ ನಡುವೆಯೂ ಜಗ್ಗದೇ ಕುಗ್ಗದೇ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ಯಾವುವು?:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications