ಕೃಷಿಯಲ್ಲಿ ಲಾಭಗಳಿಸಲು ನ್ಯಾನೋ ತಂತ್ರಜ್ಞಾನ ಸಹಕಾರಿ
ಶಿವಮೊಗ್ಗ, ಸೆಪ್ಟೆಂಬರ್ 29; "ನ್ಯಾನೋ ತಂತ್ರಜ್ಞಾನದಂತಹ ಆಧುನಿಕ ಆವಿಷ್ಕಾರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕಗೊಳಿಸಲು ಸಾಧ್ಯವಿದೆ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಪಾಲ್ಗೊಂಡು ಅವರು ಮಾತನಾಡಿದರು. ಕುಲಪತಿ ಡಾ. ಆರ್. ಸಿ. ಜಗದೀಶ್, ಕುಲಸಚಿವ ಡಾ. ಆರ್. ಲೋಕೇಶ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರು 355 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ, 79 ಎಂ. ಎಸ್ಸಿ ಪದವಿ, 10 ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 7 ಬಿಸ್ಸಿ ಅಗ್ರಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕ, 13 ಎಂ.ಎಸ್ಸಿ ಅಗ್ರಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕ ಮತ್ತು 4 ಪಿಎಚ್ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕ ಸೇರಿ ಒಟ್ಟು 24 ವಿದ್ಯಾರ್ಥಿಗಳಿಗೆ 33 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಇರುವಕ್ಕಿಯಲ್ಲಿ ಅನಾನಸ್ ಹಾಗೂ ಇತರ ಹಣ್ಣುಗಳು ಮತ್ತು ಶುಂಠಿಯನ್ನು ಸಂಸ್ಕರಣೆ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ. ವಿಶ್ವವಿದ್ಯಾಲಯದ ಬೀಜ ಘಟಕದಿಂದ ಎಲ್ಲಾ ಸಂಶೋಧನಾ ಕೇಂದ್ರಗಳು ಮತ್ತು ಪ್ರಗತಿಪರ ರೈತರ ಕ್ಷೇತ್ರಗಳಲ್ಲಿ ಬೀಜೋತ್ಪಾದನೆ ಮತ್ತು ಸಸ್ಯೋತ್ಪಾದನೆ ಕಾರ್ಯಕ್ರಮಗಳ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಅನೇಕ ಪ್ರಯೋಗ ಮತ್ತು ಸಂಶೋಧನೆಗಳ ಮುಖಾಂತರ ಕೃಷಿಕರ ಬದುಕನ್ನು ಹಸನುಗೊಳಿಸುವಂತಹ ಹಾಗೂ ಅದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಮತ್ತು ತಂತ್ರಜ್ಞಾನ ಅಭಿವೃದ್ದಿಪಡಿಸಿ ಕೃಷಿಕರ ಸರ್ವತೋಮುಖ ಅಭಿವೃದ್ದಿಗಾಗಿ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ.

ಕೃಷಿಗೆ ನ್ಯಾನೋ ತಂತ್ರಜ್ಞಾನ ಸಹಕಾರಿ
ಘಟಿಕೋತ್ಸವದಲ್ಲಿ ಮಾತನಾಡಿದ ರಾಜ್ಯಪಾಲರು, "ನ್ಯಾನೋ ತಂತ್ರಜ್ಞಾನ, ಕೃಷಿಯಲ್ಲಿ ಡ್ರೋನ್ಗಳ ಬಳಕೆ, ನೀರಾವರಿಯಲ್ಲಿ ಯಾಂತ್ರೀಕರಣ, ಕೃಷಿ ಯಾಂತ್ರೀಕರಣ, ನೈಸರ್ಗಿಕ ಮತ್ತು ಸಾವಯವ ಕೃಷಿ, ಸಂಪನ್ಮೂಲ ಬಳಕೆ ದಕ್ಷತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳು, ರೈತ ಸ್ನೇಹಿ ಅಪ್ಲಿಕೇಶನ್ಗಳನ್ನು ಅಭಿವೃದ್ಧಿಪಡಿಸುವ ಮತ್ತು ಹೊಸ ಸ್ಟಾರ್ಟ್ಅಪ್ಗಳನ್ನು ಉತ್ತೇಜಿಸುವ ಮತ್ತು ಜನಪ್ರಿಯಗೊಳಿಸುವ ಅವಶ್ಯಕತೆಯಿದೆ" ಎಂದು ಅಭಿಪ್ರಾಯಪಟ್ಟರು.

ಕೃಷಿ ಕ್ಷೇತ್ರಕ್ಕೂ ಮಹತ್ವದ ಕೊಡುಗೆ
"ಕೆಳದಿ ಶಿವಪ್ಪ ನಾಯ್ಕ ಅವರನ್ನು ಸಮರ್ಥ ಆಡಳಿತಗಾರ ಮತ್ತು ಸೈನಿಕ ಎಂದು ಸ್ಮರಿಸುತ್ತೇವೆ. ಕೃಷಿ ಕ್ಷೇತ್ರದಲ್ಲೂ ಶಿವಪ್ಪ ನಾಯ್ಕ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನೆನಪಿಗಾಗಿ ಸ್ಥಾಪಿತವಾದ ಈ ವಿಶ್ವವಿದ್ಯಾಲಯವು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ನಿಗದಿತ ಗುರಿಗಳನ್ನು ಸಾಧಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರ ಸ್ಥಳೀಯ ಅಗತ್ಯಗಳನ್ನು ಪರಿಗಣಿಸಿ, ವಿಶ್ವವಿದ್ಯಾನಿಲಯವು ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಹೊಸ ತಂತ್ರಜ್ಞಾನಗಳು ಮತ್ತು ತಂತ್ರಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ" ಎಂದು ರಾಜ್ಯಪಾಲರು ಹೇಳಿದರು.

ಆಧುನೀಕರಣಕ್ಕೆ ಹೆಚ್ಚಿನ ಗಮನ
"ಪ್ರತಿ ಹನಿಗೆ ಹೆಚ್ಚಿನ ಬೆಳೆ ಪಡೆಯಲು, ಕೃಷಿಯಲ್ಲಿನ ಇತ್ತೀಚಿನ ತಂತ್ರಜ್ಞಾನ, ನೈಸರ್ಗಿಕ ಕೃಷಿ, ದೇಶೀಯ ಬೀಜಗಳ ಸಂರಕ್ಷಣೆ ಇತ್ಯಾದಿಗಳ ಕುರಿತು ಹೆಚ್ಚು ವಿವರವಾದ ಸಂಶೋಧನೆ ಮಾಡಬೇಕಾಗಿದೆ. ಇಸ್ರೇಲ್ನ ಹವಾಮಾನ ಮತ್ತು ಭೌಗೋಳಿಕತೆಯು ನೈಸರ್ಗಿಕವಾಗಿ ಕೃಷಿಗೆ ಸೂಕ್ತವಾಗಿರದಿದ್ದರೂ, ಕೃಷಿಯಲ್ಲಿ ಇಸ್ರೇಲ್ ವಿಕ್ರಮ ಸಾಧಿಸಿದೆ. ಇದನ್ನು ನಾವು ಮಾದರಿಯಾಗಿಸಬೇಕು. ಕೃಷಿ ವಲಯದಲ್ಲಿ ಸ್ವಾವಲಂಬಿಯಾಗಲು ಮತ್ತು ಜಾಗತಿಕ ಶಕ್ತಿಯಾಗಲು ಭಾರತವು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆಯ ಆಧುನೀಕರಣಕ್ಕೆ ಹೆಚ್ಚಿನ ಗಮನ ನೀಡಬೇಕಾಗಿದೆ" ಎಂದು ರಾಜ್ಯಪಾಲರು ಕರೆ ನೀಡಿದರು.

ಆಧುನಿಕ ತಂತ್ರಜ್ಞಾನದ ಬಳಕೆ
ಘಟಿಕೋತ್ಸವ ಭಾಷಣ ಮಾಡಿದ ಡಾ. ಆರ್. ಕೆ. ಎಸ್. ಎಸ್. ಪರೋಡಾ, "ಬಹು ಬೆಳೆ ಕೃಷಿ ಪದ್ಧತಿ ಅಳವಡಿಸಿ. ರೈತರು ಆರ್ಥಿಕವಾಗಿ ಸಬಲರಾಗಲು ಬಹು ಬೆಳೆ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಹೆಚ್ಚಿನ ಲಾಭ ಪಡೆಯುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಮಲೆನಾಡಿನಲ್ಲಿ ಅಡಿಕೆ ಬೆಳೆಗಾರರು ತಮ್ಮ ಆದಾಯವನ್ನು ದ್ವಿಗುಣ ಮಾಡಲು ಸಾಧ್ಯವಿದೆ" ಎಂದು ಹೇಳಿದರು.












Click it and Unblock the Notifications