ರೈತರಿಗೆ ಲಾಠಿ ರುಚಿ ತೋರಿಸಿದ ಸರ್ಕಾರಕ್ಕೆ ಪ್ರತಿಪಕ್ಷಗಳ ಚಾರ್ಜ್
ಬೆಂಗಳೂರು, ಮಾರ್ಚ್ 04 : ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಗುರುವಾರ ಬೆಂಗಳೂರಿನಲ್ಲಿ ಲಾಠಿ ಪ್ರಹಾರ ನಡೆಸಲಾಗಿದೆ. ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಬಂದ್ಗೆ ಕರೆ ನೀಡಲಾಗಿದೆ.
250ಕ್ಕೂ ಅಧಿಕ ಟ್ರಾಕ್ಟರ್ನಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗದ ರೈತರು ಹೋರಾಟಕ್ಕಿಳಿದಿದ್ದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಗಮಿಸುತ್ತಿದ್ದ ರೈತರನ್ನು ನಗರದ ಹೊರವಲಯದಲ್ಲಿ ತಡೆಯಲು ಪೊಲೀಸರು ಮಾಡಿದ ಪ್ರಯತ್ನ ವಿಫಲವಾಯಿತು. [ಕುಡಿಯುವ ನೀರು ಕೇಳಿದ ರೈತರಿಗೆ ಪೊಲೀಸರ ಲಾಠಿ ಏಟು]
ನೂರಾರು ರೈತರು ನಗರ ಪ್ರವೇಶಿಸುತ್ತಿದ್ದಂತೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸಂಜೆ 4.30ರ ಸುಮಾರಿಗೆ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಬಂದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ. [ಎತ್ತಿನ ಹೊಳೆ ಯೋಜನೆ ಬಗ್ಗೆ ತಿಳಿಯಿರಿ]
ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಸರ್ಕಾರ ವಿರುದ್ಧ ವಿಪಕ್ಷಗಳು ಅಕ್ರೋಶ ವ್ಯಕ್ತಪಡಿಸಿವೆ. ಸದನದಲ್ಲಿ ಶುಕ್ರವಾರ ಈ ಕುರಿತು ವಿಷಯ ಪ್ರಸ್ತಾಪಿಸಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧರಿಸಿವೆ. ಲಾಠಿ ಪ್ರಹಾರ ಖಂಡಿಸಿ ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಬಂದ್ಗೆ ಕರೆ ನೀಡಲಾಗಿದೆ. ಲಾಠಿ ಪ್ರಹಾರದ ಬಗ್ಗೆ ಯಾರು, ಏನು ಹೇಳಿದರು?...

'ಇದು ಮೂಕ ಸರ್ಕಾರ'
ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಸರ್ಕಾರದ ಕ್ರಮವನ್ನು ಖಂಡಿಸಿರುವ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, 'ಬಯಲುಸೀಮೆಯ ತಾಲೂಕುಗಳಿಗೆ ಶಾಶ್ವತ ನೀರಾವರಿ ಯೋಜನೆ ನೀಡಲು ಎಲ್ಲ ಸರ್ಕಾರಗಳು ವಿಫಲವಾಗಿವೆ. 16 ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 165 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರಕ್ಕೆ ಕಣ್ಣು-ಕಿವಿ ಇಲ್ಲ. ಇದು ಮೂಕ ಸರ್ಕಾರ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ನಾವು ಯುದ್ಧ ಮಾಡೋಕೆ ಬಂದಿಲ್ಲ'
ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, 'ಎತ್ತಿನಹೊಳೆ ಯೋಜನೆ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಇದ್ದಂತೆ. ಇದು ಸಮರ್ಪಕ ಯೋಜನೆಯೇ ಅಲ್ಲ. ಬಯಲುಸೀಮೆಯಲ್ಲಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಪೊಲೀಸರು ನಾವು ಯುದ್ಧ ಮಾಡಲು ಬಂದಂತೆ ಬಿಂಬಿಸುತ್ತಿದ್ದಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ಅನಾಗರಿಕ ವರ್ತನೆ'
'ನೀರಿಗಾಗಿ ಹೋರಾಟ ಮಾಡಲು ಬಂದ ರೈತರ ಮೇಲೆ ಲಾಠಿ ಪ್ರಯೋಗ ಮಾಡಿರುವುದು ಅನಾಗರಿಕ ವರ್ತನೆ ಮತ್ತು ಹೇಯ ಕೃತ್ಯ. ಇದರ ಪರಿಣಾಮವನ್ನು ಸರ್ಕಾರ ಮುಂದೆ ಎದುರಿಸಲಿದೆ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

'ಈ ಘಟನೆ ನೋವು ತಂದಿದೆ'
'ರೈತರನ್ನು ಅಮಾನವೀಯವಾಗಿ ನಡೆಸಿಕೊಂಡಿರುವುದು ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಇಂತಹ ವರ್ತನೆ ಯಾವುದೇ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ರೈತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

'ಮಾರ್ಚ್ 6ರಂದು ಸಭೆ ಕರೆಯಲಾಗಿದೆ'
'ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಎತ್ತಿನಹೊಳೆ ಯೋಜನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದು, ಮಾರ್ಚ್ 6ರಂದು ರೈತ ಮುಖಂಡರ ಸಭೆ ಕರೆಯಲಾಗಿದೆ. ಅಷ್ಟರಲ್ಲಿ ಏಕೆ ಹೋರಾಟ ಮಾಡಬೇಕಿತ್ತು?. ನಾವು ಪರಿಹಾರ ಹುಡುಕಬೇಕು, ವಿವಾದ ಮಾಡಬಾರದು' ಎಂದು ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications