ಹಾಸನ; ರೈತರಿಂದ ಆಲೂಗಡ್ಡೆ ಬಿತ್ತನೆ ಬೀಜ ಖರೀದಿ ಆರಂಭ
ಹಾಸನ, ಮೇ 12 : ಹಾಸನ ಜಿಲ್ಲೆಯಲ್ಲಿ ಮಂಗಳವಾರದಿಂದ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಆರಂಭವಾಗಿದೆ. ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ಅದಕ್ಕೆ ಅಗತ್ಯವಾದ ಸುಮಾರು 12 ಸಾವಿರ ಟನ್ಗಳಷ್ಟು ಬಿತ್ತನೆ ಬೀಜವನ್ನು ದಾಸ್ತಾನು ಮಾಡಲಾಗಿದೆ.
Recommended Video
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು, "ರೈತರು ಮಳೆಯಾಧಾರಿತವಾಗಿ ಬಿತ್ತನೆ ಮಾಡಿ ಉತ್ತಮ ಬೆಳೆ ಪಡೆಯುವಂತಾಗಲಿ" ಎಂದು ಶುಭ ಹಾರೈಸಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರೈತರು ಆಲೂಗಡ್ಡೆ ಬಿತ್ತನೆ ಬೀಜಗಳನ್ನು ಕೊಳ್ಳಬಹುದಾಗಿದೆ.
ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿರುವ ಕಾರಣ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಹಾಸನ ಜಿಲ್ಲಾಡಳಿತ ಹಲವಾರು ಸಭೆ ನಡೆಸಿ ಆಲೂಗಡ್ಡೆ ಬಿತ್ತನೆ ಬೀಜದ ಗರಿಷ್ಠ ಬೆಲೆಯನ್ನು 2,150 ರೂ. ನಿಂದ 2,250 ರೂ. ತನಕ ನಿಗದಿ ಮಾಡಿದೆ.

ಹಾಸನ ಜಿಲ್ಲೆಯಲ್ಲಿ ಸುಮಾರು 15,000 ಹೆಕ್ಟೇರ್ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆಯಲಾಗುತ್ತದೆ. ಕೃಷಿ ಚಟುವಟಿಕೆ ಅರಂಭಿಸಲು ರೈತರಿಗೆ ಸಹಕಾರಿಯಾಗಲಿ ಎಂದು ಸುಮಾರು 12 ಸಾವಿರ ಟನ್ಗಳಷ್ಟು ಬಿತ್ತನೆ ಬೀಜ ಈಗಾಗಲೇ ದಾಸ್ತಾನು ಮಾಡಲಾಗಿದೆ. ರೈಲ್ವೆ 10,400 ಟನ್ ಆಲೂಗಡ್ಡೆಯನ್ನು ಜಿಲ್ಲೆಗೆ ಪೂರೈಕೆ ಮಾಡಿದೆ.
ರೈತರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ರಸಗೊಬ್ಬರ ಹಾಗೂ ಔಷಧಿ ಮಾರಾಟಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಕೊರೊನಾ ಪರಿಸ್ಥಿತಿ ಹಿನ್ನಲೆಯಲ್ಲಿ ಆಲೂಗಡ್ಡೆ ಬೀಜ ಮಾರಾಟದ ಸಂದರ್ಭದಲ್ಲಿ ಅಗತ್ಯ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಮಾರಾಟಗಾರರು ಹಾಗೂ ರೈತರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.












Click it and Unblock the Notifications