ಪಡಿತರ: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ಬೆಂಗಳೂರು ಅಕ್ಟೋಬರ್ 07: ಕರ್ನಾಟಕ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಸತತ ಎರಡನೇ ವರ್ಷಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕುಚಲಕ್ಕಿ ಹೆಚ್ಚು ಬಳಕೆಯಲ್ಲಿದೆ. ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಎಂಒಫೋರ್, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (ಎಂಎಸ್ಪಿ) ಖರೀದಿ ಮಾಡಲಾಗಿದೆ. ಅದನ್ನು ಪಡಿತರದ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ವಿತರಿಸಲು ಕೇಂದ್ರ ಸರಕಾರ ಇದೀಗ ಎರಡನೇ ವರ್ಷಕ್ಕೂ ಅನುಮೋದನೆ ನೀಡಿದೆ. ಈ ಮೊದಲು ಒಮ್ಮೆ ಕೇಂದ್ರ ವಿತರಣೆಗೆ ಅನುಮತಿ ನೀಡಿತ್ತು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ಮತ್ತು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಈಡೇರಿದ ಕರಾವಳಿ ಭಾಗದ ಬೇಡಿಕೆ
ಈ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರದ ಸದರಿ ಇಲಾಖೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಕೋರಲಾಗಿತ್ತು. ಮನವಿಯಂತೆ ಸಚಿವ ಪಿಯೂಷ್ ಗೋಯಲ್ ಅವರು ಕುಚ್ಚಲಕ್ಕಿ ಪ್ರಭೇಧಗಳನ್ನು ಬೆಳೆಯುವ ರಾಜ್ಯದ ಜಿಲ್ಲೆಗಳಿಂದ ಕನಿಷ್ಠ ಬೆಂಬಲ ಬೆಲೆಯಡಿ ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಕೇಂದ್ರದ ಈ ಅನುಮತಿಯೊಂದಿಗೆ ಕರ್ನಾಟಕ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗಿದೆ. ಇದರಿಂದ ಭವಿಷ್ಯ ದಿನಗಳಲ್ಲಿ ಹೆಚ್ಚೆಚ್ಚು ಕುಚ್ಚಲಕ್ಕಿ ಬೆಳೆಯಲಿದ್ದಾರೆ. ಅದಲ್ಲದೇ, ಕುಚ್ಚಲಕ್ಕಿಯನ್ನೇ ಹೆಚ್ಚಾಗಿ ಸೇವಿಸುವ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಾರ್ವಜನಿಕರ ಮನವಿಯಾಗಿದ್ದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆ ಸಹ ಈಡೇರಿದಂತಾಗಿದೆ. ಇದರಿಂದ ರೈತರ ಆರ್ಥಿಕತೆ ಸಹ ಸುಧಾರಿಸುತ್ತದೆ.

ಕರಾವಳಿ ಭಾಗದ ರೈತರು ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆ ಈಡೇರಿಸಿದ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ರಾಜ್ಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೆಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ಕುಚ್ಚಲಕ್ಕಿ ವಿತರಣೆಗೆ ನೀಡಿದ ಅನುಮೋದನೆಯ ಪ್ರಯೋಜನವನ್ನು ಈ ಭಾಗದ ಜಿಲ್ಲೆಗಳ ರೈತರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಅಕ್ಕಿಯ ದೇಶೀಯ ಬೆಲೆಗಳು ಹೆಚ್ಚುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿವೆ. ಕಳೆದ ವರ್ಷದ ಅನುಗುಣವಾದ ಅವಧಿಗೆ ಹೋಲಿಸಿದರೆ ಸುಮಾರು 6 ಮಿಲಿಯನ್ ಟನ್ ಭತ್ತದ ಉತ್ಪಾದನೆ ಕಡಿಮೆಯಾಗಿರುವ ಮುನ್ಸೂಚನೆ ಮತ್ತು ಬಾಸ್ಮತಿ ಅಲ್ಲದ ಅಕ್ಕಿಯ ರಫ್ತಿನಲ್ಲಿ ಶೇಕಡಾ 11ರಷ್ಟು ಹೆಚ್ಚಳವಾಗಿರುವುದೇ ಈ ದರ ಏರಿಕೆಗೆ ಕಾರಣವಾಗಿರಬಹುದು," ಎಂದು ಆಹಾರ ಸಚಿವಾಲಯ ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಅದರ ಪ್ರಕಾರ, "ಅಕ್ಕಿಯ ಚಿಲ್ಲರೆ ದರವು ವಾರದಲ್ಲಿ ಶೇ.0.24, ಒಂದು ತಿಂಗಳಿನಲ್ಲಿ ಶೇ.2.46 ಮತ್ತು ಸೆಪ್ಟೆಂಬರ್ 19ಕ್ಕೆ ವರ್ಷದಲ್ಲಿ ಶೇಕಡಾ 8.67 ರಷ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತಿದೆ. ಐದು ವರ್ಷಗಳ ಸರಾಸರಿಯಲ್ಲಿ ಶೇಕಡಾ 15.14 ರಷ್ಟು ಹೆಚ್ಚಳವಾಗಿದೆ," ಎಂಬುದು ತಿಳಿದು ಬಂದಿದೆ.












Click it and Unblock the Notifications