ಶಿವಮೊಗ್ಗ; ಜನವರಿ 1ರಿಂದಲೇ ಬೆಂಬಲ ಬೆಲೆಯಡಿ ಭತ್ತ ಖರೀದಿ
ಶಿವಮೊಗ್ಗ, ಡಿಸೆಂಬರ್ 12; ಮಳೆಯಿಂದಾಗಿ ಕಂಗೆಟ್ಟಿರುವ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಜಿಲ್ಲೆಯಲ್ಲಿ ಜನವರಿ 1ರಿಂದಲೇ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಖರೀದಿಸಲು ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
2023ರ ಜನವರಿ 1ರಿಂದ ಮಾರ್ಚ್ 31ರವರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಗಳ ಭತ್ತ ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ನಡೆಯಲಿದೆ.

ತಾಲೂಕಿಗೊಂದರಂತೆ ಪ್ರತಿ ತಾಲೂಕಿನಲ್ಲಿ ಖರೀದಿ ಕೇಂದ್ರ ಆರಂಭವಾಗಲಿದೆ. ಅಗತ್ಯವಿರುವಲ್ಲಿ ರೈತರ ನೋಂದಣಿಯನ್ನಾಧರಿಸಿ, ಶಿರಾಳಕೊಪ್ಪ ಮತ್ತು ಆನವಟ್ಟಿಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಸೂಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಕಳೆದ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ನಿಗದಿಪಡಿಸಲಾಗಿದ್ದ ದರ ರೂ.1940. ಆದರೆ ಈ ಬಾರಿ ಅದನ್ನು ರೂ. 2,040ಕ್ಕೆ ಹೆಚ್ಚಿಸಲಾಗಿದೆ. ಪ್ರತಿ ಕ್ವಿಂಟಾಲ್ ಗ್ರೇಡ್-ಎ ಭತ್ತಕ್ಕೆ ನಿಗದಿಪಡಿಸಲಾಗಿದ್ದ ದರ ರೂ. 1,960. ಈ ಬಾರಿ ಅದನ್ನು ರೂ. 2,060ಕ್ಕೆ ಹೆಚ್ಚಿಸಲಾಗಿದೆ.
ಎಷ್ಟು ಭತ್ತ ಖರೀದಿ?; ಭತ್ತ ಖರೀದಿ ಪ್ರಕ್ರಿಯೆ ನಡೆಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ಏಜೆನ್ಸಿಯಾಗಿ ನೇಮಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 40ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುತ್ತದೆ.
ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ಭತ್ತ ಮಾರಾಟ ಮಾಡಲು ಹೆಸರು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಏಜೆನ್ಸಿಯವರು ಭತ್ತ ಖರೀದಿಸಿದ ನಂತರ ರೈತರ ಬ್ಯಾಂಕ್ ಖಾತೆಗಳಿಗೆ 15 ದಿನಗಳೊಳಗಾಗಿ ಹಣವನ್ನು ನೇರ ನಗದು ವರ್ಗಾವಣೆ ಮಾಡುವಂತೆ ಸೂಚನೆ ನೀಡಲಾಗಿದೆ.
ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಗ್ರಹಣಾ ಏಜೆನ್ಸಿಯ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ಗಳ ನೇಮಕ, ತಪಾಸಣೆ, ಮತ್ತಿತರ ವಿಷಯಗಳ ಕುರಿತು ಕೃಷಿ ಇಲಾಖಾ ಅಧಿಕಾರಿಗಳು ಮೇಲ್ವಿಚಾರಣೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಏಜೆನ್ಸಿಯವರು ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿಸಿ, ಗೋದಾಮುಗಳಲ್ಲಿ ಸಂಗ್ರಹಿಸಿ, ಭತ್ತದ ಹಲ್ಲಿಂಗ್ಗಾಗಿ ನೋಂದಾಯಿತ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡುವಂತೆ ಸೂಚಿಸಿದರು.
ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುವ ಅಕ್ಕಿಯನ್ನು ಕಡ್ಡಾಯವಾಗಿ ಸಾರವರ್ಧಿತಗೊಳಿಸಬೇಕಾಗಿರುವುದರಿಂದ ಅಕ್ಕಿಗಿರಣಿಗಳಲ್ಲಿ ಬ್ಲೆಂಡರ್ ಯಂತ್ರವನ್ನು ಅಳವಡಿಸಿಕೊಂಡಿರುವ ಅಕ್ಕಿ ಗಿರಣಿಗಳನ್ನು ಮಾತ್ರ ಭತ್ತ ಹಲ್ಲಿಂಗ್ ಮಾಡಲು ನೋಂದಾಯಿಸಿಕೊಂಡು ನಿಯಮಾನುಸಾರ ಮಿಶ್ರಣಗೊಳಿಸುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.












Click it and Unblock the Notifications