ರೈತರ ಸಮಸ್ಯೆಗಳಿಗೆ ಕೃಷಿ ಇಲಾಖೆ ಸ್ಪಂದಿಸಬೇಕು; ನಿರ್ದೇಶಕ ಶ್ರೀನಿವಾಸ್ ಆದೇಶ
ಬೆಂಗಳೂರು, ಏಪ್ರಿಲ್ 30: ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಆದೇಶಿಸಿದ್ದಾರೆ.
ಕೋವಿಡ್-19ರ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹದಿನಾಲ್ಕು ದಿನಗಳ ಕಾಲ ಲಾಕ್ಡೌನ್ ಹೇರಿದ್ದು, ಈ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅಗ್ರಿವಾರ್ ರೂಮ್ ಅನ್ನು ಸೇತುವೆಯಂತೆ ಕಾರ್ಯನಿರ್ವಹಿಸಲು ಆರಂಭಿಸಲಾಗಿದೆ. ಸರ್ಕಾರದ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ (outside Containment Zone) ವಿನಾಯಿತಿ ನೀಡಲಾಗಿದೆ.
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಚಟುವಟಿಕೆಗಳು, ಸಂಬಂಧಿತ ಮಳಿಗೆಗಳು ಮತ್ತು ಗೋದಾಮುಗಳು ಸೇರಿದಂತೆ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳು, ಯಂತ್ರೋಪಕರಣಗಳಿಗೆ ವಿನಾಯಿತಿ ನೀಡಲಾಗಿದೆ. ಕೃಷಿ ಸಂಬಂಧಿತ ಚಟುವಟಿಕೆಗಳು, ಮೀನುಗಾರಿಕೆ, ಕುಕ್ಕುಟ, ಜಾನುವಾರು ಹಾಗೂ ಹೈನುಗಾರಿಕೆ ಇತ್ಯಾದಿಗಳಿಗೆ ವಿನಾಯಿತಿ ನೀಡಲಾಗಿದೆ .
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಗಳಲ್ಲಿ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಗೊಂದಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಲಹೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರುಗಳು ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಒಂದು ದಿನ ಸಭೆ ಆಯೋಜಿಸಿ, ರೈತರು ಕೋವಿಡ್-19 ನಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಳಬಹುದಾದ ಪ್ರಶ್ನೆಗಳಿಗೆ ಸೂಕ್ತ ಸಲಹೆ, ಪರಿಹಾರ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಬೇಕು.
ಈ ಬಗ್ಗೆ ಯಾವುದಾದರು ಪ್ರಶ್ನೆಗಳಿಗೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಸೂಪರಿಟೆಂಡೆಂಟ್ ಆಫ್ ಪೊಲೀಸ್ರವರ ಗಮನಕ್ಕೆ ತಂದು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಸಭೆ ಆಯೋಜಿಸುವಾಗ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್-19ರ ಪ್ರಸರಣವನ್ನು ನಿಯಂತ್ರಿಸಲು ನಿಗದಿಪಡಿಸಿರುವ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಹಾಗೂ ಇನ್ನಿತರೆ ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೃಷಿ ನಿರ್ದೇಶಕ ಶ್ರೀನಿವಾಸ್ ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.