ಕೃಷಿ ಕಾಯ್ದೆ; ಜಂಟಿ ಕಾರ್ಯತಂತ್ರ ರೂಪಿಸಲು ಸೋನಿಯಾ ಗಾಂಧಿ ಚರ್ಚೆ
ನವದೆಹಲಿ, ಜನವರಿ 11: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿನ ರೈತರ ಹೋರಾಟ ಸೋಮವಾರ 47ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಪಕ್ಷ ನಾಯಕರೊಂದಿಗೆ ಕೃಷಿ ಕಾಯ್ದೆಗಳ ಕುರಿತು ಜಂಟಿ ಕಾರ್ಯತಂತ್ರ ರೂಪಿಸಲು ಚರ್ಚೆ ನಡೆಸಿದ್ದು, ಸಂಸತ್ತಿನ ಅಧಿವೇಶನಕ್ಕೂ ಮುನ್ನ ಸಭೆ ನಡೆಸುವುದಾಗಿ ತಿಳಿದುಬಂದಿದೆ.
ಕೃಷಿ ಕಾಯ್ದೆಗಳ ವಿರುದ್ಧದ ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿತ್ತು. ಕಳೆದ ಸಭೆಯಲ್ಲಿ ಕೃಷಿಕಾಯ್ದೆಗಳ ವಿರುದ್ಧವಾಗಿ ದೇಶಾದ್ಯಂತ ಎರಡು ಕೋಟಿ ಸಹಿಗಳನ್ನು ಸಂಗ್ರಹಿಸಿದ್ದ ಕಾಂಗ್ರೆಸ್, ಕೇಂದ್ರಕ್ಕೆ ಸಲ್ಲಿಸಿತ್ತು.
ಇದೀಗ ಜಂಟಿ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ತಮ್ಮ ಘೋಷಣೆ ಸಲುವಾಗಿ ಜಂಟಿ ಕಾರ್ಯತಂತ್ರ ಹೆಣೆಯಲು ಮುಂದಾಗಿರುವುದಾಗಿ ತಿಳಿದುಬಂದಿದೆ.

ಹೋರಾಟನಿರತ ರೈತರು, ಕೇಂದ್ರದ ನಡುವೆ ಎಂಟನೇ ಮಾತುಕತೆಯೂ ವಿಫಲವಾಗಿದ್ದು, ಜನವರಿ 15ರಂದು ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ. ಕೇಂದ್ರ ಪರಿಚಯಿಸಿರುವ ಕೃಷಿ ಮಾರುಕಟ್ಟೆ ಕಾಯ್ದೆ, ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕು (ತಿದ್ದುಪಡಿ) ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ನವೆಂಬರ್ 26ರಿಂದಲೂ ದೆಹಲಿ ಗಡಿಗಳಲ್ಲಿ ಸುಮಾರು 40 ರೈತ ಸಂಘಟನೆಯ ರೈತ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications