ನಕಲಿ ಬಿತ್ತನೆ ಬೀಜ ವಿತರಣೆ; ಅಧಿಕಾರಿಗಳಿಗೆ ಕೃಷಿ ಸಚಿವರ ಎಚ್ಚರಿಕೆ
ಬೆಳಗಾವಿ, ಜೂನ್ 15; "ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು" ಎಂದು ಕೃಷಿ ಇಲಾಖೆ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸಚಿವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. "ಬಿತ್ತನೆ ಬೀಜ ಮತ್ತು ಗೊಬ್ಬರದ ಬೇಡಿಕೆ, ಪೂರೈಕೆ ಹಾಗೂ ವಿತರಣೆ ಮೇಲೆ ನಿಗಾ ವಹಿಸಬೇಕು. ಮಳೆ ವಿಳಂಬವಾಗಿದೆ ರೈತರು ಕೂಡ ಆತಂಕದಲ್ಲಿರುತ್ತಾರೆ. ಆದ್ದರಿಂದ ಬೀಜ, ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರ ವಹಿಸಬೇಕು" ಎಂದು ಸೂಚಿಸಿದರು.

"ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ, ರಸ ಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಬೇಕು" ಎಂದರು.
ದಾಸ್ತಾನು ಮಾಹಿತಿ ಇರಲಿ; ಸಚಿವ ಎನ್. ಚಲುವರಾಯಸ್ವಾಮಿ, "ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಾಕಷ್ಟು ದಾಸ್ತಾನು ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಉದ್ಭವಿಸಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆ ಹಾಗೂ ಶಿಸ್ತಿನಿಂದ ಕೆಲಸ ಮಾಡಬೇಕ ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಸಿದರು.
"ಪ್ರಮಾಣೀಕರಣ ಇಲ್ಲದ ಬೀಜ ಮಾರಾಟವನ್ನು ವಿಚಕ್ಷಣಾ ತಂಡಗಳು ಪತ್ತೆ ಮಾಡಬೇಕು. ಈ ರೀತಿಯ ಅಕ್ರಮ ಕಂಡುಬಂದರೆ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆಯಾಗುತ್ತಿರುವ ಬಗ್ಗೆ ಕೆಲ ಜಿಲ್ಲೆಗಳಲ್ಲಿ ದೂರುಗಳು ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಇಂತಹ ಪ್ರಕರಣ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು" ಎಂದು ಹೇಳಿದರು.
ಸಚಿವರು, "ರೈತರ ದೂರುಗಳ ಸ್ವೀಕಾರ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಕೂಡಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ನಲ್ಲಿ ದತ್ತಾಂಶ ದಾಖಲಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯ ಕೊರತೆ; ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರು, "ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ 93 ಮಿ. ಮೀ. ಮಳೆಯಾಗಬೇಕಿತ್ತು 86 ಮಿ. ಮೀ. ಮಳೆಯಾಗಿದ್ದು, ಶೇ.7ರಷ್ಟು ಕೊರತೆಯಾಗಿದೆ. ಜಿಲ್ಲೆಯಲ್ಲಿ 35 ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ 170 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. 47,375 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ. ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ರಸಗೊಬ್ಬರ 2.25 ಲಕ್ಷ ಮೆಟ್ರಿಕ್ ಟನ್ ಲಭ್ಯವಿರುತ್ತದೆ. ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಆದರೆ ಬಿತ್ತನೆಗೆ ಅನುಕೂಲ ಆಗುವಂತೆ ಮಳೆಯಾಗಿರುವುದಿಲ್ಲ" ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್ ಮಾತನಾಡಿ, "ಕೃಷಿ ಅಧಿಕಾರಿಗಳು ಪ್ರಮಾಣಪತ್ರ ನೀಡಿದ ಬಳಿಕವೇ ಬೀಜ ವಿತರಣಾ ಕೇಂದ್ರಕ್ಕೆ ಹೋಗುತ್ತದೆ. ಆದ್ದರಿಂದ ಎಲ್ಲಿಯಾದರೂ ಕಳಪೆ ಅಥವಾ ನಕಲಿ ಬೀಜಗಳ ವಿತರಣೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಜಾಗೃತ ತಂಡಗಳನ್ನು ಹೊಣೆ ಮಾಡಲಾಗುವುದು" ಎಂದರು.
"ಜಿಲ್ಲೆಯ ಮೂಡಲಗಿಯಲ್ಲಿ ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಕೂಡಲೇ ಪರಿಹಾರ ನೀಡಲಾಗುವುದು" ಎಂದು ಹೇಳಿದರು.












Click it and Unblock the Notifications