ಪ್ರಹ್ಲಾದ್ ಜೋಶಿ ಬಿಎಸ್ವೈ ಮಹತ್ವದ ಸಭೆ: ಗರಿಗೆದರಿದ ರಾಜಕೀಯ ಚರ್ಚೆ
ನವದೆಹಲಿ, ಅಕ್ಟೋಬರ್ 19: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಯಡಿಯೂರಪ್ಪನವರು ಸುದೀರ್ಘ ಚರ್ಚೆ ನಡೆಸಿದರು. ಈ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವರ ಜೊತೆ ಚರ್ಚಿಸಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸಹಕರಿಸಬೇಕೆಂದು ಯಡಿಯೂರಪ್ಪನವರು ಸೇರಿದಂತೆ ಶಿವಮೊಗ್ಗದ ಬಿಜೆಪಿ ನಾಯಕರು ಪ್ರಹ್ಲಾದ್ ಜೋಶಿಯವರಿಗೆ ಮನವರಿಕೆ ಮಾಡಿದ್ದಾರೆ.
ಜನಪರ ಕಾರ್ಯಕ್ರಮಗಳನ್ನು ಗಮನಿಸಿ, ಬಿಜೆಪಿ ಮತ್ತೊಮ್ಮೆ ಗೆಲ್ಲಿಸಿ: ಬೊಮ್ಮಾಯಿ ಮನವಿ
2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ಹಾಗೂ ಕೇಂದ್ರ ನಾಯಕರ ಭೇಟಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಕೆಲ ಹೊತ್ತು ಇಬ್ಬರು ನಾಯಕರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಸ್ಥಾನ ಗೆಲ್ಲುವ ಗುರಿ, ಸದ್ಯ ನಡೆಯುತ್ತಿರುವ ಜನಸಂಕಲ್ಪ ಯಾತ್ರೆ ಸೇರಿದಂತೆ ಪ್ರಸಕ್ತ ರಾಜ್ಯ ರಾಜಕೀಯ ಆಗು ಹೋಗುಗಳ ಕುರಿತು ಚರ್ಚಿಸಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ.
ಎಲೆಚುಕ್ಕಿ ರೋಗ: ಔಷಧಿ ಸಿಂಪಡಣೆಗೆ ಸಬ್ಸಿಡಿ
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದ ರೈತರಿಗೆ ಆದಾಯ ತಂದು ಕೊಡುವ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆಗೆ ಎಲೆ ಚುಕ್ಕೆ ರೋಗವು ಬಾಧಿಸುತ್ತಿದೆ. ಪರಿಣಾಮ ಅಡಿಕೆ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಆಗಿರುವ ಅರಗ ಜ್ಞಾನೇಂದ್ರ ಅವರು ಅಡಿಕೆಗೆ ತಗುಲಿದ ಎಲೆಚುಕ್ಕಿ ರೋಗ ನಿಯಂತ್ರಿಸಲು ರೈತರಿಗೆ ಔಷಧಿ ಸಿಂಪಡಣೆ, ಸಲಕಣೆಗೆ ಸಬ್ಸಿಡಿ ನೀಡುವುದಾಗಿ ತಿಳಿಸಿದ್ದರು.
ಜೊತೆಗೆ ಈ ಕುರಿತು ರಾಜ್ಯ ನಾಯಕರ ನಿಯೋಗ ವನ್ನು ಕೇಂದ್ರಕ್ಕೆ ಕೊಂಡೊಯ್ದು ಅಗತ್ಯ ವ್ಯವಸ್ಥೆ ಕಲ್ಪಿಸುವ ಕುರಿತು ಮನವಿ ಮಾಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯ ಕೃಷ್ಣ ಭಟ್ ಹಾಗೂ ಮತ್ತಿತರರು ತೆರಳಿದ್ದು. ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆ ಹಾಗೂ ರಾಜ್ಯದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪಿಸುವ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಬಲಿ ಮನವಿ ಮಾಡಿದರು.
ಅಲ್ಲದೇ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು.