ದಬ್ಬಾಳಿಕೆ ನಿಲ್ಲಿಸಿ; ಪ್ರತಿಭಟನಾನಿರತ ರೈತರಿಂದ ರಾಷ್ಟ್ರಪತಿಗಳಿಗೆ ಪತ್ರ
ನವದೆಹಲಿ, ಫೆಬ್ರವರಿ 24: ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನಾನಿರತ ರೈತರು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಿಲ್ಲಿಸಬೇಕು ಎಂದು ರಾಷ್ಟ್ರಪತಿಗಳನ್ನು ಕೋರಿಕೊಂಡಿದ್ದಾರೆ.
ಬುಧವಾರ ಸಂಯುಕ್ತ ಕಿಸಾನ್ ಮೋರ್ಚಾ ದಮನ್ ಪ್ರತಿರೋಧ ದಿವಸವನ್ನು ಹಮ್ಮಿಕೊಂಡಿದ್ದು, ಈ ಸಂದರ್ಭ ರಾಷ್ಟ್ರಪತಿಗಳಿಗೆ ಹಲವು ರೈತ ಸಂಘಟನೆಗಳು ಸೇರಿ ಪತ್ರ ಬರೆದಿವೆ. ಪ್ರತಿಭಟನಾನಿರತ ರೈತರು ಹಾಗೂ ರೈತರನ್ನು ಬೆಂಬಲಿಸುತ್ತಿರುವವರ ಮೇಲೆ ದಬ್ಬಾಳಿಕೆಯನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿವೆ. ದೇಶಾದ್ಯಂತ ನೂರಾರು ಕಡೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಪ್ರತಿಭಟನೆಗಳು ನಡೆಯುತ್ತಿದ್ದು, ಎಲ್ಲರ ಪರವಾಗಿ ಜ್ಞಾಪಕ ಪತ್ರವನ್ನು ಸಲ್ಲಿಸಲಾಗಿದೆ.
ಕೃಷಿ ಕಾಯ್ದೆಗಳಲ್ಲಿ ಲೋಪವಿದ್ದರೆ ಚರ್ಚೆಗೆ ಸಿದ್ಧ ಎಂದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ದೆಹಲಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಟೂಲ್ಕಿಟ್ ಪ್ರಕರಣದಲ್ಲಿ ಬಂಧಿತರಾಗಿದ್ದ ಬೆಂಗಳೂರಿನ ದಿಶಾ ರವಿ ಬಿಡುಗಡೆಯನ್ನು ರೈತ ಸಂಘಗಳು ಸ್ವಾಗತಿಸಿವೆ.
ಸಂಯುಕ್ತ ಕಿಸಾನ್ ಮೋರ್ಚಾ ಜೊತೆ ಕೈಜೋಡಿಸಿರುವ ಕೆಲವು ಸಂಘಟನೆಗಳು ಬಿಹಾರದಲ್ಲಿ ರೈತ ಪರ ಪ್ರತಿಭಟನೆ ನಡೆಸಿದ್ದು, ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 92 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.