ಸಚಿವ ಶಿವಾನಂದ ಪಾಟೀಲ್ ಚಾಮರಾಜನಗರಕ್ಕೆ ಕಾಲು ಇಡಲಿ ಐತಿ ಮಾರಿಹಬ್ಬ: ಕಬ್ಬು ಬೆಳೆಗಾರರ ಆಕ್ರೋಶ
ಚಾಮರಾಜನಗರ, ಡಿಸೆಂಬರ್, 25: ರೈತರು ಸಾಲಮನ್ನಾ ಆಗಲಿ ಎಂದು ಬರಗಾಲ ಬರಲಿ ಎಂದು ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ವಿರುದ್ಧ ಚಾಮರಾಜನಗರದಲ್ಲಿ ಕಬ್ಬು ಬೆಳೆಗಾರರು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಅಧಿಕಾರಕ್ಕೆ ಬಂದರೆ ಸಾಲಮನ್ನಾ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಚುನಾವಣಾ ಭಾಷಣಗಳಲ್ಲಿ ಹೇಳಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಅವರು ಸಾಲಮನ್ನಾದ ಬಗ್ಗೆ ರೈತರ ಕುರಿತು ಹಗುರವಾಗಿ ಹೇಳಿಕೆ ಕೊಡುತ್ತಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಚಿವ ಪಾಟೀಲ್ ಭಾವಚಿತ್ರವನ್ನು ದಹಿಸಲು ಮುಂದಾದ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ, ಪಟ್ಟು ಬಿಡದ ರೈತರು ಭಾವಚಿತ್ರವನ್ನು ಹರಿದು ಆಕ್ರೋಶ ಹೊರಹಾಕಿದರು.
ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಅನ್ನ ತಿನ್ನುವ ನಾಲಿಗೆಯಾಗಿದ್ದರೇ ರೈತ ವಿರೋಧಿ ಹೇಳಿಕೆ ಕೊಡುತ್ತಿರಲಿಲ್ಲ. ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಸಾಲದ ಬಡ್ಡಿ ಮನ್ನಾ ಮಾಡಿದ ವೇಳೆ ನೀವೇನೂ ಸತ್ತು ಹೋಗಿದ್ರಾ, ಆಗ ಮಾತನಾಡಬೇಕಿತ್ತು. ರೈತರ ಸಾಲಮನ್ನಾ ಮಾಡಲಾಗಲ್ಲ ಎಂದು ಹೇಳಬೇಕಿತ್ತು. ಆಗ ಏನು ನಿಮ್ಮನ್ನು ಗಿರವಿ ಇಡಲಾಗಿತ್ತಾ? ಪ್ರಶನಿಸುವ ಮೂಲಕ ಆಕ್ರೋಶ ಹೊರಹಾಕಿದರು.
ರೈತರ ಆತ್ಮಹತ್ಯೆ ಬಗ್ಗೆ ಈ ಹಿಂದೆ ಮಾತನಾಡಿದ್ದಾಗ ಬುದ್ಧಿ ಕಲಿಸಿದ್ದೆವು. ಈಗ ಮತ್ತೇ ಬಾಲ ಬಿಚ್ಚಿದ್ದಾರೆ, ಶಿವಾನಂದ ಪಾಟೀಲ್ ಅವರ ಬಾಲವನ್ನು ಕತ್ತರಿಸುತ್ತೇವೆ ಎಂದು ಕಿಡಿಕಾರಿದರು. ಇನ್ನು ಸಚಿವ ಶಿವಾನಂದ ಪಾಟೀಲ ಅವರನ್ನು ಸಾರ್ವಜನಿಕವಾಗಿ ಓಡಾಡಲು ಬಿಡುವುದಿಲ್ಲ, ಚಾಮರಾಜನಗರಕ್ಕೆ ಬಂದರೆ ಮಸಿ ಬಳಿಯುತ್ತೇವೆ ಎಂದು ಎಚ್ಚರಿಕೆ ಕೊಟ್ಟರು.
ಯತ್ನಾಳ್ ಬಗ್ಗೆ ಮಾತನಾಡಲ್ಲ ಎಂದ ಬಿಎಸ್ವೈ
ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಪಕ್ಷದ ಹೈಕಮಾಂಟ್ಗೆ ದೂರು ಕೊಡಲು ಹೋಗುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಾವಣಗೆರೆಯಲ್ಲಿ ಭಾನುವಾರ (ಡಿಸೆಂಬರ್ 24) ಹೇಳಿದ್ದರು.
ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಆರೋಪ, ಟೀಕೆ ಕುರಿತಂತೆ ಪ್ರತಿಕ್ರಿಯೆ ನೀಡುವುದಿಲ್ಲ. ಮುಂಬರುವ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದಷ್ಟೇ ಹೇಳಿದರು. ಇನ್ನು ಜಾತಿಗಣತಿ ವಿಚಾರ ಕುರಿತಂತೆ ವಿರೋಧ ವ್ಯಕ್ತವಾಗಿದೆ. ವೈಜ್ಞಾನಿಕವಾಗಿ ಜಾತಿಗಣತಿ ಆಗಬೇಕು ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿ ಬರುತ್ತಿದೆ. ನಮ್ಮದೂ ಸಹ ಇದೇ ಅಭಿಪ್ರಾಯವಾಗಿದೆ. ಜನರ ವಿರೋಧದ ನಡುವೆಯೇ ಸರ್ಕಾರ ಯಾವುದೇ ಕಾರಣಕ್ಕೂ ವರದಿ ಅಂಗೀಕರಿಸಬಾರದು ಎಂದು ಅಭಿಪ್ರಾಯಪಟ್ಟರು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ಕರ್ನಾಟಕದ ನೂತನ ರಾಜ್ಯ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ನೂತನವಾಗಿ ನೇಮಕಗೊಂಡ ಎಲ್ಲಾ ರಾಜ್ಯ ಪದಾಧಿಕಾರಿಗಳನ್ನು ಅಳೆದು ತೂಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಆಯ್ಕೆ ಪಾರದರ್ಶಕವಾಗಿ ನಡೆದಿದೆ, ಅಸಮಾಧಾನ ಕುರಿತಂತೆ ಮಾಹಿತಿ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.
ನಾವು ಅಲ್ಪಸಂಖ್ಯಾತ ವಿರೋಧಿಗಳಲ್ಲ. ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಬಿಡಬೇಕು. ಇದರಿಂದ ಯಾವುದೇ ಪ್ರಯೋಜನವಾಗದು. ಹಿಜಾಬ್ ವಾಪಸ್ ಪಡೆಯುವ ಕುರಿತಂತೆ ನಾವು ತೀವ್ರ ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಉಲ್ಟಾ ಹೊಡೆದಿದ್ದಾರೆ. ಮೊದಲು ಹಿಜಾಬ್ ವಾಪಸ್ ಪಡೆಯುತ್ತೇವೆ ಎಂದರು. ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇನ್ನು ನಿರ್ಧಾರವಾಗಿಲ್ಲ ಎನ್ನುತ್ತಾರೆ. ಸಮಾಜದಲ್ಲಿ ಧರ್ಮ- ಧರ್ಮಗಳ ನಡುವೆ ವಿಷ ಬೀಜ ಬಿತ್ತುವ, ಕಂದಕ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಯಡಿಯೂರಪ್ಪ ಹೇಳಿದರು.












Click it and Unblock the Notifications