ಮುಖ್ಯಮಂತ್ರಿಗಳ ಭರವಸೆ ಬಳಿಕವೂ ನಿಲ್ಲದ ಕಬ್ಬು ಬೆಳೆಗಾರರ ಪ್ರತಿಭಟನೆ
ಬಾಗಲಕೋಟೆ, ನವೆಂಬರ್ 18 : ಬಾಲಗಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರತಿಭಟನೆ 2ನೇ ದಿನವೂ ಮುಂದುವರೆದಿದೆ. ಶುಕ್ರವಾರ ಮುಧೋಳ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದರು.
ಕಬ್ಬು ಬೆಳೆಗಾರರ ಸಮಸ್ಯೆಯನ್ನು ಆಲಿಸಿ ಪರಿಹಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಭರವಸೆ ನೀಡಿದ್ದಾರೆ. ರೈತ ಮುಖಂಡರ ಜೊತೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಆದರೆ, ಶನಿವಾರ ರೈತರು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಪ್ರತಿಭಟನೆ ನಡೆಸಿದರು. ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಬಳಿ 200ಕ್ಕೂ ಹೆಚ್ಚು ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ಗಳನ್ನು ತಡೆದು ನಿಲ್ಲಿಸಿದರು.

ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿ ಮಾಡಲು ಹಾಗೂ 2018-19ನೇ ಸಾಲಿನ ಎಫ್ಆರ್ಪಿ ದರ ಪ್ರಕಟಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೈತರು ಶುಕ್ರವಾರ ಮುಧೋಳ ಬಂದ್ ನಡೆಸಿದ್ದರು.
ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರೈತರು ನಡೆಸುತ್ತಿರುವ ಧರಣಿಯು ಶನಿವಾರವೂ ಮುಂದುವರೆದಿದ್ದು 14ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರಿಸುವ ತನಕ ಕಬ್ಬು ಸಾಗಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು.
ಪ್ರತಿಭಟನೆಯ ನಡುವೆಯೇ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ವಾಹನಗಳ ಚಕ್ರದ ಗಾಳಿಯನ್ನು ತೆಗೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ 3 ಕಿ.ಮೀ. ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಮುಧೋಳ ತಾಲೂಕಿನ 4 ಸಕ್ಕರೆ ಕಾರ್ಖಾನೆಗಳ ಪೈಕಿ ಮೂರು ಕಾರ್ಖಾನೆಗಳು ಇದುವರೆಗೂ ಕಬ್ಬು ನುರಿಸುವ ಕೆಲಸವನ್ನು ಆರಂಭಿಸಿಲ್ಲ. ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗಿದ್ದು, ಸ್ಥಗಿತಗೊಳಿಸುವಂತೆ ಆಡಳಿತ ಮಂಡಳಿಗೆ ರೈತರು ಮನವಿ ಮಾಡಿದ್ದಾರೆ.












Click it and Unblock the Notifications