ರಾಯಚೂರು : 82ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?
ರಾಯಚೂರು, ಆಗಸ್ಟ್ 6 : ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಕೆಲವೇ ದಿನಗಳಲ್ಲಿ ಈ ಕುರಿತು ಅಂತಿಮ ತಿರ್ಮಾನ ಹೊರಬೀಳುವ ಸಾಧ್ಯತೆ ಇದೆ.
ಅಕ್ಟೋಬರ್ 9, 10 ಮತ್ತು 11 ರಂದು ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆಯೂ ನಡೆದಿದೆ. [ಅಕ್ಟೋಬರ್ ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ]

ಆದರೆ, ರೈತರ ಸರಣಿ ಆತ್ಮಹತ್ಯೆ ಮತ್ತು ಬರದ ಕಾರಣ ರಾಯಚೂರಿನಲ್ಲಿ ನಡೆಸಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಸಮ್ಮೇಳನ ಮುಂದೂಡಲು ಒತ್ತಾಯ ಬರುತ್ತಿರುವುದು ನಿಜ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದ್ದಾರೆ. [81ನೇ ಸಾಹಿತ್ಯ ಸಮ್ಮೇಳನದ ಚಿತ್ರಗಳು]
ಹತ್ತು ದಿನಗಳಲ್ಲಿ ಸ್ವಾಗತ ಸಮಿತಿ ಸಭೆ ಕರೆದು ಈ ಒತ್ತಾಯದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕೃಷಿಕರು ಸಂಕಷ್ಟದಲ್ಲಿದ್ದಾರೆ. ರೈತರ ಆತ್ಮಹತ್ಯೆಯಿಂದಾಗಿ ಸೂತಕದ ವಾತಾವರಣವಿದೆ. ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ ಈ ಎಲ್ಲಾ ವಿಚಾರಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶಿವರಾಜ ಪಾಟೀಲ್ ತಿಳಿಸಿದ್ದಾರೆ.
ಅಂದಹಾಗೆ ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು.












Click it and Unblock the Notifications