ಅಕ್ಟೋಬರ್ 6, 7ರಂದು ರಾಹುಲ್ ರಾಜ್ಯ ಪ್ರವಾಸ
ಬೆಂಗಳೂರು, ಸೆ. 18 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕರ್ನಾಟಕ ಭೇಟಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ರಾಹುಲ್ ರಾಜ್ಯಕ್ಕೆ ಆಗಮಿಸಲಿದ್ದು , ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಾಹುಲ್ ಗಾಂಧಿ ಅವರು ಅಕ್ಟೋಬರ್ 2ನೇ ವಾರದಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ' ಎಂದು ಹೇಳಿದರು. ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಅಕ್ಟೋಬರ್ 6 ಮತ್ತು 7 ರಂದು ರಾಹುಲ್ ರಾಜ್ಯ ಪ್ರವಾಸ ಮಾಡಲಿದ್ದಾರೆ. [ರೈತರ ಆತ್ಮಹತ್ಯೆಗಳು ನೋವು ತಂದಿದೆ: ಸಿದ್ದರಾಮಯ್ಯ]

ರಾಜ್ಯಕ್ಕೆ ಆಗಮಿಸುವ ರಾಹುಲ್ ಗಾಂಧಿ ಅವರು ವಿವಿಧ ಜಿಲ್ಲೆಗಳಿಗೆ ತೆರಳಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗೆ ಅವರು ಭೇಟಿ ನೀಡುವ ಸಾಧ್ಯತೆ ಇದೆ. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]
ಹಿಂದೆಯೇ ಬರಬೇಕಿತ್ತು : ಜುಲೈ ತಿಂಗಳಿನಲ್ಲಿಯೇ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಬೇಕಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಮತ್ತು ಮಾಜಿ ಕೇಂದ್ರ ಸಚಿವ ಚಲ್ಲಂರಾಜು ಅವರು ಮಂಡ್ಯಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಮಾಹಿತಿ ಸಂಗ್ರಹಿಸಿ, ವರದಿ ನೀಡಿದ್ದರು.[ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ ರಾಹುಲ್]
ಆದರೆ, ಬಿಬಿಎಂಪಿ ಚುನಾವಣೆ ಎದುರಾಗಿದ್ದರಿಂದ ರಾಹುಲ್ ಭೇಟಿ ಮುಂದಕ್ಕೆ ಹೋಯಿತು. ಈಗ ರಾಹುಲ್ ಗಾಂಧಿ ಅವರ ಭೇಟಿಯ ದಿನಾಂಕ ನಿಗದಿಯಾಗಿದೆ. ಆದರೆ, ಯಾವ-ಯಾವ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. [ಪಿಟಿಐ ಚಿತ್ರ]












Click it and Unblock the Notifications