Get Updates
Get notified of breaking news, exclusive insights, and must-see stories!

ಉಭಯ ಸದನಗಳಲ್ಲಿ ಕೂಡಗಿ ಗೋಲಿಬಾರ್ ಪ್ರತಿಧ್ವನಿ

ಬೆಂಗಳೂರು, ಜು. 8 : ಬಿಜಾಪುರ ಜಿಲ್ಲೆಯ ಕೊಡಗಿಯಲ್ಲಿ ನಡೆದ ಉಷ್ಣ ವಿದ್ಯುತ್ ಸ್ಥಾವರ ವಿರೋಧಿ ಹೋರಾಟದಲ್ಲಿ ರೈತರಿಗೆ ಬಿದ್ದ ಗುಂಡು ಪೊಲೀಸರದ್ದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದ್ದು, ಇದಕ್ಕೆ ಒಪ್ಪದ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಶಾಸಕರು ಸೋಮವಾರ ಉಭಯ ಸದನಗಳಲ್ಲಿ ಸಭಾತ್ಯಾಗ ಮಾಡಿದರು.

ಸೋಮವಾರದ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೂಡಗಿಯ ಗೋಲಿಬಾರ್‌ ಘಟನೆ ಬಗ್ಗೆ ಚರ್ಚಿಸಲು ನಿಲುವಳಿ ಸೂಚನೆ ಮಂಡಿಸುವ ಪ್ರಯತ್ನ ಮಾಡಿದರು. ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಅದನ್ನು ಪರಿವರ್ತಿಸಿ ಚರ್ಚೆಗೆ ಅವಕಾಶ ನೀಡಿದರು. [ಸೋಮವಾರದ ಕಲಾಪದ ಮುಖ್ಯಾಂಶಗಳು]

Bijapur

ಈ ವೇಳೆ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಕೆ.ಜೆ.ಜಾರ್ಜ್, ಪಿಎಸ್‌ಐ ಸಿಂಧೂರ ಎಂಬುವವರು ತಮ್ಮ ಹಾಗೂ ಸಿಬ್ಬಂದಿಯ ಆತ್ಮರಕ್ಷಣೆಗಾಗಿ ಪ್ರತಿಭಟನೆ ನಿರತರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಬಂದಿದೆ. ಕೂಡಗಿ ಬಳಿಯ ಔಟ್‌ ಪೋಸ್ಟ್‌ನಲ್ಲಿದ್ದ ಪಿಎಸ್‌ಐ ಮತ್ತು ಸಿಬ್ಬಂದಿಯನ್ನು ಬೀಗ ಹಾಕಿ ಆ ಔಟ್‌ ಪೋಸ್ಟ್‌ಗೆ ಬೆಂಕಿ ಹಚ್ಚುವ ಪ್ರಯತ್ನವನ್ನು ರೈತರು ಮಾಡಿದರು, ಆದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಉತ್ತರ ನೀಡಿದರು.

ಘಟನೆಯ ಸತ್ಯಾಸತ್ಯತೆ ತಿಳಿಯಲು ಮ್ಯಾಜಿಸ್ಟೇಟ್ ತನಿಖೆಗೆ ಆದೇಶಿಸಿ ಬಿಜಾಪುರ ಜಿಲ್ಲಾಧಿಕಾರಿಗಳನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. 45 ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಆ ವರದಿ ಕೈಸೇರಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದರು. [ಕೂಡಗಿ ಗೋಲಿಬಾರ್‌ ಮ್ಯಾಜಿಸ್ಟ್ರೇಟ್ ತನಿಖೆ]

ಆದರೆ, ಗೃಹ ಸಚಿವರ ಉತ್ತರದಿಂದ ತೃಪ್ತರಾಗದ ಪ್ರತಿಪಕ್ಷ ಬಿಜೆಪಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿತು. ಸರ್ಕಾರ ಇದಕ್ಕೆ ಒಪ್ಪಿಗೆ ನೀಡದ ಕಾರಣ, ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಪರಿಷತ್ತಿನಲ್ಲಿ ಪ್ರಸ್ತಾಪ : ವಿಧಾನಪರಿಷತ್ತಿನಲ್ಲೂ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಕೂಡಗಿ ಘಟನೆ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವರು ಹೇಳಿಕೆ ನೀಡಿದರು. ಆದರೆ, ಅಮಾಯಕ ರೈತರಿಗೆ ನ್ಯಾಯ ದೊರೆಯಬೇಕಾದರೆ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

ಆದರೆ, ತನ್ನ ಪಟ್ಟು ಸಡಿಲಿಸದ ಸರ್ಕಾರ, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತು. ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಬಿಜೆಪಿ ಸದಸ್ಯರು 'ರೈತ ವಿರೊಧಿ' ಸರ್ಕಾರ ಎಂದು ಧಿಕ್ಕಾರ ಹಾಕುತ್ತ ಸಭಾತ್ಯಾಗ ಮಾಡಿದರು. ಕೂಡಗಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೂ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+