ಒಂದು ಜಿಲ್ಲೆ, ಒಂದು ಉತ್ಪನ್ನ/ಬೆಳೆ; ರೈತರಿಗೆ ಏನಿದು ಹೊಸ ಯೋಜನೆ?
ಮಂಡ್ಯ, ಆಗಸ್ಟ್ 14: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆy ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಅಥವಾ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಕಾವೇರಿ ಸಭಾಂಗಣದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಅಥವಾ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು. ಈ ಕುರಿತು ಇನ್ನಷ್ಟು ಮಾಹಿತಿಗಳನ್ನು ಹಂಚಿಕೊಂಡರು.

ಒಂದು ಉತ್ಪನ್ನ ಅಥವಾ ಬೆಳೆಗೆ ಪ್ರೋತ್ಸಾಹ
ಈ ಯೋಜನೆಯ ಪ್ರಮುಖ ಅಂಶವು ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪ್ರೋತ್ಸಾಹಿಸುವುದು ಆಗಿರುತ್ತದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು, ಬ್ಯಾಂಕಿನ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಈ ಯೋಜನೆಯಡಿ ಬೆಲ್ಲ ಹಾಗೂ ತೃಣಧಾನ್ಯ ಉತ್ಪನ್ನಗಳನ್ನು ಗುರುತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ಶೇ.35ರ ಸಹಾಯಧನ (ಕ್ರೆಡಿಟ್ ಲಿಂಕ್ಡ್) ಒದಗಿಸಲಾಗುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ ಬಗ್ಗೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿ ಜಿಲ್ಲೆಯಲ್ಲಿ ಹೆಚ್ಚು ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪನೆ ಮಾಡಲು ಸೂಚಿಸಿದರು.

ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಡಲು ಅವಕಾಶ
ರೈತರೇ ಎಲ್ಲಾ ಹಂಗಾಮುಗಳ ಬೆಳೆ ಸಮೀಕ್ಷೆ ಮಾಡಲು ಸರ್ಕಾರ ಈ ಬಾರಿ ಅವಕಾಶ ನೀಡಿದ್ದು, ರಾಜ್ಯಾದ್ಯಂತ ಆಗಸ್ಟ್ 10 ರಿಂದ ರೈತರು ತಮ್ಮ ಮೊಬೈಲ್ ನಲ್ಲೇ ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ, ವಿಸ್ತೀರ್ಣ, ನೀರಾವರಿ ಮಾಹಿತಿಯನ್ನು ನಿಖರವಾಗಿ ಪಡೆಯಬಹುದು. ಆಗಸ್ಟ್ 24ರೊಳಗೆ ಮಾಹಿತಿ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತದಿಂದ ಸಮೀಕ್ಷೆ
ರೈತರು ಸ್ವತಃ ಬೆಳೆ ಮಾಹಿತಿ ದಾಖಲಿಸದೇ ಇದ್ದ ಸಂದರ್ಭದಲ್ಲಿ ಆಗಸ್ಟ್ 24ರಿಂದ ಜಿಲ್ಲಾಡಳಿತ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಹಾಗೂ ನೀರಾವರಿ ಇಲಾಖೆಗಳ ಸಹಯೋಗದಿಂದ ಸಮೀಕ್ಷೆ ಕಾರ್ಯಗತಗೊಳಿಸಲಾಗುತ್ತದೆ ಎಂದು ತಿಳಿಸಿದರು. ಬೆಳೆ ಸಮೀಕ್ಷೆ ಕೈಗೊಳ್ಳಲು ಅವಶ್ಯಕತೆ ಇರುವ ಎಲ್ಲಾ ಖಾಸಗಿ ನಿವಾಸಿಗಳು, ಮಾಸ್ಟರ್ ತರಬೇತುದಾರರು, ಮೇಲ್ವಿಚಾರಣಾಧಿಕಾರಿಗಳಿಗೆ ಎರಡು ಹಂತದ ತರಬೇತಿ ನೀಡಲಾಗುತ್ತಿದೆ ಹಾಗೂ ಬೆಳೆ ಸಮೀಕ್ಷೆ ಮಾಹಿತಿಯು ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅತ್ಯವಶ್ಯಕ ಎಂದರು.

ಬೆಳೆ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸಲು ಕರೆ
ಸಮೀಕ್ಷೆಯ ಮಾಹಿತಿಯನ್ನು ಕನಿಷ್ಠ ಬೆಂಬಲ ಬೆಲೆ, ಪ್ರಕೃತಿ ವಿಕೋಪ ಪರಿಹಾರ, ಬೆಳೆ ವಿಮೆ, ಬೆಳೆ ಸಾಲ, ಆರ್.ಟಿ.ಸಿಯಲ್ಲಿ ಬೆಳೆ ಮಾಹಿತಿ ದಾಖಲಿಸಲು, ಬೆಳೆ ಕಟಾವು ಪ್ರಯೋಗ ಹಾಗೂ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಿಕೊಳ್ಳಲಾಗುವುದು ಎಂದರು. ಹೆಚ್ಚಿನ ಮಾಹಿತಿಗೆ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ತಮ್ಮ ಗ್ರಾಮಗಳಿಗೆ ನೇಮಿಸಿರುವ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಿ ಸಲಹೆ ಪಡೆದು ಬೆಳೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು ಅಧಿಕಾರಿಗಳಿಗೆ ತಿಳಿಸಿದರು.











Click it and Unblock the Notifications