ಕೃಷ್ಣಾ ಮೇಲ್ದಂಡೆ ರೈತರನ್ನು ಕಾಡುತ್ತಿರುವ ಸವಳು-ಜವಳು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ:ನಿರಾಣಿ
ಬೆಂಗಳೂರು, ಸೆ.1: ಕೃಷ್ಣಾ ಮೇಲ್ದಂಡೆ ವ್ಯಾಪ್ತಿಯ ರೈತರನ್ನು ಕಾಡುತ್ತಿರುವ ಸವಳು - ಜವಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಶೀಘ್ರದಲ್ಲೇ ರಾಷ್ಟ್ರೀಯ ಮಟ್ಟದ ವಿಚಾರ ಸಂಕೀರ್ಣವನ್ನು ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್.ನಿರಾಣಿ ಹೇಳಿದರು.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ (ಜಿಕೆವಿಕೆ) ಕೇಂದ್ರದಲ್ಲಿ ಗುರುವಾರ ಎಫ್ಐಸಿಸಿಐ ಆಯೋಜಿಸಿದ್ದ 'ಅಗ್ರಿ ಮ್ಯಾಕ್ 2022' ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಸವಳು ಜವಳು ಸಮಸ್ಯೆಯಿಂದ ವರ್ಷದಿಂದ ವರ್ಷಕ್ಕೆ ಮಣ್ಣಿನ ಫಲವತ್ತತೆ ಕ್ಷೀಣಿಸುತ್ತಿದೆ. ಕ್ಯಾನ್ಸರ್ನಂತೆ ರೈತರನ್ನು ಎಡೆಬಿಡದೇ ಕಾಡುತ್ತಿರುವ ಈ ಸಮಸ್ಯೆಗೆ ಸೂಕ್ತ ಶಾಸ್ವತ ಪರಿಹಾರ ಕಂಡುಕೊಳ್ಳುವ ಸಂಬಂಧ ರಾಷ್ಟ್ರಮಟ್ಟದ ವಿಚಾರ ಸಂಕೀರ್ಣ ಆಯೋಜಿಸಲಿದ್ದೇವೆ ಎಂದು ತಿಳಿಸಿದರು.
ಸವಳು-ಜವಳು ಕುರಿತು ವಿಶೇಷ ಅಧ್ಯಯನ ನಡೆಸಿರುವ ತಜ್ಞರೊಂದಿಗೆ ಕಳೆದ ತಿಂಗಳು ಬಿಳಗಿಯಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೈತರಿಗೆ ಕಾರ್ಯಕ್ರಮದಲ್ಲಿ ಉಪಯುಕ್ತ ಮಾಹಿತಿ ದೊರೆತಿದ್ದು, ಮುಂಬರುವ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲ್ಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸವಳು-ಜವಳು ಸಮಸ್ಯೆ ಹೆಚ್ಚುತ್ತಿದೆ
ಪ್ರತಿ ವರ್ಷ ನೀರಾವರಿ ಪ್ರದೇಶ ಹೆಚ್ಚುತ್ತಿರುವಂತೆ ಸವಳು-ಜವಳು ಸಮಸ್ಯೆಯ ತೀವ್ರತೆಯೂ ಹೆಚ್ಚುತ್ತಿದೆ. ಪರಿಣಾಮವಾಗಿ, ಫಲವತ್ತಾದ ಭೂಮಿ ಇದ್ದರೂ ಅದರಲ್ಲಿ ಬೆಳೆ ತೆಗೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರ ಆದಾಯ ವರ್ಷದಿಂದ ವರ್ಷಕ್ಕೆ ಕ್ಷೀಣಿಸುವ ಸಂಭವವು ಇದೆ ಎಂದು ಮುರುಗೇಶ ನಿರಾಣಿ ಬೇಸರ ವ್ಯಕ್ತಪಡಿಸಿದರು.
ಎಥೆನಾಲ್ ಉತ್ಪಾದನೆಯಲ್ಲಿ ನಾವೇ ಮೊದಲು
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಿ ಎಥನಾಲ್ ಉತ್ಪಾದನೆ ಹೆಚ್ಚಳ ಮಾಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು. ಅವರ ಕರೆಗೆ ಸಕ್ಕರೆ ಕಾರ್ಖಾನೆ ಮಾಲೀಕರು ವಿಶೇಷ ಒಲವು ತೋರಿದ್ದಾರೆ. ಇನ್ನೊಂದು ವರ್ಷದಲ್ಲಿ ಕರ್ನಾಟಕ ದೇಶದಲ್ಲೇ ಇಂಧನದ ಪರ್ಯಾಯ ಬಳಕೆಯಾದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನಕ್ಕೆ ಬರಲಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಮುರಗೇಶ ನಿರಾಣಿ ವಿವರಿಸಿದರು.
ಎಥೆನಾಲ್ ಉತ್ಪಾದನೆಗೆ 5,850ಕೋಟಿ ರೂ. ಹೂಡಿಕೆ
ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಜೊತೆಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡಲು ಕರೆ ಕೊಟ್ಟಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ, ರಾಜ್ಯದಲ್ಲಿ ಕಳೆದೊಂದು ವರ್ಷದಲ್ಲಿ 5,850 ಕೋಟಿ ರೂಪಾಯಿ ಹೂಡಿಕೆ ಆಗಿದೆ. ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ಎಥೆನಾಲ್ ಉತ್ಪಾದಿಸುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಲಿದೆ ಎಂದರು.
ಕೇಂದ್ರ ಸಚಿವರ ಎಥೆನಾಲ್ ಉತ್ಪಾದನೆಗೆ ಕರೆ
ಈ ಹಿಂದೆ ಇಂಧನ ಕೊರತೆಯನ್ನು ಎದುರಿಸುತ್ತಿರುವ ಭಾರತದಲ್ಲಿ ಕೃಷಿ ಕ್ಷೇತ್ರವನ್ನು ಇಂಧನ ಮತ್ತು ವಿದ್ಯುತ್ ವಲಯಕ್ಕೆ ಪೂರಕವಾಗುವಂತೆ ವಿಸ್ತರಿಸಬೇಕು. ಪೆಟ್ರೋಲ್ ಹಾಗೂ ಡೀಸೆಲ್ ಪರ್ಯಾಯ ಇಂಧನ ಶಕ್ತಿಯಾದ ಎಥೆನಾಲ್ ಅನ್ನು ರಾಜ್ಯದಲ್ಲಿ ದೇಶದಲ್ಲಿ ಹೆಚ್ಚು ಉತ್ಪಾದಿಸಬೇಕು. ಈ ನಿಟ್ಟಿನಲ್ಲಿ ಆದ್ಯತೆ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಹ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ, ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ,ಕೃಷಿ ವಿವಿ ಜಿಕೆವಿಕೆಯ ಉಪ ಕುಲಪತಿ ಎಸ್. ರಾಜೇಂದ್ರ ಪ್ರಸಾದ್, ಫೆಡರ್ ಯುನಾಕೋಮಾದ ಅಧ್ಯಕ್ಷರಾದ ಅಲೆಸ್ಸಾಂಡ್ರೊ ಮಲವೋಲ್ಟಿ, ಎಫ್ಐಸಿಸಿಐ ಅಧ್ಯಕ್ಷ ಉಲ್ಲಾಸ ಕಾಮತ್, ಎಫ್ಐಸಿಸಿಐ ಕೃಷಿ ಸಮಿತಿ ಅಧ್ಯಕ್ಷ ಟಿ.ಆರ್.ಕೇಶವನ್, ಎಫ್ಐಸಿಸಿಐ ಕೃಷಿ ಉಪಸಮಿತಿಯ ಅಧ್ಯಕ್ಷ ರವೀಂದ್ರ ಅಗರ್ವಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.