ಬೆಳಗಾವಿ ಅಧಿವೇಶನದಂದು ಸುವರ್ಣ ವಿಧಾನಸೌಧ ಮುತ್ತಿಗೆ; ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ನವೆಂಬರ್ 24: "ಪ್ರಧಾನಿ ನರೇಂದ್ರ ಮೋದಿ ಬಹು ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತಲೇ, ಸಂವಿಧಾನಾತ್ಮಕ ಪ್ರಕ್ರಿಯೆಯಲ್ಲಿ ಕಾಯಿದೆಗಳನ್ನು ಹಿಂಪಡೆಯುವ ತನಕ ರಾಜ್ಯದಾದ್ಯಂತ ಹೆದ್ದಾರಿ ತಡೆ ಚಳವಳಿ ಮುಂದುವರೆಸುತ್ತೇವೆ." ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
"ಇದೇ ವೇಳೆ ದಿಲ್ಲಿ ರೈತ ಚಳವಳಿಯ ಇನ್ನಿತರ ಬಹು ಮುಖ್ಯ ಬೇಡಿಕೆಗಳಾದ ರೈತರ ಬೆಳೆಗೆ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸುವುದೂ ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಬಾರದೆಂಬುದನ್ನೂ ಕೇಂದ್ರ ಸರ್ಕಾರ ಮಾನ್ಯ ಮಾಡಬೇಕು," ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, "ಕರ್ನಾಟಕ ರಾಜ್ಯದಲ್ಲಿ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯಿದೆಗಳಿಗೆ ತಂದಿರುವ ತಿದ್ದುಪಡಿಯನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಸಂದರ್ಭದಲ್ಲಿ ರಾಜ್ಯದ ರೈತರು ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಮುತ್ತಿಗೆ ಹಾಕುತ್ತೇವೆ," ಎಂದು ಎಚ್ಚರಿಕೆ ನೀಡಿದ್ದಾರೆ.
"ಕಳೆದ ಒಂದು ವರ್ಷದಿಂದ ರೈತ ಚಳವಳಿಯಲ್ಲಿ ನಿರತರಾಗಿರುವ ಸುಮಾರು 700ಕ್ಕೂ ಹೆಚ್ಚು ಸತ್ಯಾಗ್ರಹಿಗಳು ಹುತಾತ್ಮರಾಗಿದ್ದಾರೆ. ಈ ಕುಟುಂಬಗಳಿಗೆ ತೆಲಂಗಾಣ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಿಸಿದೆ. ಅಂತೆಯೇ ಕರ್ನಾಟಕ ರಾಜ್ಯ ಸರ್ಕಾರವು ತಲಾ 10 ಲಕ್ಷ ಮತ್ತು ಕೇಂದ್ರ ಸರ್ಕಾರ ತಲಾ 1 ಕೋಟಿ ಪರಿಹಾರ ಕೊಡಬೇಕೆಂದು," ಒತ್ತಾಯಿಸಿದ್ದಾರೆ.
ಮುಂದುವರೆದು ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, "ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಾಜ್ಯದ ಬಹುತೇಕ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಜನ ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಷ್ಟ ಅನುಭವಿಸಿರುವ ಎಲ್ಲಾ ರೈತರ ಹೊಲ, ತೋಟ ಮತ್ತು ಗದ್ದೆಗಳಲ್ಲಿ ಬೆಳೆಯಾನುಸಾರ ಆಗಿರುವ ನಷ್ಟವನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಘೋಷಿಸಬೇಕೆಂದು," ಆಗ್ರಹಿಸಿದ್ದಾರೆ.
Recommended Video