ರೈತರೇ ನಿಮ್ಮ ಪಶುಗಳಿಗೆ ತುರ್ತು ಚಿಕಿತ್ಸೆ ಬೇಕೆ? ಇಲ್ಲಿದೆ ಪರಿಹಾರ
ಬೆಂಗಳೂರು, ಆ. 20: ನಿಮ್ಮ ಜಾನುವಾರುಗಳಿಗೆ ಅನಾರೋಗ್ಯವೇ? ಹಾಗಾದರೆ ಇನ್ಮುಂದೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ರೈತರ ಮನೆ ಬಾಗಿಲಿಗೆ ಸುಸಜ್ಜಿತ ತುರ್ತು ಚಿಕಿತ್ಸಾ ಆ್ಯಂಬುಲೆನ್ಸ್ ಬರಲಿದೆ. ರೈತರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಇದೀಗ ಈಡೇರಿಸಿದೆ. ತುರ್ತು ಚಿಕಿತ್ಸೆಯ ಅಗತ್ಯವಿರುವ ಎತ್ತು, ಎಮ್ಮೆ, ದನ, ಹಸುಗಳಿಗೆ ಮನೆಗೆ ಬಂದು ಚಿಕಿತ್ಸೆ ಕೊಡಲು ಯೋಜನೆ ರೂಪಿಸಲಾಗಿದೆ.
ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶುಸಂಜೀವಿನಿ ಹೆಸರಿನಲ್ಲಿ ಯೋಜನೆ ಜಾರಿಗೆ ತರಲಾಗುತ್ತಿದೆ. ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಹಾಯ ಹಸ್ತ ಚಾಚಿದ್ದು, ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಅದಕ್ಕಾಗಿ ಮನುಷ್ಯರಿಗೆ ಆರೋಗ್ಯ ತುರ್ತು ಸಹಾಯವಾಣಿ 108 ರಂತೆಯೇ ಸಹಾಯವಾಣಿ ತೆರೆಯಲಾಗಿದೆ. ವಾರದ 7 ದಿನಗಳು ಹಾಗೂ ದಿನದ 24 ಗಂಟೆಯೂ ಈ ತುರ್ತು ಚಿಕಿತ್ಸೆ ಲಭ್ಯವಾಗಲಿದ್ದು ವಿಧಾನಸೌಧದಲ್ಲಿ ಯೋಜನೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ.
ರೈತರ ಪಶುಗಳಿಗೆ ತುರ್ತು ಚಿಕಿತ್ಸೆ
ಇನ್ಮುಂದೆ ರೈತರ ಮನೆ ಬಾಗಿಲಿಗೆ ಪಶುಸಂಜೀವಿನಿ ಸಂಜೀವಿನಿ ಯೋಜನೆ ಮೂಲಕ ಪಶುವೈದ್ಯರ ತಂಡವೇ ಬರಲಿದೆ. ವಿಧಾನಸೌಧದಲ್ಲಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೆ ತರಲಾಗಿದೆ. ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಯನ್ನು ಇಲಾಖೆಯ ಹೆಲ್ಪ್ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24×7 ಜಾನುವಾರುಗಳ ರಕ್ಷಣೆ ಮಾಡುವ ಗುರಿ ಹೊಂದಲಾಗಿದೆ.
ಕಳೆದ ಬಜೆಟ್ನಲ್ಲಿ ಘೊಷಣೆ ಮಾಡಿದಂತೆ 2 ಕೋಟಿ ರೂಪಾಯಿಗಳ ಅನುದಾನದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಪಶು ಆಂಬ್ಯುಲೆನ್ಸ್ ವಿಶೇಷತೆ
ಮನುಷ್ಯರ ಚಿಕಿತ್ಸೆಗೆ ಬೇಕಾದ ವೈದ್ಯಕೀಯ ಸಲಕರಣೆಗಳಂತೆ ಎಲ್ಲ ಸಲಕರಣಗಳು ಪಶು ಆ್ಯಂಬುಲೆನ್ಸ್ನಲ್ಲಿ ಇರುತ್ತವೆ. ಸುಸಜ್ಜಿತ ಆಂಬ್ಯುಲೆನ್ಸ್ನಲ್ಲಿ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿರುತ್ತದೆ. ಜೊತೆಗೆ 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, AC ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಇದಲ್ಲದೆ ವಾಶ್ ಬೇಸಿನ್, 100 ವ್ಯಾಟ್ ಎಲ್ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ಇದೆ. ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್ಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಒದಗಿಸಲಾಗಿದೆ.
ಮನೆ ಬಾಗಿಲಿಗೆ ಪಶು ಆಸ್ಪತ್ರೆ
ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲಾಗುತ್ತದೆ. ವಿಷಪ್ರಾಶನ, ಪ್ರಸವಕ್ಕೆ ಸಂಭಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು, ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗಗಳಿಗೆ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ತೊಂದರೆ ರೈತರಿಗೆ ತಪ್ಪಲಿದೆ.
ರೈತರ ಮನೆ ಬಾಗಿಲಿಗೆ ತೆರಳಿ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಯೋಜನೆ ರೂಪಿಸಲಾಗುವುದು. ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆಯನ್ನು ನೀಡಲಿದ್ದಾರೆ.
15 ಜಿಲ್ಲೆಗಳಲ್ಲಿ ಸೌಲಭ್ಯ
ಮೊದಲ ಹಂತದಲ್ಲಿ ರಾಯಚೂರು, ಕಲುಬುರ್ಗಿ, ಧಾರವಾಡ, ಬಿಜಾಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಬೀದರ್, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳಿಗೆ ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ಬರಲಿದೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಈ ಸೇವೆ ವಿಸ್ತರಿಸಲಾಗುತ್ತದೆ.
ಪಶುಪಾಲಕರ ಸಹಾಯವಾಣಿ
ತುರ್ತು ಪಶುಪಾಲಕರ ಸಹಾಯ ಪಡೆಯಲು ಸಹಾಯವಾಣಿ ಸಂಖ್ಯೆ 1962 ತೆರೆಯಲಾಗಿದೆ. ಟಾಟಾ ವಿಂಗರ್ 3488 ಮಾದರಿಯ 8 ವಾಹನಗಳು ಮತ್ತು ಟಾಟಾ ವಿಂಗರ್ AC, BS-IV ಮಾದರಿಯ 7 ವಾಹನಗಳಲ್ಲಿ ಆ್ಯಂಬುಲೆನ್ಸ್ ತಯಾರಿಸಲಾಗಿದೆ.