ರೈತರೇ ಗಮನಿಸಿ; ತುಂಗಾ ಮತ್ತು ಭದ್ರಾ ನದಿಗೆ ನೀರು ಬಿಡುಗಡೆ ಮಾಹಿತಿ
ಬಳ್ಳಾರಿ, ಡಿಸೆಂಬರ್ 29; ರೈತರೇ ಗಮನಿಸಿ ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುವ ಕುರಿತು ಮತ್ತು ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡುವ ಕುರಿತು ಪ್ರಕಟಣೆಯನ್ನು ಹೊರಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27ರಿಂದ ಡಿಸೆಂಬರ್ 30ರವರೆಗೆ 0.20 ಟಿಎಂಸಿಯಷ್ಟು ನೀರನ್ನು ನದಿಗೆ ಬಿಡಲಾಗುತ್ತದೆ.

ಆದ್ದರಿಂದ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ ಹತ್ತಿರ ಓಡಾಡಬಾರದು. ಜಾನುವಾರುಗಳನ್ನು ಸಹ ನದಿಯ ಹತ್ತಿರ ಓಡಾಡದಂತೆ ಮುಂಜಾಗ್ರತೆ ವಹಿಸಲು ಮನವಿ ಮಾಡಲಾಗಿದೆ.
ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ನಿರ್ದೇಶನದಂತೆ ನದಿಗೆ ನೀರು ಬಿಡಲಾಗುತ್ತಿದೆ.
ನದಿಗೆ ನೀರುವ ಬಿಡುಗಡೆ ಮಾಡುವ ಕುರಿತು ಅಧೀಕ್ಷಕ ಅಭಿಯಂತರರು, ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ, ಮುನಿರಾಬಾದ್ ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಲ್. ಬಸವರಾಜ್ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಭದ್ರಾ ಮೇಲ್ದಂಡೆ ಕಾಲುವೆಗೆ ನೀರು; ಡಿಸೆಂಬರ್ 29ರಿಂದ ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ವಿಶ್ವೇಶ್ವರಯ್ಯ ಜಲ ನಿಗಮದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ, ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ.
ಸರ್ಕಾರದ ನಿರ್ದೇಶನದಂತೆ ಡಿಸೆಂಬರ್ 29ರಂದು ಶಾಂತಿಪುರ ಪಂಪ್ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮುಖಾಂತರ ನೀರನ್ನು ಹರಿಸಲಾಗುತ್ತದೆ.
ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಈ ಸೂಚನೆಗಳನ್ನು ಉಲ್ಲಂಘಿಸುವುದು ನಿಗಮದ ಆಸ್ತಿಯಾದ ನೀರಾವರಿ ಕಾಲುವೆ ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂರು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ.












Click it and Unblock the Notifications