ಮಳೆ ಆರ್ಭಟ; ಆಗಸ್ಟ್ 3ರಿಂದ ಬೆಳೆ ಹಾನಿ, ಮನೆ ಹಾನಿ ಸರ್ವೆ ಕಾರ್ಯ
ಬೆಂಗಳೂರು, ಆಗಸ್ಟ್ 01; ಕರ್ನಾಟಕದಲ್ಲಿ ಕಳೆದ ವಾರದಿಂದ ನೈಋತ್ಯ ಮುಂಗಾರು ಮಳೆ ಅಬ್ಬರ ಕಡಿಮೆಯಾಗಿದೆ. ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಹಲವಾರು ಬೆಳೆಗಳು ಹಾನಿಯಾಗಿವೆ. ಸರ್ಕಾರ ಈ ಕುರಿತು ಸಮೀಕ್ಷೆ ನಡೆಸಿದ ಬಳಿಕ ಪರಿಹಾರವನ್ನು ನೀಡಲಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಮಳೆ, ಬೆಳೆ ಹಾನಿ, ಪರಿಹಾರ ವಿತರಣೆಯ ಬಗ್ಗೆ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವರು, "ಕಳೆದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ಮಳೆಯಿಂದಾದ ಬೆಳೆ ಮತ್ತು ಮನೆ ಹಾನಿಗಳ ಸರ್ವೆ ಕಾರ್ಯವನ್ನು ಆಗಸ್ಟ್ 3 ರಿಂದ 7ರವರೆಗೆ ಮುಗಿಸಬೇಕು" ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ನೆರೆ ಹಾವಳಿಯಿಂದ ಮಾನವ ಮತ್ತು ಜಾನುವಾರುಗಳ ಜೀವ ಹಾನಿ, ಕೃಷಿ ಬಿತ್ತನೆ ಕುರಿತು ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, "ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಅವರನ್ನು ಬದುಕಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕಿದೆ" ಎಂದರು.
ಸಿದ್ದರಾಮಯ್ಯ ಸಭೆ; ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿಲ್ಲ. ಆದರೆ ಕರಾವಳಿ, ಮಲೆನಾಡು ಭಾಗ, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆಯಿಂದಾಗಿ ಬೆಳೆಹಾನಿಯಾಗಿದೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿಯಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಬೆಳೆ ಹಾನಿಯಾದ ರೈತರಿಗೆ ಎನ್. ಡಿ. ಆರ್. ಎಫ್ ಮಾರ್ಗಸೂಚಿಯಂತೆ ಬೆಳೆ ಪರಿಹಾರ ನೀಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತೊಗರಿ, ಉದ್ದು ಸೇರಿದಂತೆ ಬಿತ್ತನೆಯಾದ ಕೆಲವು ಬೆಳೆಗಳು ಜಲಾವೃತಗೊಂಡು ಹಾನಿಯಾಗಿವೆ. ಮಳೆಯಿಂದ ಹಾನಿಯಾಗಿರುವ ಬೆಳೆ ವೀಕ್ಷಣೆ ಮಾಡಿರುವ ಜಿಲ್ಲಾಧಿಕಾರಿಗಳು ಬೆಳೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದೇ ರೀತಿ ಮನೆ ಹಾನಿಯಾದ ಬಗ್ಗೆ ಸಹ ಪರಿಶೀಲನೆ ನಡೆದಿದೆ.
ಕೃಷಿ ಇಲಾಖೆ ಅಧಿಕಾರಿಗಳು ಸಹ ಜುಲೈ ಮಳೆಗೆ ಮುಂಚೆ ಬಿತ್ತನೆಯಾದ ಸೋಯಾಬಿನ್, ಹೆಸರು, ಉದ್ದು ಬೆಳೆಗಳು ಮಳೆಯ ಕಾರಣ ಹಳದಿ ವರ್ಣಕ್ಕೆ ತಿರುಗುತ್ತಿವೆ. ಇದಕ್ಕೆ ಕಾರಣ ಮತ್ತು ರೈತರು ಈ ಬೆಳೆಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಸಹ ರೈತರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ರಾಜ್ಯದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಸೂಚನೆಗಳನ್ನು ನೀಡಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ನಿರಂತರ ಮಳೆ ಸುರಿದ ಪರಿಣಾಮ ಬೆಳೆಗಳಲ್ಲಿ ಕಂಡುಬರುವ ರೋಗಗಳ ನಿಯಂತ್ರಣ, ಹತೋಟಿ ಕ್ರಮಗಳ ಕುರಿತು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಹೇಳಿದ್ದಾರೆ.












Click it and Unblock the Notifications