Get Updates
Get notified of breaking news, exclusive insights, and must-see stories!

ಸಾವಯವ ಬೆಲ್ಲ ತಯಾರಿಕೆ: ಮಳವಳ್ಳಿಯಲ್ಲಿ ತಮ್ಮದೇ ಮಾರುಕಟ್ಟೆ ಸೃಷ್ಟಿಸಿಕೊಂಡು ಯುವಕರಿಗೆ ಮಾದರಿಯಾದ ಇಬ್ಬರು ಇಂಜಿನಿಯರ್‌ಗಳು

ಮಂಡ್ಯ, ಆಗಸ್ಟ್‌, 11: ಇತ್ತೀಚಿನ ದಿನಗಳಲ್ಲಿ ಮದವಿ ಮುಗಿಸಿದರೆ ಸಾಕು ಹೆಚ್ಚಿನ ಯುವಕರು ಉದ್ಯೋಗ ಅರಸಿ ಮಹಾನಗರದ ಕಡೆ ಪ್ರಯಾಣ ಬೆಳೆಸುತ್ತಾರೆ. ಆದರೆ ಮಳವಳ್ಳಿ ತಾಲೂಕನ ಈ ಗ್ರಮದಲ್ಲಿ ಇಬ್ಬರು ಇಂಜಿನಿಯರ್‌ಗಳು ಪಿತ್ರಾರ್ಜಿತ ಜಮೀನಿನಲ್ಲಿ ಉತ್ಕೃಷ್ಟ ಕಬ್ಬನ್ನು ಬೆಳೆದು ಆಲೆಮನೆ ನಿರ್ಮಿಸಿದ್ದು, ಸಾವಯವ ಬೆಲ್ಲ ತಯಾರಿಕೆಯಲ್ಲಿ ತೊಡಗುವುದರೊಂದಿಗೆ ತಮ್ಮದೇ ಮಾರುಕಟ್ಟೆ ಸೃಷ್ಟಿಸಿಕೊಂಡು ಇತರೆ ಯುವಕರಿಗೆ ಮಾದರಿಯಾಗಿದ್ದಾರೆ.

ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿಯ ವಕ್ಕರಹಳ್ಳಿ ಗ್ರಾಮದ ಹಿತೇಶ್‌ ಕುಮಾರ್ ಹಾಗೂ ತುಮಕೂರಿನ ಬಿ.ಜೆ.ರಾಘವೇಂದ್ರ ಅವರು ಜೊತೆಗೂಡಿ ವೌಲ್ಯಾಧಾರಿತ ಕೃಷಿ ಉತ್ಪನ್ನವಾದ ಸಾವಯವ ಬೆಲ್ಲ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಿತೇಶ್‌ ಕುಮಾರ್ ಅವರಿಗೆ ಪಿತ್ರಾರ್ಜಿತವಾಗಿ ದೊರಕಿದ್ದ 6 ಹೆಕ್ಟೇರ್‌ ಜಮೀನು ಹಾಗೂ ಸಂಬಂಧಿಕರ 10 ಹೆಕ್ಟೇರ್‌ ಜಮೀನಿನಲ್ಲಿ ಕಬ್ಬನ್ನು ಬೆಳೆದು ಅಚ್ಚುಕಟ್ಟಾಗಿ ನಿರ್ಮಿಸಿರುವ ಆಲೆಮನೆಯೊಳಗೆ ಘಮ ಘಮಿಸುವ ಬೆಲ್ಲ ತಯಾರಾಗುತ್ತಿದೆ.

organic-jaggery-making

ಮಹಾಮಾರಿ ಕೊರೊನಾ ಸಮಯದಲ್ಲಿ ಮೊಳಕೆಯೊಡೆದ ಕನಸನ್ನು ನನಸಾಗಿಸಿಕೊಂಡಿರುವ ಯುವಕರು ಯಶಸ್ಸಿನತ್ತ ದಾಪುಗಾಲು ಇಡುತ್ತಿದ್ದಾರೆ. ಬಿ.ಜೆ.ರಾಘವೇಂದ್ರ ಬೆಂಗಳೂರಿನ ಬಾಸ್ಕೋ ಕಂಪನಿಯಲ್ಲಿ ಪ್ರಾಜೆಕ್ಟ್‌ ಮ್ಯಾನೇಜರ್ ಆಗಿದ್ದರೆ, ಹಿತೇಶ್‌ ಕುಮಾರ್ ಹೆಸರಾಂತ ಕಂಪನಿಗಳಿಗೆ ಸೂಪರ್ ಕಂಪ್ಯೂಟರ್ ವಿನ್ಯಾಸ ಮಾಡಿಕೊಡುವ ಇಂಜಿನಿಯರ್ ಆಗಿದ್ದಾರೆ. ಇವರಿಬ್ಬರೂ ಸೇರಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಆಲೆಮನೆ ನಿರ್ಮಿಸಿ ಬೆಲ್ಲದ ಉತ್ಪಾದನೆಯಲ್ಲಿ ತೊಡಗಲು ನಿರ್ಧರಿಸಿದ್ದರು.

ಸ್ಟೀಲ್ ಕೊಪ್ಪರಿಕೆಗಳ ಬಳಕೆ

ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಆಲೆಮನೆಯನ್ನು ಅತ್ಯಾಧುನಿಕ ರೀತಿಯಲ್ಲಿ ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ಆಲೆಮನೆಗಳಲ್ಲಿ ಕಬ್ಬಿಣದ ಕೊಪ್ಪರಿಕೆಗಳನ್ನು ಬಳಸಿದರೆ, ಇವರು ಸ್ಟೀಲ್ ಕೊಪ್ಪರಿಕೆಗಳನ್ನು ಬಳಸುತ್ತಿದ್ದಾರೆ. ಅಲ್ಲದೆ, ಕಂಪ್ರೆಸ್ಡ್‌ ಸ್ಟೆಬಿಲೈಸ್ಡ್‌ ಅರ್ತ್ ಬ್ಲಾಕ್‌ಗಳನ್ನು ಬಳಸಿ ಆಲೆಮನೆಯನ್ನು ನಿರ್ಮಿಸಿದ್ದಾರೆ. ಹಸಿರು ಮನೆ ಪರಿಕಲ್ಪನೆಯಲ್ಲಿ ನಿರ್ಮಿಸಲಾಗಿರುವ ಅಪರೂಪದ ಆಲೆಮನೆ ಇದಾಗಿದೆ.

ಸುಮಾರು ನಿತ್ಯ 10 ಟನ್ ಕಬ್ಬನ್ನು ಅರೆಯುವ ಸಾಮರ್ಥ್ಯದ ಯೂನಿಟ್ ಅಳವಡಿಸಲಾಗಿದೆ. ಇದರಲ್ಲಿ ಪ್ರತಿ ತಿಂಗಳು 250-300 ಟನ್ ಕಬ್ಬು ಅರೆಯಬಹುದಾಗಿದೆ. ಸದ್ಯ 2 ರಿಂದ 3 ಟನ್ ಕಬ್ಬನ್‌ನು ಅರೆಯಲಾಗುತ್ತಿದ್ದು, 300 ರಿಂದ 400 ಕೆ.ಜಿ.ಯಷ್ಟು ಬೆಲ್ಲವನ್ನು ತಯಾರಿಸುತ್ತಿದ್ದಾರೆ. ಪ್ರತಿ ಕೆ.ಜಿ. ಬೆಲ್ಲದ ಪೌಡರ್ ಬೆಲೆ 120 ರೂಪಾಯಿ, ಹೋಲ್‌ಸೇಲ್ ಬೆಲೆ 90 ರೂಪಾಯಿ ಆಗಿದ್ದರೆ, ಅಚ್ಚು ಬೆಲ್ಲ ಹೋಲ್‌ಸೇಲ್‌ನಲ್ಲಿ ಪ್ರತಿ ಕೆ.ಜಿ.ಗೆ 60 ರೂಪಾಯಿ, ಪ್ರತಿ ಕೆ.ಜಿ.ಗೆ 80 ರೂಪಾಯಿನಂತೆ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಮಾರುಕಟ್ಟೆ

ಇಲ್ಲಿ ತಯಾರಾದ ಉತ್ಕೃಷ್ಟ ಗುಣಮಟ್ಟದ ಬೆಲ್ಲವನ್ನು ಉತ್ತಮ ರೀತಿಯಲ್ಲಿ ಪ್ಯಾಕಿಂಗ್ ಮಾಡಿ ರೈತಮಿತ್ರ ಜಾಗರಿ ಮ್ಯಾನ್ಯುಫ್ಯಾಕ್ಚರಿಂಗ್ ಯೂನಿಟ್‌ನಡಿ ಮಾರಾಟ ಮಾಡಲಾಗುತ್ತಿದೆ. ಇನ್ನು ಇವರು ಬೆಂಗಳೂರಿನ ಇಸ್ರೋ ಲೇಔಟ್‌ನಲ್ಲಿ ವೇರ್‌ಹೌಸ್ ನಿರ್ಮಿಸಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಇವರು ತಯಾರಿಸುತ್ತಿರುವ ಬೆಲ್ಲಕ್ಕೆ ಎಲ್ಲೆಡೆಯಿಂದ ಉತ್ತಮ ಬೇಡಿಕೆ ಬರುತ್ತಿದೆ. ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಿರುವ ಇವರು ಆತುರಪಡದೆ ನಿಧಾನವಾಗಿ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಬೆಲ್ಲದ ಕಾಫಿ, ಬೆಲ್ಲದ ಟೀಗೆ ಹೆಚ್ಚು ಜನರು ಒಲವು ತೋರುತ್ತಿರುವುದರಿಂದ ರಾಸಾಯನಿಕ ಮುಕ್ತ ಬೆಲ್ಲಕ್ಕೆ ಬೇಡಿಕೆ ಹೆಚ್ಚುತ್ತಿದೆ. ಇದನ್ನು ಮನಗಂಡು ಹೊರ ಜಿಲ್ಲೆಗಳಲ್ಲೂ ಮಾರುಕಟ್ಟೆ ಸೃಷ್ಟಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಇಬ್ಬರು ಇಂಜಿನಿಯರ್‌ಗಳ ಶ್ರಮಕ್ಕೆ ಸಂಬಂಧಿಕರು, ಕುಟುಂಬದವರು, ಸ್ನೇಹಿತರು ಕೈಜೋಡಿಸಿದ್ದಾರೆ. ದಿನೇ ದಿನೇ ಪ್ರವರ್ಧಮಾನಕ್ಕೆ ಬರುತ್ತಾ ಬೆಲ್ಲದ ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಅಲ್ಲದೆ ವಕ್ಕರಹಳ್ಳಿಯಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ನೀಡುವ ಕಬ್ಬಿನ ಬೆಳೆಯನ್ನು ರೈತರಿಗೆ ಪರಿಚಯಿಸುತ್ತಿದ್ದಾರೆ. ಈಗಾಗಲೇ ಇವರ ಜಮೀನಿನಲ್ಲಿ ಕಬ್ಬನ್ನು ಬೆಳೆದು ಇತರೆ ರೈತರಿಗೂ ಅರಿವು, ಜಾಗೃತಿ ಮೂಡಿಸುತ್ತಿದ್ದಾರೆ.

ಗುಣಮಟ್ಟದ ಸಾವಯವ ಬೆಲ್ಲವನ್ನು ತಯಾರಿಸಿ ಜನರಿಗೆ ನೀಡುತ್ತಿದ್ದೇವೆ. ನಮ್ಮ ಉತ್ಪನ್ನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಗುಣಮಟ್ಟಕ್ಕೆ ಪ್ರಾಮುಖ್ಯತೆಯನ್ನು ಕೊಟ್ಟು ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಳ್ಳುತ್ತಿದ್ದೇವೆ. ಕೊರೊನಾ ಸಮಯದಲ್ಲಿ ಕಂಡ ಕನಸು ನನಸಾಗುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಮಾರುಕಟ್ಟೆ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ ಎಂದು ಹಿತೇಶ್‌ ಕುಮಾರ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+