ಮಹಾತ್ಮ ಗಾಂಧಿ ಹುತಾತ್ಮ ದಿನ; ಕೇಂದ್ರದ ವಿರುದ್ಧ ಸಂಯುಕ್ತ ಹೋರಾಟ ಸಮಿತಿ ಶಾಂತಿಯುತ ಹೋರಾಟ
ಬೆಂಗಳೂರು, ಜನವರಿ 29: ಮಹಾತ್ಮ ಗಾಂಧಿಯವರು ಹುತಾತ್ಮರಾದ ದಿನವನ್ನು ಶಾಂತಿಯುತ ಸಂಘರ್ಷ ಸಂಕಲ್ಪ ದಿನವನ್ನಾಗಿ ಆಚರಿಸಲು ತೀರ್ಮಾನಿಸಿದ್ದು, ರೈತರ ಬೇಡಿಕೆಗಳಿಗೆ ಆಗ್ರಹಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಸಂಯುಕ್ತ ಹೋರಾಟ ಸಮಿತಿ ತಿಳಿಸಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ರಾಜ್ಯದ ರೈತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ, ಮಹಿಳೆಯರು ಹಾಗೂ ಎಲ್ಲಾ ದೇಶಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಿತಿ ವಿನಂತಿಸಿದೆ.
ದೆಹಲಿ-ಯುಪಿ ಗಡಿಯಿಂದ ರೈತರನ್ನು ಓಡಿಸುವ ಯತ್ನದಲ್ಲಿ ಪೊಲೀಸರು!
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ನೀಡುವ ಕಾನೂನು ಜಾರಿ ಮಾಡಬೇಕೆಂದು ಸಾವಿರಾರು ರೈತರು ಎರಡು ತಿಂಗಳುಗಳಿಂದ ದೆಹಲಿಯಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ, ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜೊತೆಗೆ ಅನ್ನದಾತ ರೈತರನ್ನು ದೇಶದ್ರೋಹಿಗಳು, ಉಗ್ರಗಾಮಿಗಳು ಎಂದು ಕರೆದು ಅಪಪ್ರಚಾರ ಮಾಡುತ್ತಿದೆ ಎಂದು ಸಮಿತಿ ಆರೋಪಿಸಿದೆ.
ಜನವರಿ 26ರಂದು ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯನ್ನು ಮುಂದಿಟ್ಟುಕೊಂಡು ರೈತರ ಹೋರಾಟಕ್ಕೆ ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿದೆ. ರೈತ ಹೋರಾಟವನ್ನು ದಮನ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ವಿರುದ್ಧವಾಗಿ ಶಾಂತಿದೂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನ ಜನವರಿ 30ರಂದು ದೇಶಾದ್ಯಂತ ಶಾಂತಿಯುತ ಸಂಘರ್ಷದ ಸಂಕಲ್ಪದೊಂದಿಗೆ ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ತಿಳಿಸಿದೆ.