ತೊಗರಿ ಬೆಳೆ ನಷ್ಟ; ಶೇ 25ರಷ್ಟು ಮಧ್ಯಂತರ ಪರಿಹಾರಕ್ಕೆ ಶಿಫಾರಸು
ಕಲಬುರಗಿ, ನವೆಂಬರ್ 03: ಕಲಬುರಗಿ ಜಿಲ್ಲೆಯಾದ್ಯಂತ ಜೂನ್, ಆಗಸ್ಟ್ ಮತ್ತು ಅಕ್ಟೋಬರ್ನಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಇದರಿಂದಾಗಿ ತೊಗರಿ ಬೆಳೆ ನಷ್ಟವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯ್ ತರನ್ನುಮ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕೃಷಿ ಉನಿರ್ದೇಶಕ ಸೋಮಶೇಖರ ಬಿರಾದಾರ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಲೀಡ್ ಬ್ಯಾಂಕ್ ಮಾನ್ಯೇಜರ್ ಸದಾಶಿವ ರಾತ್ರಿಕರ್, ವಿಮಾ ಕಂಪನಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ ಇಳುವರಿ ನಷ್ಟ ಸಂಭವಿಸಿದೆ ಎಂದು ಹೇಳಿದರು.
ತೊಗರಿ ಬೆಳೆ ನಷ್ಟದ ಹಿನ್ನೆಲೆಯಲ್ಲಿ ತೊಗರಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಪರಿಹಾರ ಸಮಿತಿ ನಿರ್ಧರಿಸಿದೆ.
ವರದಿ ಸಲ್ಲಿಸುವಂತೆ ಸೂಚನೆ; ರೈತರಿಗೆ ಪರಿಹಾರ ಒದಗಿಸುವ ಕುರಿತಂತೆ ಸುದೀರ್ಘವಾಗಿ ಚರ್ಚಿಸಿ ಇದಕ್ಕೆ ಪೂರಕವಾಗಿ ಮುಂದಿನ ಮೂರು ದಿನಗಳಲ್ಲಿ (ನವೆಂಬರ್ 5 ರೊಳಗೆ) ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಜಂಟಿಯಾಗಿ ಜಿಲ್ಲೆಯಾದ್ಯಂತ ತೊಗರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಬೆಳೆ ಹಾನಿ ಸಮೀಕ್ಷೆ ಮಾಡುವಾಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 10 ರಂತೆ ಬೆಳೆ ಪ್ರದೇಶಗಳನ್ನು ಗುರುತಿಸಿ ಪ್ರಯೋಗಕ್ಕೆ ಒಳಪಡಿಸಬೇಕು. ಪಾರದರ್ಶಕವಾಗಿ ಮತ್ತು ನಿಖರವಾಗಿ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ಕೊಟ್ಟರು.
ಸಭೆಯಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಾಟೀಲ್, ಸತತವಾಗಿ ವರುಣ ಅವಕೃಪೆಯಿಂದ ಜಿಲ್ಲೆಯಲ್ಲಿ ತೊಗರಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿ ರೈತ ಸಮುದಾಯ ಸಂಕಷ್ಟದಲ್ಲಿದ್ದು, ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಕೋರಬೇಕೆಂದು ಹೇಳಿದರು.
ಕಲಬುರಗಿ ಜಿಲ್ಲೆ ಕರ್ನಾಟಕದಲ್ಲಿ ತೊಗರಿ ನಾಡು ಎಂದೇ ಖ್ಯಾತಿ ಪಡೆದಿದೆ. ಕಳೆದ ವರ್ಷ ನೆಟೆ ರೋಗದಿಂದ ಬೆಳೆ ನಷ್ಟವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಈ ಬಾರಿ ಮಳೆಯ ಕೊರತೆ ಕಾರಣ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ.
ಕರ್ನಾಟಕ ಸರ್ಕಾರ ಬರಪೀಡಿತ ಜಿಲ್ಲೆ ಎಂದು ಕಲಬುರಗಿಯನ್ನು ಘೋಷಣೆ ಮಾಡಿದೆ. ಆದರೆ ತೊಗರಿ ಬೆಳೆ ನಷ್ಟದ ಕುರಿತು ಸರಿಯಾಗಿ ಸಮೀಕ್ಷೆ ನಡೆಸಿಲ್ಲ ಎಂದು ರೈತರು ಆರೋಪ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸುಮಾರು 1.94 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಕೃಷಿ ಇಲಾಖೆಯ ಪ್ರಾಥಮಿಕ ಸಮೀಕ್ಷೆಯಂತೆ ಮುಂಗಾರು ಹಂಗಾಮಿನಲ್ಲಿ ಒಟ್ಟು 2.76 ಲಕ್ಷ ಹೆಕ್ಟೇರ್ ಬೆಳೆ ಹಾನಿ ಕಂಡು ಬಂದಿದೆ ಎಂದು ಅಂದಾಜಿಸಲಾಗಿತ್ತು. ಜಿಲ್ಲೆಯಲ್ಲಿ ತೊಗರಿ ಮಾತ್ರವಲ್ಲ ಹತ್ತಿ, ಸೋಯಾ ಬಿನ್ ಬೆಳೆ ಸಹ ನಷ್ಟವಾಗಿದೆ. ಬೆಳೆ ನಷ್ಟದ ಕಾರಣ ತೊಗರಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ.











Click it and Unblock the Notifications